Kannada NewsKarnataka NewsLatestPolitics

*ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ; ನಮ್ಮ ಹಣ ವಾಪಾಸ್ ಕೊಡಿಸಿ ಎಂದ ಸಿಎಂ ಸಿದ್ದರಾಮಯ್ಯ*

ನೂತನ ಪಾರ್ಲಿಮೆಂಟಿಟ್ ಉದ್ಘಾಟನೆಗೆ ರಾಷ್ಟ್ರಪತಿ ದ್ರೌಪದಿ ಮರ್ಮು ರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ?

ಪ್ರಗತಿವಾಹಿನಿ ಸುದ್ದಿ: ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಆಕ್ರೋಶ ವ್ಯಕ್ತಪಡಿಸಿದರು.

ವಿಧಾನ‌ ಪರಿಷತ್ ನಲ್ಲಿ ರಾಜ್ಯಪಾಲರ ಭಾಷಣದ ಮೇಲೆ ನಡೆದ ಚರ್ಚೆಗೆ ಉತ್ತರ ನೀಡುವಾಗ ಈ ರೀತಿ ಪ್ರಶ್ನಿಸಿದರು.

ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ರಾಜ್ಯದ ಪಾಲಿನ ನಮ್ಮ ಹಣ ವಾಪಾಸ್ ಕೊಡಿಸಿ: ನಿಮಗೆ ನೂರು ಕೋಟಿ ನಮಸ್ಕಾರ ಹಾಕ್ತೀನಿ ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಬಿಜೆಪಿ ಸದಸ್ಯರಿಗೆ ಸವಾಲು ಹಾಕಿದರು.

ಈ ವೇಳೆ ಪರಿಷತ್ ವಿರೋಧ ಪಕ್ಷದ ನಾಯಕರಾದ ಕೋಟಾ ಶ್ರೀನಿವಾಸ್ ಪೂಜಾರಿಯವರು ಮಧ್ಯ ಪ್ರವೇಶಿಸಿ, ನಿಮ್ಮ ಕೋಟಿ ನಮಸ್ಕಾರ ನಮಗೆ ಬೇಡ. ಆದರೆ ಪ್ರಧಾನಿ ಮತ್ತು ರಾಷ್ಟ್ರಪತಿಯವರನ್ನು ಏಕವಚನದಲ್ಲಿ ಕರೆಯುವುದನ್ನು ನಿಲ್ಲಿಸಿ ಎನ್ನುವ ಮೂಲಕ ವಿಷಯಾಂತರ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ನಾನು ಗೌರವಾನ್ವಿತ ರಾಷ್ಟ್ರಪತಿಗಳಿಗೆ ಬಿಜೆಪಿ ಮಾಡಿದ ಅವಮಾನವನ್ನು ಪ್ರಸ್ತಾಪಿಸುವಾಗ ಬಾಯಿತಪ್ಪಿ ಏಕ ವಚನ ಬಳಸಿದೆ. ಇದಕ್ಕೆ ತಕ್ಷಣವೇ ವಿಷಾದ ಕೂಡ ವ್ಯಕ್ತಪಡಿಸಿದ್ದೇನೆ.

ಆದರೆ, ನೂತನ ಪಾರ್ಲಿಮೆಂಟಿನ ಉದ್ಘಾಟನೆಗೆ ಗೌರವಾನ್ವಿತ ರಾಷ್ಟ್ರಪತಿ ದ್ರೌಪದಿ ಮರ್ಮು ಅವರನ್ನು ಆಹ್ವಾನಿಸದೇ ಇದ್ದದ್ದು ರಾಷ್ಟ್ರಪತಿಗಳಿಗೆ , ರಾಷ್ಟ್ರಪತಿ ಹುದ್ದೆಗೆ ಮಾಡಿದ ಅವಮಾನ ಅಲ್ಲವೇ? ರಾಷ್ಟ್ರಪತಿಗಳಿಗೆ ನೀವು ಮಾಡಿದ ಅವಮಾನ ಸರಿಯೇ ಎಂದು ಪ್ರಶ್ನಿಸಿದರು.

ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ:

ರಾಜ್ಯಗಳು ಸುಭದ್ರವಾಗಿದ್ದರೆ ಮಾತ್ರ ದೇಶ ಸುಭದ್ರ. ರಾಜ್ಯಗಳನ್ನು ಕೇಂದ್ರ ದುರ್ಬಲಗೊಳಿಸಬಾರದು ಎಂದು ಮುಖ್ಯಮಂತ್ರಿಗಳು ಪುನರುಚ್ಛರಿಸಿದರು.

