*ಬಿಜೆಪಿ ನಾಯಕರಿಗೆ ಎಚ್ಚರಿಕೆ ಕೊಟ್ಟ ಶಾಸಕ ಶಿವರಾಮ್ ಹೆಬ್ಬಾರ್*

ಪ್ರಗತಿವಾಹಿನಿ ಸುದ್ದಿ; ಕಾರವಾರ: ರಾಜ್ಯ ರಾಜಕಾರಣದಲ್ಲಿ ಆಪರೇಷನ್ ಹಸ್ತ ವಿಚಾರ ಭಾರಿ ಸಂಚಲನ ಸೃಷ್ಟಿಸುತ್ತಿದ್ದು, ಬಿಜೆಪಿಗೆ ಸೇರಿದ್ದ ಕಾಂಗ್ರೆಸ್ ನ ಐದಕ್ಕೂ ಹೆಚ್ಚು ಶಾಸಕರು ಮರಳಿ ಕಾಂಗ್ರೆಸ್ ನತ್ತ ಮುಖ ಮಾಡಲಿದ್ದಾರೆ ಎಂಬ ಮಾತು ಕೇಳಿಬರುತ್ತಿದೆ.
ಇದರ ಬೆನ್ನಲ್ಲೇ ಮಾಜಿ ಸಚಿವರಾದ ಎಸ್.ಟಿ.ಸೋಮಶೇಖರ್, ಶಿವರಾಮ್ ಹೆಬ್ಬಾರ್, ಎಂಟಿಬಿ ನಾಗರಾಜ್ ಸೇರಿದಂತೆ ಹಲವು ನಾಯಕರು ಬೆಂಬಲಿಗರೊಂದಿಗೆ ಸಭೆ ನಡೆಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಬಿಜೆಪಿ ಬಿಟ್ಟು ಕಾಂಗ್ರೆಸ್ ಗೆ ಮರಳುವ ವಿಚಾರವಾಗಿ ಪ್ರತಿಕ್ರಿಯಿಸಿರುವ ಶಾಸಕ ಶಿವರಾಮ್ ಹೆಬ್ಬಾರ್, ಬಿಜೆಪಿಯ ಕೆಲ ಮುಖಂಡರ ಮೇಲೆ ನನಗೆ ಅಸಮಾಧಾನವಿದೆ. ಚುನಾವಣೆ ಸಂದರ್ಭದಲ್ಲಿ ಅವರು ನಡೆದುಕೊಂಡ ರೀತಿ ಸರಿ ಅನಿಸಿಲ್ಲ. ನನ್ನ ಸೋಲನ್ನು ಸಂಭ್ರಮಿಸುವ ತಯಾರಿ ನಡೆಸಿದ್ದರು. ಯಾರೂ ಹಿಂದೆ ಸಪೋರ್ಟ್ ಇಲ್ಲದೆ ಈ ರೀತಿ ಮಾಡುವುದಿಲ್ಲ ಎಂದು ತೀಕ್ಷ್ಣವಾಗಿ ತಿಳಿಸಿದ್ದಾರೆ.
ಬಿಜೆಪಿಯ ಕೆಲ ಮುಖಂಡರ ಬಗ್ಗೆ ಬೇಸರವಿದೆ. ಕೆಲ ಮುಖಂಡರ ಪಟ್ಟಿಯನ್ನು ಕೊಟ್ಟಿದ್ದೇನೆ. ಅವರ ಮೇಲೆ ಕ್ರಮ ಆಗಬೇಕು. ಕ್ರಮವಾಗದಿದ್ದರೆ ಪಕ್ಷ ಅರಗಿಸಿಕೊಳ್ಳಲಾಗದ ನಿರ್ಧಾರ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.
ಇನ್ನು ಕಾಂಗ್ರೆಸ್ ಸೇರ್ಪಡೆ ಬಗ್ಗೆ ಇನ್ನೂ ಕಾಲ ನಿರ್ಣಯವಾಗಿಲ್ಲ ಎಂದು ತಿಳಿಸಿದ್ದಾರೆ.




