Kannada NewsKarnataka NewsNationalPolitics

*ಬಿಡದಿ ಸಂತ್ರಸ್ತ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ ನ್ಯಾಯ: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ*

ಪ್ರಗತಿವಾಹಿನಿ ಸುದ್ದಿ: “ರಾಮನಗರ ಜಿಲ್ಲೆಯ ಭದ್ರಾಪುರ ಗ್ರಾಮದ ಅಪ್ರಾಪ್ತ ಬಾಲಕಿ ಖುಷಿ ಹತ್ಯೆಯ ವಿಚಾರದಲ್ಲಿ ಅವರ ಕುಟುಂಬಸ್ಥರಿಗೆ ನ್ಯಾಯ ದೊರಕಿಸಿ ಕೊಡಲಾಗುವುದು. ತಪ್ಪಿತಸ್ಥರ ವಿರುದ್ಧ ಪೊಲೀಸರು ಕಠಿಣ ಕ್ರಮ ಜರುಗಿಸಲಿದ್ದಾರೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು.

ರಾಮನಗರ ಜಿಲ್ಲೆ ಬಿಡದಿಯ ಭದ್ರಾಪುರದ ಖುಷಿ ಎನ್ನುವ ಹಕ್ಕಿಪಿಕ್ಕಿ ಬುಡಕಟ್ಟು ಜನಾಂಗದ ಬಾಲಕಿಯ ಶವ ರೈಲ್ವೇ ಹಳಿ ಬಳಿ ಪತ್ತೆಯಾಗಿತ್ತು. ಆಕೆಯ ಕುಟುಂಬ ಸದಸ್ಯರಿಗೆ ಬುಧವಾರ ಸಾಂತ್ವನ ಹೇಳಿ, ಜಿಲ್ಲಾಡಳಿತ ಪರವಾಗಿ ₹4,12,500 ಹಾಗೂ ಪಂಚಾಯ್ತಿ ವತಿಯಿಂದ ₹50,000 ಪರಿಹಾರ ಚೆಕ್ ವಿತರಿಸಿ ನಂತರ ಮಾಧ್ಯಮಗಳ ಜತೆ ಮಾತನಾಡಿದರು.

Home add -Advt

“ಈ ಅನುಮಾನಾಸ್ಪದ ಸಾವಿನ ಪ್ರಕರಣದ ಬಗ್ಗೆ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ಈ ವಿಚಾರದಲ್ಲಿ ಯಾರ ಒತ್ತಡಕ್ಕೂ ಒಳಗಾಗದೆ ನ್ಯಾಯಪರ,  ನಿಷ್ಠುರವಾಗಿ ತನಿಖೆ ನಡೆಯಲಿದೆ” ಎಂದರು.

“ಯಾರ‌ ಮೇಲಾದರೂ ಅನುಮಾನವಿದೆಯೇ ಎಂದು ಬಾಲಕಿಯ ಕುಟುಂಬಸ್ಥರ ಬಳಿ ಕೇಳಿದೆ. ಅವರು ಇಲ್ಲ ಎಂದು ಹೇಳುತ್ತಿದ್ದಾರೆ. ತನಿಖೆ ಮಾಡುವುದು ಪೊಲೀಸ್ ಇಲಾಖೆ ಕರ್ತವ್ಯ” ಎಂದರು.

ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಕೊಲೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಎಲ್ಲಾ ಆಯಾಮದಲ್ಲಿಯೂ ಪೊಲೀಸರು ತನಿಖೆ ಮಾಡಲಿದ್ದಾರೆ. ದ್ವೇಷದಿಂದ ನಡೆದಿದೆಯೇ? ಅತ್ಯಾಚಾರವಾಗಿದೆಯೇ? ಏನಾದರೂ ಬೇರೆ ಕಾರಣ ಇದೆಯೇ ಎಂಬುದು ತನಿಖೆಯಿಂದ ಗೊತ್ತಾಗಲಿದೆ. ನಾವು ನ್ಯಾಯ ಒದಗಿಸುತ್ತೇವೆ ” ಎಂದರು.

“ಬಾಲಕಿಯು ಹಾಸ್ಟೆಲ್ ನಲ್ಲಿ ಇದ್ದುಕೊಂಡು ವ್ಯಾಸಂಗ ಮಾಡುತ್ತಿತ್ತು. ರಜೆಗೆಂದು ಊರಿಗೆ ಬಂದ ಸಂದರ್ಭದಲ್ಲಿ ಈ ಅನಾಹುತ ಘಟನೆ ನಡೆದಿದೆ. ಮಾತುಬಾರದ, ಕಿವಿ ಕೇಳದಿದ್ದರೂ ಚುರುಕಾಗಿದ್ದ ಬಾಲಕಿ ಎಂದು ಎಲ್ಲರೂ ಹೇಳುತ್ತಿದ್ದಾರೆ” ಎಂದರು.

ಘಟನೆ ನಡೆದಿರುವ ಈ ಊರಿನಲ್ಲಿ ಮೂಲಸೌಕರ್ಯಗಳ ಕೊರತೆಯಿದೆ, ಬೀದಿ ದೀಪಗಳ ವ್ಯವಸ್ಥೆಯಿಲ್ಲ ಎನ್ನುವ ಆರೋಪದ ಬಗ್ಗೆ ಕೇಳಿದಾಗ, “ಈಗ ಈ ಪ್ರಕರಣದ ಜತೆಗೆ ಬೇರೆ ವಿಚಾರಗಳನ್ನು ಬೆರೆಸಲು ಹೋಗುವುದಿಲ್ಲ. ಮೂಲ ಸೌಕರ್ಯಗಳ ವ್ಯವಸ್ಥೆ ಮಾಡಲಾಗುವುದು” ಎಂದರು.

ಆರೋಪಿಗಳ ಬಂಧನವಾಗಿದೆಯೇ ಎಂದಾಗ, “ತನಿಖೆ ನಡೆಯುತ್ತಿದೆ. ಈ ಬಗ್ಗೆ ಪೊಲೀಸರು ಮಾಹಿತಿ ನೀಡುತ್ತಾರೆ. ನಾನು ಅದನ್ನು ಹೇಳಲು ಆಗುವುದಿಲ್ಲ” ಎಂದು ತಿಳಿಸಿದರು.

Related Articles

Back to top button