Kannada NewsKarnataka NewsNationalPolitics

*101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಿದ ರಾಜ್ಯ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆ ಕೊರತೆಯ 101 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ. 

ಮಾಧ್ಯಮಗಳಿಗೆ ಮಾಹಿತಿ ನೀಡಿದ ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದ ಪರಿಣಾಮ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ತಿಳಿಸಿದರು. ಮಳೆ ಕೊರತೆಯಿಂದ ಕೃಷಿ ಹಾಗೂ ನೀರಾವರಿ ವ್ಯವಸ್ಥೆ ಮೇಲೆ ಪರಿಣಾಮ ಬೀರಿದ್ದು, ಕೆಲವು ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯೂ ತಲೆದೋರಿದೆ ಎಂದರು.

Home add -Advt

ಬರ ಪರಿಸ್ಥಿತಿಯನ್ನು ನಿಭಾಯಿಸಲು ರಾಜ್ಯ ಸರ್ಕಾರ 635 ಕೋಟಿ ರೂಪಾಯಿಗಳನ್ನು ಮೀಸಲಿಟ್ಟಿದೆ. ಈ ಅನುದಾನವನ್ನು ಅಗತ್ಯವಿರುವ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಲು, ಜಾನುವಾರುಗಳಿಗೆ ಮೇವಿನ ವ್ಯವಸ್ಥೆ ಕಲ್ಪಿಸಲು ಹಾಗೂ ಸಂಕಷ್ಟದಲ್ಲಿರುವ ರೈತರಿಗೆ ತುರ್ತು ನೆರವು ನೀಡಲು ಬಳಸಲಾಗುತ್ತದೆ ಎಂದು ಪರಮೇಶ್ವರ್ ವಿವರಿಸಿದರು.

ಬರದ ತೀವ್ರತೆ ಹೆಚ್ಚಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದಿಂದ ಹೆಚ್ಚಿನ ನೆರವು ಪಡೆಯಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ. ಈ ಸಂಬಂಧ ರಾಜ್ಯದ ನಿಯೋಗವೊಂದು ಶೀಘ್ರದಲ್ಲೇ ದೆಹಲಿಗೆ ತೆರಳಿ ಕೇಂದ್ರದ ಸಂಬಂಧಪಟ್ಟ ಸಚಿವರನ್ನು ಭೇಟಿ ಮಾಡಲಿದೆ.

ರಾಜ್ಯದಲ್ಲಿ ಬರದಿಂದ ಉಂಟಾಗಿರುವ ಬೆಳೆ ಹಾನಿ, ನೀರಿನ ಸಮಸ್ಯೆ ಸೇರಿದಂತೆ ಸಂಪೂರ್ಣ ಮಾಹಿತಿಯನ್ನು ಒಳಗೊಂಡ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲಾಗುವುದು. ಬರ ಪರಿಹಾರ ನಿಧಿಯಿಂದ ಕರ್ನಾಟಕಕ್ಕೆ ಅಗತ್ಯ ಪ್ರಮಾಣದ ಹೆಚ್ಚುವರಿ ಅನುದಾನವನ್ನು ತಕ್ಷಣ ಬಿಡುಗಡೆ ಮಾಡುವಂತೆ ಕೇಂದ್ರಕ್ಕೆ ಮನವಿ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಜಿ. ಪರಮೇಶ್ವರ್ ತಿಳಿಸಿದ್ದಾರೆ.

Related Articles

Back to top button