*ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಅಸಮಾಧಾನವಿಲ್ಲ: ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟನೆ*

ಪ್ರಗತಿವಾಹಿನಿ ಸುದ್ದಿ: ನಾಯಕತ್ವ ಬದಲಾವಣೆ ವಿಚಾರವಾಗಿ ಸದ್ಯಕ್ಕೆ ಯಾವುದೇ ಚರ್ಚೆಯಿಲ್ಲ ಎಂದಿರುವ ಸಚಿವ ಸತೀಶ್ ಜಾರಕಿಹೊಳಿ, ಡಿಸಿಎಂ ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಅಸಮಾಧಾನ, ಕೋಪವೂ ಇಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ರಾಜ್ಯದಲ್ಲಿ ಸಿಎಂ ಬದಲಾವಣೆ ಬಗ್ಗೆ ಸದ್ಯಕ್ಕೆ ಯಾವುದೇ ಚರ್ಚೆಯಿಲ್ಲ. ನಮ್ಮ ಹೈಕಮಾಂಡ್ ಸಿದ್ದರಾಮಯ್ಯನವರಿಗೆ ಅವಕಾಶ ನೀಡಿದೆ ಎಂದರು.
ನಾವು ಪಕ್ಷದ ಜೊತೆ ಇದ್ದೇವೆ. ಎಲ್ಲಕ್ಕಿಂತ ಮೊದಲು ಪಕ್ಷ ಮುಖ್ಯ. ಪಕ್ಷದ ನಿರ್ಧಾರಕ್ಕೆ ನಾವು ಬದ್ಧ. ಪಕ್ಷ ಯಾವ ಜವಾಬ್ದಾರಿ ಕೊಡುತ್ತದೆಯೋ ಅದನ್ನು ನಾವು ಸಮರ್ಥವಾಗಿ ನಿಭಾಯಿಸುತ್ತೇವೆ. ಯಾವುದೇ ಪಕ್ಷದಲ್ಲಿ ಪಕ್ಷದ ಒಳಗಡೆ ಲೀಡರ್ ಶಿಪ್ ಇದ್ದೇ ಇರುತ್ತದೆ. ಹಾಗೇ ನಾವು ಸಿದ್ದರಾಮಯ್ಯನವರ ಜೊತೆ ಗುರುತಿಸಿಕೊಂಡಿದ್ದೇವೆ. ಹಾಗಂತ ಡಿ.ಕೆ.ಶಿವಕುಮಾರ್ ಜೊತೆ ಯಾವುದೇ ಕೋಪ, ಅಸಮಾಧವಿಲ್ಲ. ಕೋಪವಿದ್ದರೆ ಎಂಎಲ್ ಸಿ ಚುನಾವಣೆ, ಡಿಸಿಸಿ ಬ್ಯಾಂಕ್ ಚುನಾವಣೆ ಮಾಡುತ್ತಿರಲಿಲ್ಲ. ಕೋಪವಿದ್ದರೂ ಅದು ತಾತ್ಕಾಲಿಕ ಅಷ್ಟೇ ಎಂದು ಈಗಾಗಲೇ ಹಲವು ಬಾರಿ ಹೇಳಿದ್ದೇನೆ ಎಂದರು.
ನಮ್ಮ ಜಿಲ್ಲೆಯಲ್ಲಿಯೂ ಯಾವುದೇ ಬಿನ್ನಾಭಿಪ್ರಾಯವಿಲ್ಲ. ಒಗ್ಗಟ್ಟಾಗಿ ಪಕ್ಷದ ಪರವಾಗಿ ಎಲ್ಲರೂ ಕೆಲಸ ಮಾಡುತ್ತೇವೆ ಎಂಬುದನ್ನು ಈಗಾಗಲೇ ನಾವು ತೋರಿಸಿಕೊಟ್ಟಿದ್ದೇವೆ. ಅದು ಮುಂದುವರೆಯುತ್ತದೆ ಎಂದು ಹೇಳಿದರು.

