Belagavi NewsBelgaum NewsKannada NewsKarnataka NewsLatest

*ಉದ್ಯೋಗಾಂಕ್ಷಿಗಳಿಗೆ ಗುಡ್ ನ್ಯೂಸ್; ಬೆಳಗಾವಿ ಸೇರಿದಂತೆ 7 ಕಡೆ ಕೈಗಾರಿಕಾ ವಸಾಹತುಗಳ ಸ್ಥಾಪನೆ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಉದ್ಯೋಗಾಕಾಂಕ್ಷಿ ಯುವಜನತೆ ಉದ್ಯೋಗದಾತರಾಗುವಂತಾಗಬೇಕು ಎಂದು ಭಾರತರತ್ನ ಡಾ. ಎ.ಪಿ.ಜೆ. ಅಬ್ದುಲ್‌ ಕಲಾಂ ಹೇಳಿದ್ದರು. ನಿರುದ್ಯೋಗವೆನ್ನುವುದು ದೇಶದ ಯುವಜನತೆಯ ಆತ್ಮಸ್ಥೈರ್ಯವನ್ನೇ ಕುಂದಿಸುತ್ತಿದೆ. ಇದನ್ನು ನಿವಾರಿಸಲು ಬಂಡವಾಳ ಹೂಡಿಕೆಯನ್ನು ಹೆಚ್ಚಿಸುವ ಮೂಲಕ ಹೆಚ್ಚಿನ ಸಂಖ್ಯೆಯಲ್ಲಿ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಕೆಲಸ ಒಂದೆಡೆ ನಡೆಯಬೇಕು, ಮತ್ತೊಂದೆಡೆ ದೇಶದ ಯುವಜನರ ಔದ್ಯೋಗಿಕ ಕೌಶಲ್ಯವನ್ನು ವೃದ್ಧಿಪಡಿಸಬೇಕು. ಈ ನಿಟ್ಟಿನಲ್ಲಿ ನಮ್ಮ ಸರ್ಕಾರ ಕೈಗಾರಿಕೋದ್ಯಮವನ್ನು ಉತ್ತೇಜಿಸಲು ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಿದ್ಧವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

2023-24ನೇಸಾಲಿನ ಬಜೆಟ್ ಮಂಡನೆ ಮಾಡಿದ ಸಿಎಂ ಸಿದ್ದರಾಮಯ್ಯ, ಎಲೆಕ್ಟ್ರಾನಿಕ್ಸ್‌ ವಲಯದಲ್ಲಿ ಕರ್ನಾಟಕದ ಅಗ್ರಸ್ಥಾನವನ್ನು ಮುಂದುವರೆಸಲು ಪೂರಕವಾಗಿ ರಾಜ್ಯದಲ್ಲಿ ಸೆಮಿಕಂಡಕ್ಟರ್‌ ವಲಯದ ಅಭಿವೃದ್ಧಿಗೆ ಉತ್ತೇಜನ ನೀಡಲು ಬೆಂಗಳೂರಿನ ಕಾಡುಗೋಡಿಯಲ್ಲಿ 100 ಎಕರೆ ಪ್ರದೇಶದಲ್ಲಿ Technology Innovation Park ಅನ್ನು ಅಭಿವೃದ್ಧಿಪಡಿಸಲಾಗುವುದು. ಇದರಲ್ಲಿ ತಾಂತ್ರಿಕ ಸಂಶೋಧನಾ ಸಂಸ್ಥೆ ಸ್ಥಾಪನೆ ಜೊತೆಗೆ ಸೆಮಿಕಂಡಕ್ಟರ್‌ ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷೆ, ವಿನ್ಯಾಸ ಇತ್ಯಾದಿಗಳಿಗೆ ಸೇವೆ ಮತ್ತು ಸೌಲಭ್ಯಗಳನ್ನು ಒದಗಿಸಲಾಗುವುದು ಎಂದರು.

