*ಕಲ್ಲು ತೂರಾಟ ಪ್ರಕರಣ: ಗಾಯಾಳುಗಳ ಆರೋಗ್ಯ ವಿಚಾರಿಸಿದ ಎಡಿಜಿಪಿ ಹಿತೇಂದ್ರ ಆರ್*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಹುಕ್ಕೇರಿ ತಾಲೂಕಿನ ಹತ್ತರಗಿ ಟೋಲ್ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಶುಕ್ರವಾರ ನಡೆದ ಕಲ್ಲು ತೂರಾಟ ಪ್ರಕರಣದಲ್ಲಿ ಗಾಯಗೊಂಡ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಎಡಿಜಿಪಿ ಹಿತೇಂದ್ರ ಆರ್. ಅವರು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.
ಬೆಳಗಾವಿ ನಗರದ ಕೆಎಲ್ಇ ಆಸ್ಪತ್ರೆಯಲ್ಲಿ ಗಾಯಾಳು ಪೊಲೀಸರು ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು ಬೆಳಗ್ಗೆ ಆಸ್ಪತ್ರೆಗೆ ಆಗಮಿಸಿದ ಎಡಿಜಿಪಿ ಅವರು ಗಾಯಾಳುಗಳಿಗೆ ಧೈರ್ಯ ತುಂಬಿ, ಕಲ್ಲು ತೂರಾಟ ಘಟನೆ ಕುರಿತು ಮಾಹಿತಿ ಪಡೆದರು.
ಬಳಿಕ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಘಟನೆಯಲ್ಲಿ ನಮ್ಮ 11 ಜನ ಸಿಬ್ಬಂದಿ ಗಾಯಗಳಾಗಿವೆ. ಯಾವುದೇ ರೀತಿ ಅಹಿತಕರ ಘಟನೆ ನಡೆಯಬಾರದು ಅಂತ ಇತ್ತು, ಆದರೂ ಘಡನೆ ನಡೆದಿದೆ ಎಂದು ಕಳವಳ ವ್ಯಕ್ತಪಡಿಸಿದರು.
ಘಟನಾ ಸ್ಥಳದಲ್ಲಿದ್ದ 40-50 ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದೇವೆ. ಈಗಾಗಲೇ ಘಟನೆ ಕುರಿತು ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ನಾವು ಯಾರಿಗೂ ಲಾಠಿಯಿಂದ ಹೊಡೆಯಿರಿ ಎಂದು ನಿರ್ದೇಶನ ಕೊಟ್ಟಿಲ್ಲ. ರೈತರನ್ನು ಕಂಟ್ರೋಲ್ ಮಾಡಲು ಪ್ರಯತ್ನ ಮಾಡಿದ್ದೇವೆ. ಎಲ್ಲವನ್ನು ಪರಿಶೀಲನೆ ಮಾಡುತ್ತಿದ್ದೇವೆ. ನಾನು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತೇನೆ ಎಂದರು.
ಈಗಾಗಲೇ 4-5 ಸರ್ಕಾರಿ ವಾಹನಗಳು ಹಾಗೂ ಇನ್ನಿತರ ವಾಹನಗಳು ಸೇರಿ 10 ಕ್ಕೂ ಹೆಚ್ಚು ಹಾನಿಯಾಗಿದೆ. ಇದುವರೆಗೂ ಯಾರನ್ನು ವಶಕ್ಕೆ ಪಡೆದಿಲ್ಲ. ಕೆಲವು ವಿಡಿಯೋಗಳನ್ನು ಪರಿಶೀಲನೆ ಮಾಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಎಡಿಜಿಪಿ ಹಿತೇಂದ್ರ ಆರ್ ತಿಳಿಸಿದರು.
ಈ ವೇಳೆ ಐಜಿಪಿ ಚೇತನ್ ಸಿಂಗ್ ರಾಥೋಡ್, ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಸೇರಿ ಮತ್ತಿತರರು ಇದ್ದರು.


