
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯಾದ್ಯಂತ ಕೊರೊನಾ ವೈರಸ್ ವ್ಯಾಪಕವಾಗಿ ಹರಡುತ್ತಿರುವ ಬೆನ್ನಲ್ಲೇ ಶಾಲೆಗಳನ್ನು ಪುನರಾರಂಭಿಸಲು ಶಿಕ್ಷಣ ಇಲಾಖೆ ಮುಂದಾಗಿದೆ ಎಂಬ ಮಾತು ಕೇಳಿಬಂದಿತ್ತು. ಇದೀಗ ಸ್ಪಷ್ಟನೆ ನೀಡಿರುವ ಸಚಿವ ಸುರೇಶ್ ಕುಮಾರ್, ಸಧ್ಯಕ್ಕೆ ಯಾವುದೇ ಶಾಲೆಗಳನ್ನು ತೆರೆಯುವುದಿಲ್ಲ ಎಂದಿದ್ದಾರೆ.
ಖಾಸಗಿ ಶಾಲೆಗಳ ಒತ್ತಡಕ್ಕೆ ಮಣಿದು ಸರ್ಕಾರ ಶಾಲೆಗಳನ್ನು ಪುನರಾರಂಭ ಮಾಡಲು ಹೊರಟಿದ್ದು, ಮಕ್ಕಳ ಜೀವದ ಜತೆ ಚಲ್ಲಾಟ ನಡೆಸುತ್ತಿದೆ ಎಂಬ ಆರೋಪ ಕೂಡ ಕೇಳಿ ಬಂದಿತ್ತು. ಅಲ್ಲದೇ ಕೊರೊನಾದಂತ ಇಂಥಹ ಸಂಕಷ್ಟ ಸ್ಥಿತಿಯಲ್ಲಿ ಮಕ್ಕಳನ್ನು ಶಾಲೆಗೆ ಕಳುಹಿಸಲು ಪೋಷಕರು ಕೂಡ ವಿರೋಧ ವ್ಯಕ್ತಪಡಿಸಿದ್ದರು.
ರಾಜ್ಯಾದ್ಯಂತ ಶಾಲೆಗಳನ್ನು ತೆರೆಯುವ ಬಗ್ಗೆ ತೀವ್ರ ಚರ್ಚೆ ಗೊಂದಲಗಳು ಹೆಚ್ಚಿದ್ದರಿಂದ ಈ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್ ಬುಕ್ ಲೈವ್ ನಲ್ಲಿ ಸ್ಪಷ್ಟನೆ ನೀಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ಶಿಕ್ಷಣ ಇಲಾಖೆ ತರಾತುರಿಯಲ್ಲಿ ಶಾಲೆಗಳನ್ನು ತೆರೆಯುವುದಿಲ್ಲ. ಇಂಥಹ ಯಾವುದೇ ನಿರ್ಧಾರಗಳನ್ನು ಕೂಡ ಕೈಗೊಳ್ಳುವುದಿಲ್ಲ ಈ ಬಗ್ಗೆ ಯಾವುದೇ ಆತಂಕ ಬೇಡ ಎಂದಿದ್ದಾರೆ.
ಸಧ್ಯಕ್ಕೆ ಸುರಕ್ಷತೆ, ಸಾಮಾಜಿಕ ಅಂತರದ ಬಗ್ಗೆ ಅಧಿಕಾರಿಗಳ ಜತೆ ಚರ್ಚಿಸಲಾಗಿದೆ. ಅಲ್ಲದೇ ಪೋಷಕರ ಅಭಿಪ್ರಾಯಗಳಿಗೂ ಆದ್ಯತೆ ನೀಡುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಯಾವುದೇ ಶಾಲೆಗಳನ್ನು ಸಧ್ಯಕ್ಕೆ ತೆರೆಯುವುದಿಲ್ಲ ಎಂದು ತಿಳಿಸಿದರು.
ಜೂನ್ 25ರಿಂದ ಎಸ್ ಎಸ್ ಎಲ್ ಸಿ ಪರೀಕ್ಷೆ ನಡೆಸುತ್ತಿದ್ದೇವೆ. ಅದು ಜುಲೈ 4ಕ್ಕೆ ಮುಗಿಯಲಿದೆ. ಆ ನಂತರ ಪರಿಸ್ಥಿತಿಯನ್ನು ಅವಲೋಕಿಸಿ ಮುಂದಿನ ನಿರ್ಧಾರ ಕೈಗೊಳ್ಳಲಾಗುವುದು. ಶಾಲೆಗಳನ್ನು ತೆರೆಯುವುದು ಪ್ರತಿಷ್ಠೆ ಪ್ರಶ್ನೆ ಅಲ್ಲ. ಮಕ್ಕಳ ಹಿತದೃಷ್ಟಿಯಿಂದ ಅವರ ಸುರಕ್ಷತೆ ಮುಖ್ಯವಾಗುತ್ತದೆ ಎಂದು ಹೇಳಿದರು.