Kannada NewsKarnataka NewsLatest

ಕಂದಾಯ ದಾಖಲೆ ಮನೆಬಾಗಿಲಿಗೆ; ಇದು ಉಚಿತ ಯೋಜನೆ, ಹಣ ಕೊಡಬೇಡಿ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ : ರೈತರಿಗೆ, ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸಲಾಗುವದು ಎಂದು ಜಿಲ್ಲಾ ಉಸ್ತುವಾರಿ ಸಚಿವರಾದ ಗೋವಿಂದ ಕಾರಜೋಳ ತಿಳಿಸಿದರು.
ಬೆಳಗಾವಿ ತಾಲ್ಲೂಕಿನ ಧಾಮಣೆ ಗ್ರಾಮದಲ್ಲಿ ಶನಿವಾರ (ಮಾ.12) ನಡೆದ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರ್ಕಾರವು ಕಂದಾಯ ಇಲಾಖೆಯ ವತಿಯಿಂದ ಸಾರ್ವಜನಿಕರಿಗೆ ನೀಡುತ್ತಿರುವ ಮೂಲ ದಾಖಲೆಗಳಾದ ಪಹಣಿ, ಅಟ್ಲಾಸ್,ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ರೈತರ ಮನೆ ಬಾಗಿಲಿಗೆ ಉಚಿತವಾಗಿ ತಲುಪಿಸುವ “ಕಂದಾಯ ದಾಖಲೆ ಮನೆ ಬಾಗಿಲಿಗೆ” ಯೋಜನೆಯನ್ನು ರಾಜ್ಯಾದ್ಯಂತ ಅನುಷ್ಠಾನಗೊಳಿಸಲಾಗಿದೆ ಎಂದು ತಿಳಿಸಿದರು.
ಕಂದಾಯ ಇಲಾಖೆಯ ಅತ್ಯಂತ ಮಹತ್ವದ  ಯೋಜನೆ ಇದಾಗಿದ್ದು, ರೈತರಿಗೆ ಸಾರ್ವಜನಿಕರಿಗೆ ದಾಖಲೆಗಳನ್ನು ಪಡೆಯಲು ಯಾವುದೇ ರೀತಿಯ ತೊಂದರೆಯಾಗಬಾರದು. ಕಂದಾಯ ಇಲಾಖೆಯಿಂದಲೆ ರೈತರ ಮನೆ ಮನೆಗಳಿಗೆ ಪಹಣಿ, ಆದಾಯ ಪ್ರಮಾಣ ಪತ್ರ ಸೇರಿದಂತೆ ಇನ್ನಿತರ ಕಂದಾಯ ದಾಖಲೆಗಳನ್ನು  ತಲುಪಿಸಲಾಗುವುದು.
ರಾಜ್ಯದ ಎಲ್ಲಾ ಜಿಲ್ಲೆಯಲ್ಲಿ ಈ ಯೋಜನೆಗೆ ಚಾಲನೆ ನೀಡಲಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ 6,91,673 ರೈತರ ಕುಟುಂಬಗಳಿಗೆ 11,87,264 ಅವರ ಜಮೀನಿನ ಪಹಣಿ ಪತ್ರಿಕೆಗಳನ್ನು ಹಾಗೂ 13,67,563 ಜಾತಿ ಮತ್ತು ಆದಾಯ ಪ್ರಮಾಣ ಪತ್ರಗಳನ್ನು ಹಾಗೂ 94,485 ಅಟ್ಲಾಸಗಳನ್ನು ರೈತರ ಮನೆ ಬಾಗಿಲಿಗೆ ಹೋಗಿ ದಾಖಲೆಗಳನ್ನು ಕೊಡಲಾಗುವುದು ಎಂದು ಹೇಳಿದರು.
ದಾಖಲೆಗಳು ಮುದ್ರಣವಾಗದೇ ರೈತರಿಗೆ ದಾಖಲೆಗಳನ್ನು  ತಲುಪಿಸಲು ಸಾಧ್ಯವಾಗದೇ ಇದ್ದಲ್ಲಿ, ಅಂತಹ ರೈತರಿಗೆ  ಮಾರ್ಚ್ 21  ರಿಂದ ಮಾರ್ಚ 26 ರ ವರೆಗೆ ಒಂದು ವಾರ ನಾಡಕಚೇರಿಯಲ್ಲಿ ಉಚಿತವಾಗಿ ದಾಖಲೆಗಳನ್ನು ವಿತರಿಸಲಾಗುವುದು ಎಂದು ತಿಳಿಸಿದರು.
