Kannada NewsLatestNational

*ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ: ಎಂಟು ಆನೆಗಳು ಸಾವು*

ಪ್ರಗತಿವಾಹಿನಿ ಸುದ್ದಿ: ಇಂದು ನಸುಕಿನ ಜಾವ ಸೈರಂಗ್-ನವದೆಹಲಿ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು 8 ಆನೆಗಳು ಸ್ಥಳದಲ್ಲೇ ಸಾವನ್ನಪ್ಪಿರುವ ಆಘಾತಕಾರಿ ಘಟನೆ ಅಸ್ಸಾಂನ ಹೊಜೈ ಜಿಲ್ಲೆಯಲ್ಲಿ ನಡೆದಿದೆ.‌

ಈ ಘಟನೆಯಲ್ಲಿ ಒಂದು ಮರಿ ಆನೆ ಗಂಭೀರವಾಗಿ ಗಾಯಗೊಂಡಿದೆ. ಈ ಭೀಕರ ಅಪಘಾತದಲ್ಲಿ ರಾಜಧಾನಿ ಎಕ್ಸ್‌ಪ್ರೆಸ್‌ನ ಎಂಜಿನ್ ಮತ್ತು ಐದು ಬೋಗಿಗಳು ಹಳಿ ತಪ್ಪಿವೆ. ರೈಲು ಮಿಜೋರಾಂನ ಸೈರಂಗ್‌ನಿಂದ (ಐಜಾಲ್‌ ಬಳಿ) ದೆಹಲಿಯ ಆನಂದ್ ವಿಹಾರ್ ಟರ್ಮಿನಲ್‌ಗೆ ತೆರಳುತ್ತಿದ್ದಾಗ, ನಸುಕಿನ ಜಾವ 2:17ರ ಸುಮಾರಿಗೆ ಈ ಘಟನೆ ಸಂಭವಿಸಿದೆ.

Home add -Advt

ಹಾನಿಗೊಳಗಾದ ಬೋಗಿಗಳಲ್ಲಿದ್ದ ಪ್ರಯಾಣಿಕರನ್ನು ರೈಲಿನ ಇತರ ಖಾಲಿ ಬೋಗಿಗಳಿಗೆ ಸ್ಥಳಾಂತರಿಸಲಾಗಿದೆ. ರೈಲು ಗುವಾಹಟಿಯನ್ನು ತಲುಪಿದ ನಂತರ, ಎಲ್ಲಾ ಪ್ರಯಾಣಿಕರಿಗೆ ಅನುಕೂಲವಾಗುವಂತೆ ಹೆಚ್ಚುವರಿ ಬೋಗಿಗಳನ್ನು ಅಳವಡಿಸಿ, ರೈಲು ಪ್ರಯಾಣವನ್ನು ಮುಂದುವರಿಸಲಿದೆ ಎಂದು ರೈಲ್ವೆ ಅಧಿಕಾರಿಗಳು ತಿಳಿಸಿದ್ದಾರೆ.

ರೈಲು ಹಳಿ ತಪ್ಪಿದ ಕಾರಣ ಮತ್ತು ಹಳಿಗಳ ಮೇಲೆ ಆನೆಗಳ ಅವಶೇಷಗಳು ಹರಡಿಕೊಂಡಿದ್ದರಿಂದ ಅಸ್ಸಾಂ ಹಾಗೂ ಈಶಾನ್ಯದ ಇತರ ಭಾಗಗಳಿಗೆ ತೆರಳುವ ರೈಲು ಸಂಚಾರಕ್ಕೆ ಭಾರಿ ಅಡಚಣೆಯಾಗಿದೆ. ಹಲವಾರು ರೈಲುಗಳ ಮಾರ್ಗಗಳನ್ನು ಬದಲಾಯಿಸಲಾಗಿದ್ದು, ಮುನಾಮುಖ್-ಕಂಪುರ ವಿಭಾಗದ ಮೂಲಕ ಹಾದುಹೋಗುವ ರೈಲುಗಳನ್ನು ಉತ್ತರ ಪ್ರದೇಶ ಮಾರ್ಗಕ್ಕೆ ತಿರುಗಿಸಲಾಗಿದೆ ಎಂದು ನಾಗಾಂವ್ ವಿಭಾಗೀಯ ಅರಣ್ಯ ಅಧಿಕಾರಿ ಸುಭಾಷ್ ಕದಮ್ ಮಾಹಿತಿ ನೀಡಿದ್ದಾರೆ.

ಕಳೆದ ಐದು ವರ್ಷಗಳಲ್ಲಿ 70ಕ್ಕೂ ಹೆಚ್ಚು ಆನೆಗಳು ರೈಲಿಗೆ ಸಿಕ್ಕಿ ಸಾವನ್ನಪ್ಪಿದ ಘಟನೆಗಳು ನಡೆದಿವೆ. ಈ ದುರಂತವು ಆನೆಗಳ ಸುರಕ್ಷತೆಯ ಕುರಿತು ಮತ್ತೊಮ್ಮೆ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕಿದೆ.

Related Articles

Back to top button