ನಮ್ಮ ಸಂವಿಧಾನ ನಮ್ಮದು ಒಕ್ಕೂಟ ವ್ಯವಸ್ಥೆ ಎಂದು ರೂಪಿಸಿದೆ. ಇದನ್ನು ಇಡೀ ದೇಶ ಒಪ್ಪಿಕೊಂಡಿದೆ. ಆದರೆ ಈ ಒಕ್ಕೂಟ ವ್ಯವಸ್ಥೆಯನ್ನು ಹಾಳು ಮಾಡಬಾರದು. ನರೇಂದ್ರ ಮೋದಿಯವರು ‘ಕೋ ಆಪರೇಟಿವ್ ಫೆಡರಿಲಿಸಂ’ ಎಂದು ಹೇಳುತ್ತಾರೆ. ಆದರೆ ಅವರ ಮತ್ತು ಕೇಂದ್ರ ಸರ್ಕಾರದ ನಡವಳಿಕೆಯಲ್ಲಿ ಇದು ಕಾಣುತ್ತಿಲ್ಲ ಎನ್ನುತ್ತಾ ಕೇಂದ್ರದಿಂದ ರಾಜ್ಯಕ್ಕೆ ಕಳೆದ 10 ವರ್ಷಗಳಿಂದ ನಿರಂತರವಾಗಿ ಆಗುತ್ತಿರುವ ಅನ್ಯಾಯದ ಅಂಕಿ ಅಂಶಗಳನ್ನು ಬಿಚ್ಚಿಟ್ಟರು.

ರಾಜ್ಯದಿಂದ ತೆರಿಗೆ ಕೇಂದ್ರಕ್ಕೆ ಹೋಗುತ್ತದೆ. ರಾಜ್ಯದಿಂದ 4.30 ಲಕ್ಷ ಕೋಟಿ ತೆರಿಗೆ ಹೋಗುತ್ತಿದೆ. ತೆರಿಗೆ ಹಂಚಿಕೆಯಲ್ಲಿ 2023-24ಕ್ಕೆ 37252 ಕೋಟಿ ರೂ. ಬರುತ್ತಿದೆ. ಕೇಂದ್ರ ಪುರಸ್ಕೃತ ಯೋಜನೆಗಳಿಂದ 13005 ಕೋಟಿ , ಒಟ್ಟು 50257 ಕೋಟಿ ಮಾತ್ರ ರೂ. ಬರುತ್ತಿದೆ. ಕೇಂದ್ರದ ಬಜೆಟ್ ಗಾತ್ರ ಹೆಚ್ಚಾದ ಹಾಗೆ ರಾಜ್ಯದ ಪಾಲು ಕೂಡ ನಿಯಮಬದ್ದವಾಗಿ ಹೆಚ್ಚಾಗಬೇಕು. ಆದರೆ, ಕೇಂದ್ರದ ಬಜೆಟ್ ಗಾತ್ರ ಹೆಚ್ಚಾಗುತ್ತಾ ಹೋದಂತೆ, ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಪಾಲು, ಕನ್ನಡಿಗರ ಹಕ್ಕಿನ ತೆರಿಗೆ ಮತ್ತು ಅನುದಾನದ ಪಾಲು ಕಡಿಮೆ ಆಗುತ್ತಿದೆ. ಕನ್ನಡಿಗರ ಹಿತರಕ್ಷಣೆ ಮಾಡುವುದು ನಮ್ಮ ಕರ್ತವ್ಯ. ರಾಜ್ಯ ಬಲಿಷ್ಠವಾದರೆ, ಕೇಂದ್ರ ಬಲಿಷ್ಠವಾಗುತ್ತದೆ ಎಂದರು.

ರಾಜ್ಯಕ್ಕೆ ಮತ್ತು ರಾಜ್ಯದ ಜನತೆಯ ಪಾಲಿಗೆ ಆಗುತ್ತಿರುವ ಅನ್ಯಾಯವನ್ನು ನಾವು ಪ್ರಶ್ನಿಸಿದರೆ, ಪ್ರಧಾನಿ ಮೋದಿ ಅವರು ದೇಶ ವಿಭಜನೆಯ ಮಾತಾಡುತ್ತೇವೆ ಎಂದರು.

ಪ್ರಧಾನಿ ಅವರ ಮಾತನ್ನು ಪ್ರಸ್ತಾಪಿಸಿದ ಬಳಿಕ ಬಿಜೆಪಿ ಸದಸ್ಯರು ಜೋರು ಧ್ವನಿಯಲ್ಲಿ ಪ್ರಧಾನಿ ಅವರು ಹಾಗೆ ಹೇಳಿಯೇ ಇಲ್ಲ ಎಂದರು. ಇದಕ್ಕೆ ಕಾಂಗ್ರೆಸ್ ಸದಸ್ಯರಾದ ಪ್ರಕಾಶ್ ರಾಥೋಡ್ ಅವರು, ಪ್ರಧಾನಿ ಮೋದಿಯವರಂತೂ ಸುಳ್ಳು ಹೇಳುವುದು ಮೂಮೂಲು. ಬಿಜೆಪಿ ಸದಸ್ಯರೂ ಸುಳ್ಳು ಹೇಳುವುದನ್ನು ಮುಂದುವರೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button