ಕಂದಾಯ ಇಲಾಖೆಯ ಮಹತ್ವದ ಯೋಜನೆ:
ಗ್ರಾಮೀಣ ಮನೆಗಳ ಬಾಗಿಲಿಗೆ ಪಹಣಿ, ಆದಾಯ ಮತ್ತು ಜಾತಿ ಪ್ರಮಾಣ ಪತ್ರಗಳನ್ನು ಸೇರಿದಂತೆ ಅವಶ್ಯ ಕಂದಾಯ ದಾಖಲೆಗಳನ್ನು ತಲುಪಿಸುವ ಜನಪರ ಮಹತ್ವದ ಯೋಜನೆ ಇದಾಗಿದೆ ಎಂದು ಬೆಳಗಾವಿ ದಕ್ಷಿಣ ಭಾಗದ ಶಾಸಕ ಅಭಯ ಪಾಟೀಲ ತಿಳಿಸಿದರು.
ಸೇವಾ ಕೇಂದ್ರಗಳು, ಗ್ರಾಮ ಲೆಕ್ಕಾಧಿಕಾರಿ, ಕಂದಾಯ ನಿರೀಕ್ಷಕರು, ತಹಶೀಲ್ದಾರ್ ಸೇರಿದಂತೆ ಎಲ್ಲಿಯೂ ಸಾರ್ವಜನಿಕರು ದಾಖಲೆಗಳನ್ನು ಪಡೆಯಲು ಅಲೆದಾಡುವ ಅವಶ್ಯಕತೆ ಇರುವುದಿಲ್ಲ. ಬದಲಿಗೆ ಕಂದಾಯ ಇಲಾಖೆಯ ಈ ಯೋಜನೆ ಮೂಲಕ ರೈತರ ಮನೆಗೆ ದಾಖಲೆಗಳನ್ನು ನೀಡಲಾಗುವದು.
ಈ ಯೋಜನೆಗೆ ರೈತರು, ಸಾರ್ವಜನಿಕರು ಯಾವುದೇ  ಹಣ ಪಾವತಿಸುವ ಅವಶ್ಯಕತೆ ಇರುವುದಿಲ್ಲ, ಗ್ರಾಮೀಣ ಭಾಗದ ಜನರಿಗೆ ದಾಖಲೆಗಳನ್ನು ಪಡೆಯಲು ಕಚೇರಿಗಳಿಗೆ ಅಲೆದಾಡುವ ಸಮಸ್ಯೆಗೆ ಪರಿಹಾರವಾಗಿ ಈ ಯೋಜನೆ ಜಾರಿಗೆ ತರಲಾಗಿದೆ ಎಂದು ಶಾಸಕ ಅಭಯ ಪಾಟೀಲ ತಿಳಿಸಿದರು.
ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ತಹಸಿಲ್ದಾರ್ ಆರ್.ಕೆ ಕುಲಕರ್ಣಿ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಮನೆಗಳಿಗೆ ತೆರಳಿ ದಾಖಲೆಗಳನ್ನು ವಿತರಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ:
ಸಚಿವ ಗೋವಿಂದ ಕಾರಜೋಳ, ಶಾಸಕ ಅಭಯ ಪಾಟೀಲ, ಜಿಲ್ಲಾಧಿಕಾರಿ ಎಂ.ಜಿ ಹಿರೇಮಠ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ  ಧಾಮಣೆ ಗ್ರಾಮದ ಮನೆಗಳಿಗೆ ಭೇಟಿ ನೀಡಿ, ಪಹಣಿ, ಆದಾಯ ಹಾಗೂ ಜಾತಿ ಪ್ರಮಾಣ ಪತ್ರಗಳನ್ನು ವಿತರಣೆ ಮಾಡಿ “ಕಂದಾಯ ದಾಖಲೆ ಮನೆಬಾಗಿಲಿಗೆ” ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button