
ಪ್ರಗತಿವಾಹಿನಿ ಸುದ್ದಿ: ಮನೆಯ ಮೇಲೆ ಕಳೆದ ಒಂದು ವಾರದಿಂದ ಕಲ್ಲು ತೂರಾಟ ನಡೆಯುತ್ತಿದ್ದು, ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಭಜರಂಗದಳ ಹಾಗೂ ಬಿಜೆಪಿ ಕಾರ್ಯಕರ್ತರು ಕೆಲ ಮುಸ್ಲಿಂ ಯುವಕರನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದು, ಸಂಘರ್ಷಣಕ್ಕೆ ಕಾರಣವಾಗಿದೆ.
ಚಿಕ್ಕಮಗಳೂರು ನಗರದ ತಿಲಕ್ ಪಾರ್ಕ್ ಸಮೀಪ ಈ ಘಟನೆ ನಡೆದಿದೆ. ಸುಧಾನ ಎಂಬುವರ ಮನೆ ಮೇಲೆ ಕಳೆದ ಒಂದು ವಾರದಿಂದ ನಿರಂತರವಾಗಿ ಕಲ್ಲು ತೂರಾಟ ನಡೆಯುತಿತ್ತು. ಈ ವಿಚಾರವಾಗಿ ಪೊಲೀಸರು ಎರಡು ಪ್ರತ್ಯೇಕ ಎಫ್ಐಆರ್ಗಳನ್ನು ದಾಖಲಿಸಿದ್ದಾರೆ.
ಕಲ್ಲು ತೂರಾಟ ಮಾಡಿದವರ ಹಾಗೂ ಅವರನ್ನು ಹಿಡಿದು ಪೊಲೀಸರಿಗೊಪ್ಪಿಸಿದವರ ವಿರುದ್ಧವೂ ಬಸವನಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಸುಧಾ ಎಂಬವರ ಮನೆಯ ಮೇಲೆ ಕಲ್ಲು ಎಸೆದ ಆರೋಪದ ಮೇರೆಗೆ ಹುಸೇನ್ ಮತ್ತು ರಿಯಾನ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕಲ್ಲು ತೂರಾಟ ನಡೆಸಿದವರನ್ನು ಹಿಡಿದ ಶಾಮ್ ಮತ್ತು ಸಂತೋಷ್ ಮೇಲೂ ಹಲ್ಲೆ ಆರೋಪದಲ್ಲಿ ಎಫ್ಐಆರ್ ದಾಖಲಿಸಲಾಗಿದೆ. ಶಾಮ್ ಅವರು ಬಜರಂಗದಳ ಹಾಸನ ವಿಭಾಗದ ಸಹ ಸಂಚಾಲಕರಾಗಿದ್ದು, ಸಂತೋಷ್ ಬಿಜೆಪಿ ಯುವ ಮೋರ್ಚಾ ಚಿಕ್ಕಮಗಳೂರು ಜಿಲ್ಲಾಧ್ಯಕ್ಷರಾಗಿದ್ದಾರೆ.
ತಮ್ಮ ಮೇಲೆ ಬ್ಯಾಟ್ನಿಂದ ಹಲ್ಲೆ ನಡೆಸಲಾಗಿದೆ ಎಂದು ಹುಸೇನ್ ನೀಡಿದ ದೂರಿನ ಮೇರೆಗೆ ಪ್ರಕರಣ ದಾಖಲಿಸಲಾಗಿದ್ದು, ಗಾಯಗೊಂಡಿರುವ ಆಕ್ಷದ್ ಮತ್ತು ಹಸೇನ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅಕ್ಷದ್ ಹಾಗೂ ಹುಸೇನ್ ಮೇಲೆ BNS ಕಾಯ್ದೆಯ ವಿವಿಧ ಕಲಂಗಳ ಅಡಿ ಹಾಗೂ ಎಸ್ಸಿ ಎಸ್ಟಿ ದೌರ್ಜನ್ಯ ತಡೆ ಕಾಯ್ದೆಯ ಸೆಕ್ಷನ್ಗಳ ಅಡಿ ಪ್ರಕರಣ ದಾಖಲಿಸಲಾಗಿದೆ. ಮತ್ತೊಂದೆಡೆ ಶಾಮ್ ಮತ್ತು ಸಂತೋಷ್ ವಿರುದ್ಧವೂ BNS ವಿವಿಧ ಕಲಂಗಳಡಿ ಕೇಸ್ ದಾಖಲಿಸಲಾಗಿದೆ.
ಈ ಪ್ರಕರಣದಲ್ಲಿ, ಹಿಂದೂಗಳ ಮೇಲೂ ಕೈಗೊಳ್ಳುವಂತೆ ಮುಸ್ಲಿಂ ಸಮುದಾಯದವರು ಹಾಗೂ ಎಸ್ಡಿಪಿಐ ಮುಖಂಡರು ಆಗ್ರಹ ವ್ಯಕ್ತಪಡಿಸಿದ್ದರು. ಇದೇ ವೇಳೆ ವಿಹೆಚ್ಪಿ ಮತ್ತು ಬಜರಂಗದಳ ಮುಖಂಡರೂ ಪೊಲೀಸ್ ಠಾಣೆ ಮುಂದೆ ಜಮಾಯಿಸಿ ಆಕ್ರೋಶ ವ್ಯಕ್ತಪಡಿಸಿದ್ದರು. ರಾತ್ರಿ ಬಸವನಹಳ್ಳಿ ಪೊಲೀಸ್ ಠಾಣೆ ಎದುರು ನೂರಾರು ಮಂದಿ ಜಮಾಯಿಸಿದ ಪರಿಣಾಮ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು.
ತಿಲಕ್ ಪಾರ್ಕ್ ಸಮೀಪ ಹಿಂದೂಗಳ ಮನೆಯೊಂದರ ಮೇಲೆ ಕಳೆದ ಒಂದು ವಾರದಿಂದ ಕಿಡಿಗೇಡಿಗಳು ಆಗಾಗ ಕಲ್ಲು ತೂರಾಟ ಮಾಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಸೋಮವಾರ ರಾತ್ರಿ ಕಲ್ಲು ತೂರಾಟ ನಡೆಸುತ್ತಿದ್ದ ಸಂದರ್ಭದಲ್ಲಿ ಬಜರಂಗ ದಳದವರು ಅವರನ್ನು ಹಿಡಿದು ಬಸವನಹಳ್ಳಿ ಠಾಣೆ ಪೊಲೀಸರಿಗೆ ಒಪ್ಪಿಸಿದ್ದರು. ಇದಕ್ಕೆ ಎಸ್ಡಿಪಿಐ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಹಿಂದೂ ಸಂಘಟನೆಗಳ ಮುಖಂಡರ ವಿರುದ್ಧ ಕ್ರಮಕ್ಕೆ ಆಗ್ರಹಿಸಿತ್ತು.
ನಂತರ ಪೊಲೀಸ್ ಠಾಣೆ ಮುಂದೆ ಹಿಂದೂ ಸಂಘಟನೆಗಳ ಹಾಗೂ ಎಸ್ಡಿಪಿಐ ಮುಖಂಡರು ಜಮಾಯಿಸಿ ಕೆಲ ಕಾಲ ಉದ್ವಿಗ್ನ ಪರಿಸ್ಥಿತಿ ಉಂಟಾಗಿತ್ತು. ಸದ್ಯ ಪೊಲೀಸ್ ಬಂದೋಬಸ್ತ್ ಬಿಗಿಗೊಳಿಸಲಾಗಿದೆ.




