Kannada NewsKarnataka NewsLatestPolitics
*ಲೋಕಾಯುಕ್ತದಲ್ಲಿ FIR: ಡಿ.ಕೆ. ಶಿವಕುಮಾರ್ ಮೊದಲ ಪ್ರತಿಕ್ರಿಯೆ*

ಪ್ರಗತಿವಾಹಿನಿ ಸುದ್ದಿ: ಅಕ್ರಮ ಆಸ್ತಿ ಸಂಪಾದನೆ ಆರೋಪ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಎಫ್ಐಆರ್ ದಾಖಲಿಸಿದ್ದು, ನಾನು ಕಾನೂನು ಹೋರಾಟ ಮುಂದುವರಿಸುತ್ತೇನೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಸಿಎಂ, ನಾನು ಯಾವುದೇ ತಪ್ಪು ಮಾಡಿಲ್ಲ. ನನ್ನ ಪ್ರಕರಣವನ್ನು ಸಿಬಿಐಗೆ ನೀಡಲು ಆಗುವುದಿಲ್ಲ ಎಂದು ಅಂದಿನ ಅಡ್ವೊಕೇಟ್ ಜನರಲ್ ಹೇಳಿದ್ದರು. ಅದರ ದಾಖಲೆಯನ್ನು ನಾನು ಮಾಹಿತಿ ಹಕ್ಕು ಮೂಲಕ ಪಡೆದಿದ್ದೇನೆ. ಯಡಿಯೂರಪ್ಪನವರ ಸರ್ಕಾರ ಸಿಬಿಐ ತನಿಖೆಗೆ ನೀಡಿದ್ದು ತಪ್ಪು. ಹೀಗಾಗಿ ನಮ್ಮ ಸರ್ಕಾರ ಅನುಮತಿ ಹಿಂಪಡೆದು ಲೋಕಾಯುಕ್ತಕ್ಕೆ ನೀಡಿದೆ ಎಂದರು.
ಅನುಮತಿ ಹಿಂಪಡೆದರೂ ನೋಟೀಸ್:
ಸರ್ಕಾರ ನನ್ನ ವಿರುದ್ಧದ ತನಿಖೆಯ ಅನುಮತಿ ಹಿಂಪಡೆದ ನಂತರವೂ ಸಿಬಿಐನವರು ನನ್ನ ಸಂಸ್ಥೆಗಳು ಹಾಗೂ ನನ್ನ ಜತೆ ವ್ಯವಹಾರ ಮಾಡಿರುವವರಿಗೆ ನೂರಾರು ನೋಟೀಸ್ ನೀಡುತ್ತಿದ್ದಾರೆ. ಯಾಕೆ ನೊಟೀಸ್ ನೀಡುತ್ತಿದ್ದಾರೋ ಗೊತ್ತಿಲ್ಲ ಎಂದರು.