ಯಾವುದೇ ಒಂದು ಉದ್ಯಮ ಪ್ರಾರಂಭಿಸಲು ಒಂದೇ ಪೋರ್ಟಲ್‌ನಲ್ಲಿ ಅರ್ಜಿ ಸಲ್ಲಿಸಿ, ಬೇಕಾಗುವ ಎಲ್ಲಾ ಪರವಾನಗಿಗಳನ್ನು ಅದೇ ಪೋರ್ಟಲ್‌ನಲ್ಲಿ ಸಕಾಲದಲ್ಲಿ ಪಡೆಯಲು ಅವಕಾಶ ಕಲ್ಪಿಸಲಾಗುವುದು. ಇದರಿಂದ ಉದ್ಯಮಗಳು ಮತ್ತು ಹೂಡಿಕೆಗಳನ್ನು ಆಕರ್ಷಿಸಲು ಅನುಕೂಲವಾಗಲಿದೆ. ರಾಜ್ಯ ಸರ್ಕಾರವು ಚೆನ್ನೈ-ಬೆಂಗಳೂರು ಕೈಗಾರಿಕಾ ಕಾರಿಡಾರ್‌ನಲ್ಲಿ ಆರ್ಥಿಕ ಚಟುವಟಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯ ಸರ್ಕಾರದ ಸ್ವಾಧೀನದಲ್ಲಿರುವ BEML ಜಮೀನಿನಲ್ಲಿ ಬೃಹತ್‌ ʻಕೈಗಾರಿಕಾ ಟೌನ್‌ಷಿಪ್ʼ ಅನ್ನು ಅಭಿವೃದ್ಧಿಪಡಿಸಲಾಗುವುದು.

ವಿಜಯಪುರ ಜಿಲ್ಲೆಯಲ್ಲಿ ಉತ್ಪಾದನಾ ಕ್ಲಸ್ಟರ್‌ ಮತ್ತು ದಕ್ಷಿಣ ಕನ್ನಡದಲ್ಲಿ ರಫ್ತು ಆಧಾರಿತ ಕೈಗಾರಿಕೆಗಳ ಕ್ಲಸ್ಟರ್‌ಗಳನ್ನು ಅಭಿವೃದ್ಧಿಪಡಿಸಲಾಗುವುದು. ಕೃಷಿ ಉತ್ಪನ್ನಗಳ ಸಂಸ್ಕರಣೆಗೆ ಸಂಬಂಧಿಸಿದ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ಒಂದು ಹೊಸ ನೀತಿಯನ್ನು ಜಾರಿಗೆ ತರಲಾಗುವುದು. ಕೈಗಾರಿಕೆಗಳ ಸ್ಥಾಪನೆಗೆ ಎರಡು ಎಕರೆವರೆಗಿನ ಕೃಷಿ ಭೂಮಿಯನ್ನು ಕೈಗಾರಿಕಾ ಉದ್ದೇಶಕ್ಕಾಗಿ ಪರಿವರ್ತಿಸದೆ ಬಳಸಲು ಅವಕಾಶ ನೀಡಲಾಗುವುದು. ಇದಕ್ಕಾಗಿ ಕರ್ನಾಟಕ ಭೂ ಕಂದಾಯ ಕಾಯ್ದೆಯಲ್ಲಿ ಸೂಕ್ತ ತಿದ್ದುಪಡಿ ತರಲಾಗುವುದು. ಏರೋಸ್ಪೇಸ್‌ ವಲಯದಲ್ಲಿ ರಾಜ್ಯದ ಬಲವನ್ನು ಮತ್ತಷ್ಟು ವೃದ್ಧಿಸಲು ಮತ್ತು ವಿಶೇಷವಾಗಿ MSME ಗಳ ಮೇಲೆ ಕೇಂದ್ರಿಕರಿಸಲು, ಅತ್ಯಾಧುನಿಕ ಕರ್ನಾಟಕ ಏರೋಸ್ಪೇಸ್‌ ತಂತ್ರಜ್ಞಾನ ಕೇಂದ್ರವನ್ನು ಬೆಂಗಳೂರಿನ ದೇವನಹಳ್ಳಿ ಏರೋಸ್ಪೇಸ್‌ ಮತ್ತು ಡಿಫೆನ್ಸ್‌ ಪಾರ್ಕ್‌ನಲ್ಲಿ ಸ್ಥಾಪಿಸಲಾಗುವುದು.

