
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಬಾಬ್ರಿ ಮಸೀದಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ವಿಶೇಷ ನ್ಯಾಯಾಲಯ ನೀಡಿರುವ ತೀರ್ಪಿನ ಹಿನ್ನೆಲೆಯಲ್ಲಿ ವಿಶ್ವಹಿಂದೂ ಪರಿಷತ್ ಕಾರ್ಯಕರ್ತರು ಬೆಳಗಾವಿಯಲ್ಲಿ ವಿಶೇಷ ಪೂಜೆ ಸಲ್ಲಿಸಿದರು.
ಖಡೋಬಜಾರ್ ಹನುಮಾನ್ ಮಂದಿರದಲ್ಲಿ ಪೂಜೆ ಸಲ್ಲಿಸಿದ ಕಾರ್ಯಕರ್ತರು, ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಈ ವೇಳೆ ಮಾತನಾಡಿದ ವಿಶ್ವಹಿಂದೂ ಪರಿಷತ್ ನ ಉತ್ತರಕರ್ನಾಟಕ ಪ್ರಾಂತ ಸಹಕೋಶಾಧ್ಯಕ್ಷ ಕೃಷ್ಣ ಭಟ್, ಇದೊಂದು ಅತ್ಯಂತ ಅವಿಸ್ಮರಣೀಯ ಘಳಿಗೆ. ಇಡೀ ಪ್ರಕರಣವನ್ನು ಅಧ್ಯಯನ ಮಾಡಿ ತೀರ್ಪು ನೀಡಲಾಗಿದೆ. ಈ ಪ್ರಕರಣದಲ್ಲಿ ಆರೋಪಿಗಳಾಗಿದ್ದ ಹಿರಿಯರು ನಿಜವಾಗಿಯೂ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಅವರೆಲ್ಲರೂ ಪೂಜೆಗೆ ಅರ್ಹರಾಗಿದ್ದಾರೆ ಎಂದರು.
ರಾಮಮಂದಿರಕ್ಕೆ ಸಂಬಂಧಿಸಿದಂತೆ ಇದ್ದ ಎಲ್ಲ ವಿಘ್ನಗಳೂ ರಾಮನ ಆಶಿರ್ವಾದದಿಂದ ಕೊನೆಗೊಂಡಿದೆ. ಸಮಸ್ತ ಹಿಂದುಗಳಿಗೆ ಖುಷಿ ತಂದಿದೆ ಎಂದೂ ಅವರು ಹೇಳಿದರು.