Kannada NewsKarnataka NewsLatest

ಮರಣ ಪ್ರಮಾಣ ನಿಯಂತ್ರಿಸಲು ಕಟ್ಟುನಿಟ್ಟಿನ ಕ್ರಮಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸೂಚನೆ

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಜಿಲ್ಲೆಯಲ್ಲಿ  ಕೋವಿಡ್-೧೯ ಸೋಂಕು ಹಾಗೂ ಮರಣ ಪ್ರಮಾಣ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೋವಿಡ್ ಕುರಿತಂತೆ ನಗರದ ಪ್ರವಾಸಿಮಂದಿರದಲ್ಲಿ ಬುಧವಾರ (ಅ.7) ಹಿರಿಯ ಅಧಿಕಾರಿಗಳ ಸಭೆ ನಡೆಸಿದ ಅವರು, ಸರ್ಕಾರದ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದರು.
ಮಾಸ್ಕ್ ಧರಿಸುವುದನ್ನು ಕಡ್ಡಾಯವಾಗಿ ಜಾರಿಗೆ ತರಬೇಕು. ನಿಯಮ ಉಲ್ಲಂಘಿಸುವವರ ಮೇಲೆ ದಂಡ ವಿಧಿಸುವ ಮೂಲಕ ಮುಲಾಜಿಲ್ಲದೇ ಕ್ರಮ ಕೈಗೊಳ್ಳಬೇಕು. ಸಾಮಾಜಿಕ ಅಂತರ ಪಾಲನೆಗೆ ಮೊದಲ ಆದ್ಯತೆ ನೀಡಬೇಕು ಎಂದು ನಿರ್ದೇಶನ ನೀಡಿದರು.
ಕೋವಿಡ್-೧೯ ತಪಾಸಣೆಗೆ ಸಂಬಂಧಿಸಿದಂತೆ ಇರುವ ಅಡೆತಡೆಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿಯನ್ನು ಪಡೆದುಕೊಂಡ ಮುಖ್ಯಮಂತ್ರಿಗಳು, ಮುಂಬರುವ ದಿನಗಳಲ್ಲಿ ಕೇಂದ್ರ ಸರ್ಕಾರ ನೀಡಲಿರುವ ಹೊಸ ಮಾರ್ಗಸೂಚಿ ಆಧರಿಸಿ, ಇನ್ನಷ್ಟು ಚಟುವಟಿಕೆಗಳು ಆರಂಭಗೊಳ್ಳಲಿರುವುದರಿಂದ ಮುನ್ನೆಚ್ಚರಿಕೆಯಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ತಿಳಿಸಿದರು.
ಜಿಲ್ಲೆಯಲ್ಲಿ ಕೋವಿಡ್-೧೯ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಭೆಯಲ್ಲಿ ಮಾಹಿತಿಯನ್ನು ನೀಡಿದ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಅವರು, ಸದ್ಯಕ್ಕೆ ಸೋಂಕು ಹಾಗೂ ಮರಣ ಪ್ರಮಾಣದಲ್ಲಿ ಕ್ರಮೇಣ ಇಳಿಕೆ ಕಂಡುಬರುತ್ತಿದೆ ಎಂದರು.
ಮಾರ್ಗಸೂಚಿಗಳ ಅನುಷ್ಠಾನಕ್ಕೆ ಇನ್ನಷ್ಟು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು.
ಗೃಹಸಚಿವರಾದ ಬಸವರಾಜ ಬೊಮ್ಮಾಯಿ, ಜಿಲ್ಲಾ ಉಸ್ತುವಾರಿ ಸಚಿವರಾದ ರಮೇಶ್ ಜಾರಕಿಹೊಳಿ ಉಪಸ್ಥಿತರಿದ್ದರು.
ಬೆಳಗಾವಿ ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ ನಿಂಬರಗಿ, ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ತುಕ್ಕಾರ, ಬಿಮ್ಸ್ ನಿರ್ದೇಶಕ ಡಾ.ವಿನಯ ದಾಸ್ತಿಕೊಪ್ಪ, ಬೆಳಗಾವಿ ಉಪ ವಿಭಾಗಾಧಿಕಾರಿಗಳಾದ ಅಶೋಕ ತೇಲಿ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.

ಇದನ್ನೂ ಓದಿ –

Home add -Advt

Related Articles

Back to top button