*ಗಣೇಶೋತ್ಸವದ ಮೆರವಣಿಗೆ ವೇಳೆ ಕಲ್ಲು ತೂರಾಟ: 19 ಜನರ ವಿರುದ್ಧ ದೂರು ದಾಖಲು*

ಪ್ರಗತಿವಾಹಿನಿ ಸುದ್ದಿ: ಗಣೇಶೋತ್ಸವದ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಘರ್ಷಣೆ ಸಂಭವಿಸಿ, ಕಲ್ಲು ತೂರಾಟ ನಡೆದಿರುವ ಘಟನೆ ಯಾದಗಿರಿ ನಗರದ ಶ್ರೀ ದುರ್ಗಾದೇವಿ ದೇವಾಲಯದ ಸಮೀಪ ನಡೆದಿದೆ.
ಗಣೇಶನ ಮೆರವಣಿಗೆ ನಡೆಯುತ್ತಿದ್ದ ಸಮಯದಲ್ಲಿ ಯುವಕನೊಬ್ಬನ ಮೇಲೆ ದ್ವಿಚಕ್ರ ವಾಹನ ಹರಿದು ಸಣ್ಣ ಅಪಘಾತ ಸಂಭವಿಸಿದ್ದು, ಈ ವಿಚಾರವಾಗಿ ಆರಂಭವಾದ ವಾಗ್ವಾದ ಕ್ಷಣಾರ್ಧದಲ್ಲಿ ದೊಡ್ಡ ಗಲಾಟೆಯಾಗಿ ಮಾರ್ಪಟ್ಟಿತು. ಮೂರ್ತಿ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಎದುರಾಳಿ ಗುಂಪು ಬೆದರಿಕೆ ಒಡ್ಡಿ ಜಗಳ ತೆಗೆಯಿತು. ಈ ವೇಳೆ ಮಾತಿಗೆ ಮಾತು ಬೆಳೆದು ಪರಿಸ್ಥಿತಿ ವಿಕೋಪಕ್ಕೆ ಹೋಗಿ ಪರಸ್ಪರ ದೊಣ್ಣೆಗಳಿಂದ ಹಲ್ಲೆ ಹಾಗೂ ಕಲ್ಲು ತೂರಾಟ ನಡೆಯಿತು.
ಈ ಘರ್ಷಣೆಯಲ್ಲಿ ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ಸೇರಿಸಲಾಗಿದೆ. ಘಟನೆ ನಡೆದ ಸ್ಥಳದಲ್ಲಿ ಪ್ರಸ್ತುತ ಉದ್ವಿಗ್ನ ವಾತಾವರಣ ನಿರ್ಮಾಣವಾಗಿದ್ದು ಯಾವುದೇ ರೀತಿಯ ಅಹಿತಕರ ಪ್ರಸಂಗಗಳು ಮರುಕಳಿಸದಂತೆ ಮುನ್ನೆಚ್ಚರಿಕೆಯಾಗಿ ಹೆಚ್ಚುವರಿ ಪೊಲೀಸ್ ತುಕಡಿಗಳನ್ನು ನಿಯೋಜಿಸಲಾಗಿದೆ. ಈ ಗಲಾಟೆ ಬೆನ್ನಲ್ಲೇ ಯಾದಗಿರಿ ಪೊಲೀಸರು 19 ಜನರ ವಿರುದ್ಧ ಎಫ್ಐಆರ್ ದಾಖಲಿಸಿಕೊಂಡಿದ್ದಾರೆ.