ರಾಜ್ಯದಲ್ಲಿ ಸಾಮಾನ್ಯ ಸೌಲಭ್ಯ ಕೇಂದ್ರಗಳನ್ನು (Common Facility Center) PPP ಮಾದರಿಯಲ್ಲಿ ಅಭಿವೃದ್ಧಿಪಡಿಸಲು ಯೋಜಿಸಿದ್ದು, ಇದರಿಂದ ಯಂತ್ರೋಪಕರಣಗಳು, ಉಪಕರಣಗಳು ಮತ್ತು ಸಾಮೂಹಿಕ ಮೂಲಸೌಲಭ್ಯಗಳನ್ನು MSME ಗಳು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ. ರಾಜ್ಯದ ಸಾರ್ವಜನಿಕ ಉದ್ದಿಮೆಗಳಲ್ಲಿ ಆಧುನೀಕರಣ ಹಾಗೂ ವೃತ್ತಿಪರತೆಯನ್ನು ತರುವ ಮೂಲಕ ತಮ್ಮ ಚಟುವಟಿಕೆಗಳನ್ನು ಸುಧಾರಿಸಲು ಕ್ರಮ ಕೈಗೊಳ್ಳಲಾಗುವುದು. ಹೊಸ ಉತ್ಪನ್ನ ಮತ್ತು ಸೇವೆಗಳನ್ನು ಪರಿಚಯಿಸಿ, ಮಾರ್ಕೆಟಿಂಗ್‌ ತಂತ್ರದ ಮೂಲಕ ರಾಷ್ಟ್ರೀಯ ಹಾಗೂ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಸ್ಪರ್ಧಿಸಲು ಉತ್ತೇಜನ ನೀಡಲಾಗುವುದು.

ಸಣ್ಣ ಕೈಗಾರಿಕೆಗಳನ್ನು ಪ್ರೋತ್ಸಾಹಿಸಲು ರಾಜ್ಯದ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮದ (KSSIDC) ವತಿಯಿಂದ ಹುಬ್ಬಳ್ಳಿ, ಕಲಬುರಗಿಯ ಚಿತ್ತಾಪುರ, ಉತ್ತರ ಕನ್ನಡದ ಕೋಡ್ಕಣಿ, ಬೆಳಗಾವಿಯ ಕಣಗಲಾ, ಚಾಮರಾಜನಗರದ ಬದನಗುಪ್ಪೆ, ವಿಜಯಪುರದ ಇಂಡಿ ಮತ್ತು ಯಾದಗಿರಿಯ ಶಹಪೂರ ಹೀಗೆ ಏಳು ಸ್ಥಳಗಳಲ್ಲಿ ಹೊಸದಾಗಿ ಕೈಗಾರಿಕಾ ವಸಾಹತುಗಳನ್ನು ಹಂತ ಹಂತವಾಗಿ ಸ್ಥಾಪಿಸಲಾಗುವುದು.

ಪರಿಸರ ಸ್ನೇಹಿ ಹಾಗೂ ನೈಸರ್ಗಿಕ ಕೈಮಗ್ಗದ ವಸ್ತ್ರಗಳಿಗೆ ಜಾಗತಿಕ ಮಾರುಕಟ್ಟೆಯಲ್ಲಿ ಹೆಚ್ಚುತ್ತಿರುವ ಬೇಡಿಕೆಯ ಹಿನ್ನೆಲೆಯಲ್ಲಿ ಕೈಮಗ್ಗ ವಲಯದಲ್ಲಿ ಸುಸ್ಥಿರ ಉದ್ಯೋಗ ಒದಗಿಸಲು ಸಾಕಷ್ಟು ಅವಕಾಶವಿದೆ. ಈ ಅವಕಾಶದ ಸದ್ಬಳಕೆಗಾಗಿ ಕೈಮಗ್ಗ ಮತ್ತು ಜವಳಿ ಇಲಾಖೆಯಲ್ಲಿ ಮಹಾತ್ಮಾ ಗಾಂಧಿ ವಸ್ತ್ರೋದ್ಯಮ ಕೋಶವನ್ನು ಸ್ಥಾಪಿಸಲಾಗುವುದು. ಈ ಕೋಶವು ವಿನ್ಯಾಸಕಾರರು, ನೇಕಾರರು, ನೂಲು ಬಿಚ್ಚಾಣಿಕೆದಾರರು, ಮತ್ತಿತರ ಭಾಗೀದಾರರನ್ನು ಒಂದೇ ವೇದಿಕೆಯಡಿ ತರುವುದರೊಂದಿಗೆ ಮಾರುಕಟ್ಟೆಯೊಂದಿಗೆ ಸಮನ್ವಯಗೊಳಿಸಲಿದೆ. ಅಲ್ಲದೇ, ಕುಸಿತ ಕಾಣುತ್ತಿರುವ ಕೈಮಗ್ಗ ಉದ್ಯಮದ ಪುನಃಶ್ಚೇತನಕ್ಕೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲಿದೆ.

