Kannada NewsKarnataka NewsLatestPolitics

*ಸರ್ವರಿಗೂ ಸಮಪಾಲು-ಸಮಬಾಳು ನೀಡಿದ ಬಜೆಟ್‌: ಸಚಿವ ಸತೀಶ್‌ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ: ದೇಶದ ಇತಿಹಾಸದಲ್ಲೇ ದಾಖಲೆಯ 15ನೇ ಬಜೆಟ್ ಮಂಡಿಸಿರುವ ಸಿಎಂ ಸಿದ್ದರಾಮಯ್ಯ ಅವರು, ಜನಪರ ಐದು ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವ ಜತೆಗೆ, ಬಜೆಟ್‌ನಲ್ಲಿ ಹೊಸ ಯೋಜನೆಗಳನ್ನು ನೀಡುವ ಮೂಲಕ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ನೀಡಿದ್ದಾರೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ತಿಳಿಸಿದ್ದಾರೆ.

ಸಿಎಂ ಸಿದ್ದರಾಮಯ್ಯ ಮಂಡಿಸಿರುವ ಬಜೆಟ್‌ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿದ ಅವರು, ಸಂವಿಧಾನ ಶಿಲ್ಪಿ ಡಾ. ಬಾಬಾ ಸಾಹೇಬ್‌ ಅಂಬೇಡ್ಕರ್ ಅವರ ಆಶಯದಂತೆ ಶಿಕ್ಷಣ ಕ್ಷೇತ್ರಕ್ಕೆ ಹಿಂದಿನ ಅವಧಿಗಿಂತ ದುಪ್ಪಟ್ಟು ಹಣ ನೀಡಿರುವ ಕ್ರಮ ಅಭೂತಪೂರ್ವ ನಿರ್ಧಾರವಾಗಿದೆ. ಇನ್ನು ಸಮಾಜ ಕಲ್ಯಾಣ, ಲೋಕೋಪಯೋಗಿ ಇಲಾಖೆ, ಗ್ರಾಮೀಣಾಭಿವೃದ್ಧಿ ಕ್ಷೇತ್ರಗಳಿಗೆ ಹೆಚ್ಚಿನ ಅನುದಾನ ಮೀಸಲಿಟ್ಟಿರುವುದು ಅಭಿನಂದನಾರ್ಹ.
ಬಸವಣ್ಣನನ್ನು ಸಾಂಸ್ಕೃತಿಕ ನಾಯಕ ಎಂದು ಘೋಷಿಸಿ, ಬಸವಣ್ಣ ಜನಿಸಿದ ಬಸವನ ಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ವಚನ ಪ್ರಚಾರ ಕಾರ್ಯ ಸರ್ಕಾರದ ಬಸವಣ್ಣನ ವಿಚಾರಗಳೆಡೆಗೆ ಇರುವ ಬದ್ಧತೆಯನ್ನು ಪ್ರದರ್ಶಿಸಿದೆ. ಜೊತೆಗೆ ಇ-ಆಡಳಿತ, ಆಡಳಿತ ಸುಧಾರಣೆ, ವೇತನ ಪರಿಷ್ಕರಣೆ, ಕಲೆ, ಸಾಹಿತ್ಯ, ಸಂಸ್ಕೃತಿ, ಕ್ರೀಡಾ ಕ್ಷೇತ್ರಗಳ ಹೆಚ್ಚಿನ ಉತ್ತೇಜನಕ್ಕೆ ನೀಡಲಾಗಿದೆ. ನಾರಾಯಣ ಗುರು, ಪೆರಿಯಾರ್ ರಾಮಸ್ವಾಮಿ, ರಾಮಮನೋಹರ ಲೋಹಿಯಾ, ಬಾಬು ಜಗಜೀವನ್ ರಾಮ್ ಅವರ ಕೃತಿಗಳ ಕನ್ನಡ ಅನುವಾದಗಳನ್ನು ಮಾಡಲು ಉದ್ದೇಶಿಸಿರುವುದು ಕನ್ನಡಿಗರನ್ನು ಸೈದ್ಧಾಂತಿಕವಾಗಿ ಗಟ್ಟಿಗೊಳಿಸುವ ಪ್ರಯತ್ನವಾಗಿದೆ ಎಂದು ತಿಳಿಸಿದ್ದಾರೆ.

ನಾಮಫಲಕಗಳಲ್ಲಿ ಶೇ. 60ರಷ್ಟು ಕನ್ನಡ ಬಳಕೆಯನ್ನು ಕಡ್ಡಾಯಗೊಳಿಸಲು ಸರ್ಕಾರ ಮುಂದಾಗಿದ್ದು, ಬಜೆಟ್ ನಲ್ಲಿ ಇದನ್ನು ಉಲ್ಲೇಖಿಸಿ, ಅಗತ್ಯ ಕ್ರಮಕೈಗೊಂಡಿರುವುದು ಕನ್ನಡದ ಅಭಿವೃದ್ಧಿಯೆಡೆಗೆ ಕಾಂಗ್ರೆಸ್ ಸರ್ಕಾರದ ಬದ್ಧತೆಯ ಪ್ರತೀಕವಾಗಿದೆ. ಗ್ರಾಮೀಣ ಪತ್ರಕರ್ತರಿಗೆ ಉಚಿತ ಪಾಸ್ ಸೇರಿದಂತೆ ವಿವಿಧ ಯೋಜನೆಗಳನ್ನು ನೀಡುವ ಮೂಲಕ ಪತ್ರಕರ್ತರ ಕ್ಷೇಮಾಭಿವೃದ್ಧಿಗೆ ಸರ್ಕಾರ ಪ್ರಮುಖ ನಿರ್ಧಾರಗಳನ್ನು ತೆಗೆದುಕೊಂಡಿದೆ ಎಂದಿದ್ದಾರೆ.

ವಿಶೇಷವಾಗಿ ಬೆಳಗಾವಿ ನಗರಕ್ಕೆ 450 ಕೋಟಿ ವೆಚ್ಚದ 4.5 ಕಿ.ಮೀ. ಉದ್ದದ ಮೇಲ್ಸೇತುವೆ, ಜವಳಿ ಪಾರ್ಕ್, ಆಧುನಿಕ ಕ್ರಿಟಿಕಲ್ ಕೇರ್ ಬ್ಲಾಕ್, ಸುಪ್ರಸಿದ್ಧ ಗೋಕಾಕ ಜಲಪಾತವನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿ ಸೇರಿದಂತೆ ಜಿಲ್ಲೆಯ ನೀರಾವರಿ ಯೋಜನೆಗಳು ಸೇರಿದಂತೆ ವಿವಿಧ ಯೋಜನೆಗಳನ್ನು ನೀಡಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರಕಟಣೆ ಮೂಲಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button