ಶಾಲೆ ಆರಂಭ: ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿಕೆ ಬಿಡುಗಡೆ

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಶಾಲೆಗಳನ್ನು ಆರಂಭಿಸುವ ಕುರಿತು ತೀವ್ರ ಚರ್ಚೆಗಳು ನಡೆಯುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.
ಹೇಳಿಕೆಯ ಪೂರ್ಣ ಪಾಠ ಹೀಗಿದೆ –

“ಕೋವಿಡ್ -19 ಸೋಂಕು ಹರಡುತ್ತಿರುವ ಈ ಸಂದರ್ಭದಲ್ಲಿ ಶಾಲೆಗಳನ್ನು ಪ್ರಾರಂಭಿಸುವ ಕುರಿತು ಪರ ಮತ್ತು ವಿರೋಧ ಚರ್ಚೆಗಳು ಆಗುತ್ತಿವೆ. ಈ ಬಗ್ಗೆ ಮಾಧ್ಯಮಗಳು ಸಹ ಅಭಿಯಾನವನ್ನು ಪ್ರಾರಂಭಿಸಿರುವುದನ್ನು ಗಮನಿಸಿರುತ್ತೇನೆ. ಅಲ್ಲದೆ ಈ ಕುರಿತು ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಸಹ ತಮ್ಮ ನಿಲುವುಗಳನ್ನು ವ್ಯಕ್ತಪಡಿಸಿರುತ್ತಾರೆ. ಮಕ್ಕಳ ಆರೋಗ್ಯ ಮತ್ತು ಭವಿಷ್ಯದ ಹಿತ ದೃಷ್ಟಿಯಿಂದ ಶಾಲೆಗಳನ್ನು ಪ್ರಾರಂಭಿಸುವ ಮುನ್ನ ಎಲ್ಲ ಪಕ್ಷಗಳ ಮುಖಂಡರು, ತಜ್ಞರು, ಹಿರಿಯ ಅಧಿಕಾರಿಗಳ ಸಭೆಯನ್ನು ಕರೆದು ಸಾಧಕ, ಬಾಧಕಗಳನ್ನು ಚರ್ಚಿಸಿ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಾಗುವುದು.
ಅಲ್ಲಿಯವರೆಗೆ ಶಾಲೆಗಳನ್ನು ಪ್ರಾರಂಭಿಸುವ ಬಗ್ಗೆ ಉಂಟಾಗಿರುವ ಯಾವುದೇ ಊಹಾಪೋಹ ಮತ್ತು ವದಂತಿಗಳಿಗೆ ಕಿವಿಗೊಡಬಾರದು ಎಂದು ಪೋಷಕರಿಗೆ ಮನವಿ ಮಾಡುತ್ತೇನೆ. ಮತ್ತು ಈ ಬಗ್ಗೆ ಜಾಗೃತಿ ಮೂಡಿಸಲು ಮಾಧ್ಯಮಗಳಲ್ಲಿ ಕೋರುತ್ತೇನೆ”




