Kannada NewsKarnataka NewsPolitics

*ರಾಜ್ಯ ಸರ್ಕಾರ ತಕ್ಷಣವೇ  ಬರಗಾಲ ಘೋಷಿಸಲಿ: ಬಸವರಾಜ ಬೊಮ್ಮಾಯಿ ಆಗ್ರಹ*

ರಾಜ್ಯದಲ್ಲಿ ಕೃಷಿ ಸಚಿವರೇ ಇಲ್ಲದಿರುವುದು ದುರದೃಷ್ಟ: ಬಸವರಾಜ ಬೊಮ್ಮಾಯಿ

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದ ಪರಿಸ್ಥಿತಿ ನಿರ್ಮಾಣವಾಗುತ್ತಿದ್ದು, ಇನ್ನೊಂದು ವಾರದೊಳಗೆ ಸಮರ್ಪಕ ಮಳೆಯಾಗದಿದ್ದರೆ ಕರ್ನಾಟಕ ಸಂಪೂರ್ಣ ಬರಗಾಲದತ್ತ ಸಾಗುವ ಸಾಧ್ಯತೆಯಿದೆ ರಾಜ್ಯ ಸರ್ಕಾರ ತಕ್ಷಣವೇ ಬರಗಾಲ ಘೋಷಿಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ.

Home add -Advt

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಬೊಮ್ಮಾಯಿ, ರಾಜ್ಯದಲ್ಲಿ ಈವರೆಗೆ ಕೇವಲ ಶೇ.30ರಷ್ಟು ಮಾತ್ರ ಬಿತ್ತನೆಯಾಗಿದ್ದು, ಶೇ.70ರಷ್ಟು ಪ್ರದೇಶಗಳಲ್ಲಿ ಇನ್ನೂ ಬಿತ್ತನೆ ಪ್ರಾರಂಭವಾಗಿಲ್ಲ. ಮಳೆಯ ಕೊರತೆಯಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದು, ಮುಂದಿನ ಒಂದು ವಾರದಲ್ಲಿಯೂ ಮಳೆ ಬಾರದಿದ್ದರೆ ಕುಡಿಯುವ ನೀರಿನ ಸಮಸ್ಯೆಯೂ ಗಂಭೀರ ಸ್ವರೂಪ ಪಡೆಯಲಿದೆ ಎಂದು ಹೇಳಿದರು.

ಇಂತಹ ಗಂಭೀರ ಪರಿಸ್ಥಿತಿಯಲ್ಲಿ ಸರ್ಕಾರ ತಕ್ಷಣ ಎಚ್ಚೆತ್ತುಕೊಳ್ಳಬೇಕಿದ್ದು, ಎಲ್ಲ ಜಿಲ್ಲಾಧಿಕಾರಿಗಳ ಸಭೆ ನಡೆಸಿ ವಾಸ್ತವ ಸ್ಥಿತಿಯ ವರದಿ ಪಡೆಯಬೇಕು. ಬರ ಪರಿಹಾರ ಕ್ರಮಗಳನ್ನು ತುರ್ತಾಗಿ ಜಾರಿಗೊಳಿಸಬೇಕು. ಪ್ರಕೃತಿ ವಿಕೋಪ ಪರಿಹಾರ ನಿಧಿಯಲ್ಲಿ ಹಣ ಲಭ್ಯವಿದ್ದು, ಅದನ್ನು ಸಮರ್ಪಕವಾಗಿ ಬಳಕೆ ಮಾಡಿದರೆ ಕೇಂದ್ರ ಸರ್ಕಾರದಿಂದ ಹೆಚ್ಚುವರಿ ನೆರವು ಪಡೆಯಲು ಸಾಧ್ಯವಾಗುತ್ತದೆ ಎಂದು ಹೇಳಿದರು.

ಕೃಷಿ ಸಚಿವರಿಲ್ಲದಿರುವುದು ದುರದೃಷ್ಟ

ರಾಜ್ಯದಲ್ಲಿ ಮಳೆ ಇಲ್ಲದೆ ಕೆರೆಗಳು ಹಾಗೂ ಜಲಾಶಯಗಳಲ್ಲಿನ ನೀರಿನ ಮಟ್ಟ ದಿನದಿಂದ ದಿನಕ್ಕೆ ಕುಸಿಯುತ್ತಿದೆ. ಇಂತಹ ಸಂದರ್ಭದಲ್ಲಿ ರಾಜ್ಯದಲ್ಲಿ ಸಮರ್ಪಕ ಕೃಷಿ ಸಚಿವರೇ ಇಲ್ಲದಿರುವುದು ದುರದೃಷ್ಟಕರ. ಎರಡು ಅಥವಾ ಮೂರು ಜಿಲ್ಲೆಗಳಿಗೆ ಒಬ್ಬ ಸಚಿವರನ್ನು ನೇಮಿಸಿರುವುದರಿಂದ ಯಾವುದೇ ಪ್ರಯೋಜನವಿಲ್ಲ ಎಂದು ಹೇಳಿದರು.

ಎಲ್ ನೀನೋ ಪರಿಣಾಮ ಹಾಗೂ ಸಂಭವನೀಯ ಬರ ಪರಿಸ್ಥಿತಿಯ ಕುರಿತು ರಾಷ್ಟ್ರೀಯ ವರದಿಗಳು ಈಗಾಗಲೇ ಎಚ್ಚರಿಕೆ ನೀಡಿದ್ದರೂ ಸರ್ಕಾರ ಅದನ್ನು ಗಂಭೀರವಾಗಿ ಪರಿಗಣಿಸಿಲ್ಲ. ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ತಕ್ಷಣ ಬರ ಪರಿಸ್ಥಿತಿ ನಿರ್ವಹಣೆಯತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದರು.

Related Articles

Back to top button