
ಪ್ರಗತಿವಾಹಿನಿ ಸುದ್ದಿ, ಉಡುಪಿ : ಹಿರಿಯ ರಾಜಕೀಯ ನಾಯಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಇಂದು ವಿಧಿವಶರಾಗಿದ್ದಾರೆ.
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಅವರನ್ನು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಇಂದು ನಿಧನರಾಗಿದ್ದಾರೆ.
ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. ತಾವು ಶಾಸಕರಾಗಿದ್ದ ಅವಧಿಯಲ್ಲಿ ಅನೇಕ ಅಭಿವೃದ್ಧಿ ಕಾರ್ಯಕ್ರಮಗಳನ್ನು ರೂಪಿಸಿದ್ದ ಹೆಗ್ಗಳಿಕೆಗೆ ಅಪ್ಪಣ್ಣ ಹೆಗ್ಡೆ ಪಾತ್ರರಾಗಿದ್ದಾರೆ.
1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಇವರು 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಸಾಮಾಜಿಕ ಕ್ಷೇತ್ರಗಳಲ್ಲೂ ತೊಡಗಿಸಿಕೊಂಡಿದ್ದ ಅವರು ತಾಲೂಕು ಕೋ ಅಪರೇಟಿವ್ ಮಾರಾಟ ಸೊಸೈಟಿ ಹಾಗೂ ಭೂ ಅಭಿವೃದ್ಧಿ ಬ್ಯಾಂಕ್ ಉಪಾಧ್ಯಕ್ಷರಾಗಿ, ಬಸ್ರೂರು ಸೇವಾ ಸಹಕಾರಿ ಸಂಘದ ಅಧ್ಯಕ್ಷರಾಗಿ, ಬಸ್ರೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಮುಖ್ಯಸ್ಥರಾಗಿ, ಕೊಲ್ಲೂರು ಮೂಕಾಂಬಿಕಾ ದೇವಳದ ಅಧ್ಯಕ್ಷರಾಗಿ ಕೂಡ ಸೇವೆ ಸಲ್ಲಿಸಿದ್ದಾರೆ.