ಜವಳಿ ಮತ್ತು ಸಿದ್ದ ಉಡುಪು ನೀತಿಯಡಿ ಉತ್ತರ ಕರ್ನಾಟಕ ಭಾಗದಲ್ಲಿ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸಿ, ಸ್ಥಳೀಯರಿಗೆ ಉದ್ಯೋಗಾವಕಾಶವನ್ನು ಸೃಷ್ಟಿಸಲು ಆದ್ಯತೆ ಮೇರೆಗೆ ಕ್ರಮಕೈಗೊಳ್ಳಲಾಗುವುದು. 10 ಹೆಚ್.ಪಿ ವರೆಗಿನ ವಿದ್ಯುತ್‌ ಸಂಪರ್ಕ ಹೊಂದಿರುವ ಮಗ್ಗ ಮತ್ತು ಮಗ್ಗಪೂರ್ವ ಘಟಕಗಳಿಗೆ, ಮಾಸಿಕ ಗರಿಷ್ಠ 250 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್‌ ಒದಗಿಸುವ ಮೂಲಕ ನೇಕಾರರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿಸಲು ಕ್ರಮ ವಹಿಸಲಾಗುವುದು.

ಮಂಡ್ಯದಲ್ಲಿರುವ ಮೈಸೂರು ಷುಗರ್‌ ಕಂಪನಿ ಲಿ., ನಮ್ಮ ರಾಜ್ಯದ ಪ್ರತಿಷ್ಠಿತ ಮತ್ತು ಪ್ರಮುಖ ಕಾರ್ಖಾನೆಯಾಗಿದ್ದು, ಇದು ಹಳೆ ಮೈಸೂರು ಭಾಗದ ಕೃಷಿಕರ ಬದುಕಿಗೆ ಆಸರೆಯಾಗಿದೆ. ಹೀಗಾಗಿ ಕಂಪನಿಯನ್ನು ಪುನರುಜ್ಜೀವನಗೊಳಿಸಲು ಮತ್ತು 2023-24ನೇ ಸಾಲಿನಲ್ಲಿಯೇ ಕಬ್ಬು ಅರೆಯುವಿಕೆಯನ್ನು ಪ್ರಾರಂಭಿಸಿ ಲಾಭದಾಯಕವಾಗಿ ನಡೆಸಲು ಈಗಾಗಲೇ ನಮ್ಮ ಸರ್ಕಾರ 50 ಕೋಟಿ ರೂ. ಬಂಡವಾಳ ನೀಡಿದೆ. ದುಡಿಯುವ ಬಂಡವಾಳ ನೀಡುವ ಜೊತೆಗೆ ಕಾರ್ಖಾನೆಯ ಸುಸ್ಥಿರತೆ ಮತ್ತು ಉನ್ನತೀಕರಣಕ್ಕೆ ಎಲ್ಲಾ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುವುದು.

ರಾಜ್ಯದಲ್ಲಿ ಸುಸ್ಥಿರ, ಸುರಕ್ಷಿತ ಮತ್ತು ವೈಜ್ಞಾನಿಕ ಗಣಿಗಾರಿಕೆಯನ್ನು ಉತ್ತೇಜಿಸಿ, ರಾಜಸ್ವ ಸಂಗ್ರಹಣೆಯನ್ನು ಹೆಚ್ಚಿಸಲು ನಮ್ಮ ಸರ್ಕಾರ ಆದ್ಯತೆ ನೀಡಲಿದೆ. ಈ ನಿಟ್ಟಿನಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯಲ್ಲಿ ವೈಜ್ಞಾನಿಕ ಮತ್ತು ತಾಂತ್ರಿಕ ವಿಧಾನಗಳನ್ನು ಅಳವಡಿಸಿಕೊಳ್ಳುವ ಮೂಲಕ ಅವಶ್ಯಕ ಸುಧಾರಣೆಗಳನ್ನು ಜಾರಿಗೊಳಿಸಲಾಗುವುದು.

ರಾಜ್ಯದಲ್ಲಿ Rare Earth Elements ಗಳಲ್ಲಿ ಒಂದಾದ ಲೀಥಿಯಂ (Lithium) ಖನಿಜಾನ್ವೇಷಣೆಯನ್ನು ಕೈಗೊಂಡು ಹೊಸ ಖನಿಜ ನಿಕ್ಷೇಪಗಳನ್ನು ಪತ್ತೆಹಚ್ಚಲು ಗಣಿ ಮತ್ತು ಭೂವಿಜ್ಞಾನ ಇಲಾಖೆಯಿಂದ ಕ್ರಮವಹಿಸಲಾಗುವುದು ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button