Film & EntertainmentLatest

*ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್: ಮುಖ್ಯಮಂತ್ರಿ ಸಿದ್ದರಾಮಯ್ಯ*

ನೇತ್ರದಾನ ಮೂಲಕ ಸಮಾಜಮುಖಿ ಕೆಲಸ

ಪ್ರಗತಿವಾಹಿನಿ ಸುದ್ದಿ: ಕನ್ನಡ ಸೇವೆಯನ್ನು ಮಾಡಿದ ಅಪರೂಪದ ನಟ ದ್ವಾರಕೀಶ್ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಅವರು ಇಂದು ರವೀಂದ್ರ ಕಲಾಕ್ಷೇತ್ರದಲ್ಲಿ ಖ್ಯಾತ ಚಲನಚಿತ್ರ ನಟ ನಿರ್ಮಾಪಕ ದಿ. ದ್ವಾರಕೀಶ್ ರವರ ಪ್ರಾರ್ಥಿವ ಶರೀರಕ್ಕೆ ಅಂತಿಮ ಗೌರವ ಸಲ್ಲಿಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು.

ಅಪಾರ ಸೇವೆ ಹಾಗೂ ಕೊಡುಗೆ
ಕನ್ನಡ ಚಿತ್ರರಂಗದಕ್ಕೆ ನಟ, ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿ ದ್ವಾರಕೀಶ್ ಅಪಾರ ಕೊಡುಗೆ ಹಾಗೂ ಸೇವೆಯನ್ನು ಸಲ್ಲಿಸಿದ್ದಾರೆ. ಅವರ ಸೇವೆಯನ್ನು ಮರೆಯಲು ಸಾಧ್ಯವಿಲ್ಲ. ಹಾಸ್ಯನಟರಾಗಿ ಯಲ್ಲದೆ ನಾಯಕ ನಟರಾಗಿಯೂ ಉತ್ತಮ ಅಭಿನಯ ನೀಡಿದವರು ಎಂದರು.

ಡಾ: ರಾಜ್ ಕುಮಾರ್ ಮತ್ತು ಅವರ ಜೋಡಿ ಬಹಳ ಚೆನ್ನಾಗಿತ್ತು. ವಿಷ್ಣುವರ್ಧನ್ ಹಾಗೂ ಅಂಬರೀಶ್ ಅವರ ಚಿತ್ರಗಳಲ್ಲಿ ಯೂ ಅಭಿನಯಿಸಿದ್ದರು. ಜೀವನದಲ್ಲಿ ಬಹಳಷ್ಟು ಏಳುಬೀಳುಗಳನ್ನು ಕಂಡಿದ್ದಾರೆ. ಆದರೂ ಕನ್ನಡ ಚಿತ್ರ ನಿರ್ಮಾಣ, ನಟನೆಯನ್ನು ಬಿಟ್ಟಿರಲಿಲ್ಲ. ಕಷ್ಟಗಳನ್ನು ಸಹಿಸಿ ಕನ್ನಡ ಚಿತ್ರರಂಗ ಬೆಳೆಯಲು ಕೊಡುಗೆ ನೀಡಿದ್ದಾರೆ. ಮೈಸೂರಿನ ಹುಣಸೂರಿನಲ್ಲಿ ಹುಟ್ಟಿದವರು. ತವರಿನ ಬಗ್ಗೆ ಬಹಳ ಪ್ರೇಮವಿತ್ತು. ಒಮ್ಮೆ ಮೈಸೂರಿಗೆ ಹೆಲಿಕಾಪ್ಟರ್ ನಲ್ಲಿ ಪ್ರಯಾಣಿಸುವ ಸಂದರ್ಭದಲ್ಲಿ ರಾಜಕೀಯ, ಸಿನಿಮಾ, ಸಾಮಾಜಿಕ ವಿಚಾರಗಳನ್ನು ಚರ್ಚೆ ಮಾಡಿದ್ದೆವು ಎಂದು ಮುಖ್ಯಮಂತ್ರಿಗಳು ಸ್ಮರಿಸಿದರು.

ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ. ಅವರ ಕುಟುಂಬಕ್ಕೆ ಅವರ ಅಗಲಿಕೆಯ ದುಃಖವನ್ನು ಭರಿಸುವ ಶಕ್ತಿ ನೀಡಲಿ ಎಂದು ದೇವರಲ್ಲಿ ಪ್ರಾರ್ಥಿಸುವುದು ಸಂತಾಪ ವ್ಯಕ್ತಡಿಸಿದರು.

ನೇತ್ರದಾನ ಮೂಲಕ ಸಮಾಜಮುಖಿ ಕೆಲಸ
ಅವರ ಎರಡು ಕಣ್ಣುಗಳನ್ನು ದಾನಮಾಡಿರುವುದು ಶ್ಲಾಘನೀಯ. ಸತ್ತ ನಂತರವೂ ಸಮಾಜಮುಖಿ ಕೆಲಸ ಮಾಡಿದ್ದಾರೆ. ಅಂಥ ವ್ಯಕ್ತಿಯನ್ನು ಕಳೆದುಕೊಂಡು ಕನ್ನಡ ಚಿತ್ರರಂಗ ಬಡವಾಗಿದೆ ಎಂದರು.

ಕೆಲ ವರ್ಷಗಳ ಹಿಂದೆ ಅವರ ಧರ್ಮಪತ್ನಿಯವರು ಮೃತಪಟ್ಟ ದಿನವೇ ದ್ವಾರಕೀಶ್ ಅವರೂ ಮೃತಪಟ್ಟಿದ್ದು, ಅವರಿಬ್ಬರ ಆತ್ಮಕ್ಕೆ ಶಾಂತಿ ದೊರಕಲಿ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button