ಜೂನ್ ನಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ: ಸಚಿವ ಸುರೇಶ್ ಕುಮಾರ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಲಾಕ್‍ಡೌನ್ ಸಡಿಲಗೊಂಡಿರುವ ಬೆನ್ನಲ್ಲೇ ಎಸ್‍ಎಸ್‍ಎಲ್‍ಸಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳುವಂತೆ ಡಿಡಿಪಿಐಗಳಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೂಚನೆ ನೀಡಿದ್ದಾರೆ.

ಶಿಕ್ಷಣ ಸಚಿವ ಸುರೇಶ್ ಕುಮಾರ್ ಫೇಸ್‍ಬುಕ್ ಲೈವ್‍ನಲ್ಲಿ, ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬಗ್ಗೆ ಮಾತನಾಡಿದ್ದಾರೆ. ನಾನು ವಿದ್ಯಾರ್ಥಿಗಳ ಜೊತೆ ಸಾಮಾಜಿಕ ಜಾಲತಾಣದಲ್ಲಿ ಚರ್ಚೆ ಮಾಡಿದ್ದೇನೆ. ಆಗ ವಿದ್ಯಾರ್ಥಿಗಳು ಒಂದು ವರ್ಷ ಪರೀಕ್ಷೆಗಾಗಿ ಪರಿಶ್ರಮಪಟ್ಟಿದ್ದೇವೆ. ಪರೀಕ್ಷೆ ನಡೆಸಬೇಕು ಎಂದು ಒತ್ತಾಯಿಸಿದ್ದಾರೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಲು ನಾವು ತಯಾರಿದ್ದೇವೆ ಎಂದು ತಿಳಿಸಿದರು.

ನಮ್ಮ ರಾಜ್ಯದ ಎಲ್ಲಾ ಉಪನಿರ್ದೇಶಕರೊಂದಿಗೆ ವಿಡಿಯೋ ಸಂವಾದ ನಡೆಸಿದ್ದೇನೆ. ಸದ್ಯಕ್ಕೆ ದೂರದರ್ಶನದಲ್ಲಿ ವಿದ್ಯಾರ್ಥಿಗಳಿಗೆ ರಿವಿಷನ್ ಕ್ಲಾಸ್ ನಡೆಸಲಾಗುತ್ತಿದೆ. ಇದರಿಂದ ಮಕ್ಕಳು ತುಂಬಾ ಸಂತೋಷವಾಗಿದ್ದಾರೆ. ಗಣಿತ ಮತ್ತು ವಿಜ್ಞಾನ ವಿಷಯಕ್ಕೆ ಸಂಬಂಧಿಸಿದಂತೆ ಮಾದರಿ ಪ್ರಶ್ನೆ ಪತ್ರಿಕೆ ಬೋಧನೆ ಮಾಡಲಾಗುತ್ತಿದೆ. ಇಂಗ್ಲಿಷ್ ಮಾಧ್ಯಮ ವಿದ್ಯಾರ್ಥಿಗಳಿಗೂ ಜೂನ್ ತಿಂಗಳಲ್ಲಿ ಬೋಧನೆ ಮಾಡಲು ನಿರ್ಧರಿಸಲಾಗಿದೆ ಎಂದರು.

ಯಾರೋ ಹೇಳಿದ ದಿನಾಂಕಕ್ಕೆ ವಿದ್ಯಾರ್ಥಿಗಳು ತಲೆ ಕೆಡಿಸಿಕೊಳ್ಳಬಾರದು. ಪುನರ್ ಮನನ ತರಗತಿಗಳು ನಡೆದ ಮೇಲೆ ಜೂನ್ ತಿಂಗಳಲ್ಲಿ ಪರೀಕ್ಷೆ ಮಾಡುವ ಯೋಚನೆ ಮಾಡುತ್ತೇವೆ. ಈಗ ಪರೀಕ್ಷೆ ಮಾಡುವುದಾದರೂ ತಕ್ಷಣವೇ ಪರೀಕ್ಷೆ ಮಾಡುವುದಿಲ್ಲ. ಶಿಕ್ಷಣ ಇಲಾಖೆ ಘೋಷಣೆ ಮಾಡುವ ವೇಳಾಪಟ್ಟಿ ನಿಖರವಾಗಿರಲಿದೆ. ವೇಳಾಪಟ್ಟಿ ಘೋಷಣೆ ಮಾಡಿದ ಮೇಲೆ ಕನಿಷ್ಠ 15 ರಿಂದ 20 ದಿನ ವಿದ್ಯಾರ್ಥಿಗಳಿಗೆ ಸಮಯ ಸಿಗುತ್ತವೆ ಎಂದು ಸುರೇಶ್ ಕುಮಾರ್ ಹೇಳಿಸಿದ್ದಾರೆ.

ಪರೀಕ್ಷಾ ಕೊಠಡಿಯಲ್ಲಿ ಸಾಮಾನ್ಯವಾಗಿ 24 ಜನ ಕೂರಲಿದ್ದಾರೆ. ಆದರೆ ಈ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆ ಮಾಡಲಿದ್ದೇವೆ. ಪರೀಕ್ಷೆ ಬರೆಯುವಾಗ ಮಾಸ್ಕ್ ಧರಿಸುವುದು ಕಡ್ಡಾಯ. ಪರೀಕ್ಷೆಗೂ ಮುನ್ನ ಸ್ಯಾನಿಟೈಸರ್ ಬಳಕೆ ಮಾಡುವುದು ಕಡ್ಡಾಯ. ಎಲ್ಲಾ ವಿದ್ಯಾರ್ಥಿಗಳಿಗೆ ಥರ್ಮರ್ ಸ್ಕ್ಯಾನರ್ ಮೂಲಕ ತಪಾಸಣೆ ಮಾಡಲಾಗುತ್ತೆ. ಪರೀಕ್ಷೆ ಮುನ್ನ ಹಲವು ಮುನ್ನೆಚ್ಚರಿಕಾ ಕ್ರಮಗಳನ್ನ ಕೈಗೊಳ್ಳಲಾಗುತ್ತದೆ. ಇದಕ್ಕೆ ನಮ್ಮ ಇಲಾಖೆ ಸಿದ್ಧವಾಗುತ್ತಿದೆ. ಹಾಸ್ಟೆಲ್‍ನಲ್ಲಿ ಇದ್ದವರು ಊರಿಗೆ ಹೋಗಿದ್ರೆ ಅಂತಹ ವಿದ್ಯಾರ್ಥಿಗಳಿಗೆ ಅವರ ಊರಿನ ಶಾಲೆಯ ಕೇಂದ್ರದಲ್ಲಿ ಪರೀಕ್ಷೆ ಬರೆಯಲು ಅವಕಾಶ ಕೊಡಲಾಗುತ್ತದೆ. ಜೂನ್ ಎರಡನೇ ವಾರ ಅಥವಾ ಮೂರನೇ ವಾರ ಪರೀಕ್ಷೆ ಮಾಡುವ ಚಿಂತನೆ ಇದೆ. ಈ ಬಗ್ಗೆ ಈಗಾಗಲೇ ಸಿದ್ಧತೆ ಆರಂಭ ಮಾಡಿದ್ದೇವೆ ಎಂದು ಹೇಳಿದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button