
ಪ್ರಗತಿವಾಹಿನಿ ಸುದ್ದಿ, ಬೆಂಗಳೂರು – ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ ಬಿಡುಗಡೆಗೊಂಡಿರುವ ಅನುದಾನ ಕಡಿತ ಕುರಿತು ವಿಧಾನ ಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ನಾಳೆ ವಿಧಾನ ಪರಿಷತ್ತಿನ ಎಲ್ಲ 75 ಸದಸ್ಯರ ಸಭೆಯನ್ನು ಕರೆದಿದ್ದಾರೆ.
ಬೆಂಗಳೂರಿನ ವಿಧಾನ ಸೌಧದ ಮೂರನೇ ಮಹಡಿಯಲ್ಲಿರುವ ಕೊಠಡಿ ಸಂಖ್ಯೆ: 334ರಲ್ಲಿ ಮಧ್ಯಾಹ್ನ 3 ಘಂಟೆಗೆ ನಡೆಯಲಿರುವ ಸಭೆಯಲ್ಲಿ ಆರ್ಥಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ, ಯೋಜನಾ ಮತ್ತು ಸಾಂಖ್ಯಿಕ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಯೂ ಸೇರಿದಂತೆ ವಿವಿಧ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.
ಶಾಸಕರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಲ್ಲಿ 2018-19, 2019-20 ಮತ್ತು 2020-21ನೇ ಸಾಲಿನಲ್ಲಿ ಪ್ರತಿಯೊಬ್ಬ ಶಾಸಕರಿಗೂ ಪ್ರತಿವರ್ಷ ರಾಜ್ಯ ಸರಕಾರ ನೀಡುತ್ತಿರುವ ಎರಡು ಕೋಟಿ ರೂಪಾಯಿಗಳ ಅನುದಾನವನ್ನು ಕಡಿತಗೊಳಿಸಲಾಗಿದೆ.
ಅಲ್ಲದೇ ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ ವ್ಯಾಪ್ತಿಯಲ್ಲಿ ಬರುವ ಶಾಸಕರು ಲೋಕಸಭೆ/ರಾಜ್ಯಸಭೆ ಸದಸ್ಯರುಗಳಿಗೆ ಅವರ ಕ್ಷೇತ್ರದ ಅಭಿವೃದ್ಧಿಗೆ 2018-19ನೇ ಸಾಲಿನ ಆಯ-ವ್ಯಯದಲ್ಲಿ ಮುಖ್ಯಮಂತ್ರಿಯವರು ಘೋಷಿಸಿದ್ದ 95 ಕೋಟಿ ಅನುದಾನ ಈವರೆಗೆ ಬಿಡುಗಡೆಯಾಗಿಲ್ಲ ಹಾಗೂ ಅನುದಾನಕ್ಕೆ ಅನುಗುಣವಾಗಿ ಆಯಾಯಾ ವರ್ಷಕ್ಕೆ ಕೈಗೊಳ್ಳಬಹುದಾದ ಕಾಮಗಾರಿಗಳು ಬಹುತೇಕ ಸ್ಥಗಿತಗೊಂಡಿವೆ ಮತ್ತು ಕೆಲವು ಕಾಮಗಾರಿಗಳು ಆತಳಿತಾತ್ಮಕ ಮಂಜೂರಾತಿ ಪಡೆದಿದ್ದರೂ ಪೂರ್ಣ ರೀತಿಯಲ್ಲಿ ಅನುಷ್ಠಾನಗೊಂಡಿಲ್ಲ ಎನ್ನುವ ವಿಧಾನ ಪರಿಷತ್ತಿನ ಹಲವು ಸದಸ್ಯರ ಅಭಿಪ್ರಾಯದ ಹಿನ್ನೆಲೆಯಲ್ಲಿ ಈ ಸಭೆಯನ್ನು ಕರೆಯಲಾಗಿದೆ.




