*ಗ್ರಾಮೀಣ ಗ್ರಂಥಾಲಯಗಳು ಮಾದರಿ ಕೇಂದ್ರಗಳಾಗಬೇಕು: ಜಿ.ಪಂ ಸಿಇಓ ರಾಹುಲ್ ಶಿಂಧೆ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಜಿಲ್ಲೆಯಲ್ಲಿ ಯುವಕರು ಯುಪಿಎಸ್.ಸಿ ಪರೀಕ್ಷೆಗಳನ್ನು ಪಾಸ್ ಆಗುವ ಮೂಲಕ ಸಾಧನೆ ಮಾಡಿದ್ದಾರೆ. ಗ್ರಂಥಾಲಯಗಳಲ್ಲಿ ಚರಿತ್ರೆ, ಸಾಮಾಜಿಕ, ಕಥೆ, ಕಾದಂಬರಿಗಳ ಪುಸ್ತಕಗಳ ಜೊತೆಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅನುಕೂಲವಾಗುವ ನಿಟ್ಟಿನಲ್ಲಿ ಗ್ರಂಥಾಲಯಗಳಲ್ಲಿ ವಿವಿಧ ಸ್ಪರ್ಧೆಗಳಿಗೆ ತಯಾರಿ ನಡೆಸುತ್ತಿರುವ ಅಭ್ಯರ್ಥಿಗಳಿಗೆ ಪುಸ್ತಕಗಳು ಸಹಕಾರಿಯಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕಾಧಿಕಾರಿ ರಾಹುಲ್ ಶಿಂಧೆ ಅವರು ತಿಳಿಸಿದರು.
ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಗುರುವಾರ (ಮೇ.08) ನಡೆದ ಗ್ರಾಮ ಪಂಚಾಯತ್ ಗ್ರಂಥಪಾಲಕರು/ ಮೇಲ್ವಿಚಾರಕರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾಹಿತಿ ಸಂಗ್ರಹಣೆಗೆ ಸಹಾಯ ಮಾಡುವುದೇ ಗ್ರಂಥಾಲಯದ ಮೂಲ ಕರ್ತವ್ಯ. ಮಾಹಿತಿ-ತಂತ್ರಜ್ಞಾನದ ಪ್ರಭಾವದಿಂದ ಗ್ರಂಥಾಲಯವು ತನ್ನ ಸೇವೆ ಹಾಗೂ ಕಾರ್ಯಕ್ಷಮತೆಯಲ್ಲಿ ಹೆಚ್ಚಿಕೊಳ್ಳುವ ನಿಟ್ಟಿನಲ್ಲಿ ಎಲ್ಲರೂ ಕಾರ್ಯ ನಿರ್ವಹಿಸಬೇಕು ಎಂದು ಹೇಳಿದರು.
ಗ್ರಂಥಾಲಯದ ಮಾಹಿತಿ ವಿಸ್ತರಣೆಯು ಕಲಿಕೆಗೆ ಅಭಿರುಚಿಗೆ, ಚಿಂತನಶೀಲತೆ, ತಂತ್ರಗಾರಿಕೆ, ಯೋಜನಾಅಧ್ಯಯನ, ಬೌದ್ಧಿಕ ಸಾಮರ್ಥ್ಯ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಬೇಕಾದ ಅನುಕೂಲವಾಗುವ ಮಾಹಿತಿಯನ್ನು ಪೂರೈಸುವಂತಾಗಬೇಕು ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಕಾಧಿಕಾರಿ ರಾಹುಲ್ ಶಿಂಧೆ ಹೇಳಿದರು.
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬರುವ ಸಾರ್ವಜನಿಕ ಗ್ರಂಥಾಲಯಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ಗ್ರಂಥಾಪಾಲಕರ ವೇತನ ಪಾವತಿಗೆ ಕಡ್ಡಾಯವಾಗಿ ಬಯೋಮೆಟ್ರಿಕ್ ಅನ್ವಯವಾಗಲಿದೆ. ಬಯೋಮೆಟ್ರಿಕ್ ಹಾಜರಾತಿ ವರದಿಯ ಆಧಾರಿತ ವೇತನ ಪಾವತಿ ಮಾಡಲಾಗುವುದು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರು ತಿಳಿಸಿದರು.
ಗ್ರಂಥಪಾಲಕರು ಗ್ರಂಥಾಲಯದ ವೇಳೆಯಲ್ಲಿ ಕಡ್ಡಾಯವಾಗಿ ಹಾಜರಿರಬೇಕು. ಗ್ರಂಥಾಲಯಕ್ಕೆ ಬರುವ ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಅನಾನುಕೂಲವಾಗದಂತೆ ನೋಡಿಕೊಳ್ಳಬೇಕು. ಸರ್ಕಾರದ ನಿರ್ದೇಶನದಂತೆ ಎಲ್ಲ ಗ್ರಾಮ ಪಂಚಾಯತಿ ಸಿಬ್ಬಂದಿಗಳಿಗೆ ಹಾಗೂ ಗ್ರಂಥ ಪಾಲಕರಿಗೆ ಬಯೋಮೆಟ್ರಿಕ್ ಕಡ್ಡಾಯವಾಗಿರುತ್ತದೆ ಎಂದು ತಿಳಿಸಿದರು.
ಗ್ರಂಥಾಲಯದ ಸ್ವಚ್ಚತೆ, ಬುಕ್ಸ್ ಸ್ಟಾಕ್ ಸಂಗ್ರಹಣೆ ವ್ಯವಸ್ಥೆ ಅಚ್ಚುಕಟ್ಟಾಗಿರಬೇಕು. ಅಲ್ಲಿ ಓದಿದ ವಿದ್ಯಾರ್ಥಿಗಳು ಉನ್ನತ ಅಧಿಕಾರಿಗಳಾಗಿ, ಜನಪ್ರತಿನಿಧಿಯಾಗಿ ಉದಾರಣೆ ನೀಡುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಗ್ರಂಥಪಾಲಕರು ಗ್ರಂಥಾಲಯವನ್ನು ಸೂಕ್ತ ರೀತಿಯಲ್ಲಿ ನಿರ್ವಹಣೆ ಮಾಡಬೇಕು ಎಂದು ಜಿ.ಪಂ ಉಪ ಕಾರ್ಯದರ್ಶಿ ಬಸವರಾಜ ಹೆಗ್ಗನಾಯಕ ಅವರು ಸಲಹೆ ನೀಡಿದರು.
ಸಭೆಯಲ್ಲಿ ಎಲ್ಲ ಗ್ರಾಮ ಪಂಚಾಯತಿ ಗ್ರಂಥಪಾಲಕರು/ಮೇಲ್ವಿಚಾರಕರು ಉಪಸ್ಥಿತರಿದ್ದರು.