*ಹಿರೇಬಾಗೇವಾಡಿಯಲ್ಲಿ ಶ್ರಾವಣ ಮಾಸದ ವಿಶೇಷ ಪೂಜೆ: ಲಕ್ಷ್ಮೀ ಹೆಬ್ಬಾಳಕರ್ ಭಾಗಿ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ಶ್ರಾವಣ ಮಾಸದ ಪ್ರಯುಕ್ತ ಹಿರೇಬಾಗೇವಾಡಿಯ ಶ್ರೀ ಜಾಲಿಕರೆಮ್ಮಾ ದೇವಿಯ ದಿವ್ಯ ಸನ್ನಿಧಿಯಲ್ಲಿ ಹಮ್ಮಿಕೊಳ್ಳಲಾಗಿದ್ದ ವಿವಿಧ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಮಾಜಿ ಸಚಿವ, ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ಅವರು ಪಾಲ್ಗೊಂಡು ದೇವಿಯ ಕೃಪಾಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಮಹಾ ರುದ್ರಾಭಿಷೇಕ, ಕುಂಕುಮಾರ್ಚನೆ, ಮಹಾ ಮಂಗಳಾರತಿ ಹಾಗೂ ಮಹಾ ಅನ್ನಪ್ರಸಾದ ಕಾರ್ಯಕ್ರಮಗಳು ಭಕ್ತಿಭಾವದಿಂದ ನೆರವೇರಿದವು. ಬಳಿಕ ಸುತ್ತಮುತ್ತಲಿನ ಗ್ರಾಮಗಳ ಪೂಜ್ಯ ಶ್ರೀಗಳ ಪಾದಪೂಜೆಯಲ್ಲಿಯೂ ಲಕ್ಷ್ಮೀ ಹೆಬ್ಬಾಳಕರ್ ಅವರು ಭಾಗವಹಿಸಿ ಆಶೀರ್ವಾದ ಪಡೆದರು.
ಶ್ರಾವಣ ಮಾಸದ ಪವಿತ್ರ ಸಂದರ್ಭದಲ್ಲಿ ಶ್ರೀ ಜಾಲಿಕರೆಮ್ಮಾ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಲಕ್ಷ್ಮೀ ಹೆಬ್ಬಾಳಕರ್ ಅವರು, ನಾಡಿನ ಸಮಸ್ತ ಜನತೆಯ ಆಯುಷ್ಯ, ಆರೋಗ್ಯ, ಸುಖ-ಶಾಂತಿ ಹಾಗೂ ಸಮೃದ್ಧಿಗಾಗಿ ಪ್ರಾರ್ಥಿಸಿದರು.
ಜಗನ್ಮಾತೆ ಶ್ರೀ ಜಾಲಿಕರೆಮ್ಮಾ ದೇವಿಯ ಕೃಪೆಯಿಂದ ಪ್ರತಿಯೊಬ್ಬರ ಜೀವನದಲ್ಲಿ ನೆಮ್ಮದಿ, ಸಂತೋಷ ಮತ್ತು ಸಮೃದ್ಧಿ ನೆಲೆಸಲಿ ಎಂದು ಅವರು ಆಶಿಸಿದರು.
ಕಾರ್ಯಕ್ರಮದಲ್ಲಿ ಸುತ್ತಮುತ್ತಲಿನ ಗ್ರಾಮಗಳ ಭಕ್ತರು ಹಾಗೂ ಧಾರ್ಮಿಕ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡಿದ್ದರು.



