Kannada NewsKarnataka NewsLatest

*ಲೋಕಾಯುಕ್ತ ದಾಳಿ: ಕಿಮ್ಸ್ ಆಡಳಿತಾಧಿಕಾರಿ ಮನೆ ಮೇಲೆ ರೇಡ್*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಲೋಕಾಯುಕ್ತ ಅಧಿಕಾರಿಗಳು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಳಿ ನಡೆಸಿ, ಭ್ರಷ್ಟ ಅಧಿಕಾರಿಗಳಿಗೆ ಬಿಸಿ ಮುಟ್ಟಿಸಿದ್ದಾರೆ.

ಅಕ್ರಮ ಆಸ್ತಿ ಗಳಿಕೆ ಆರೋಪದಲ್ಲಿ ಕಿಮ್ಸ್‌ ಆಡಳಿತಾಧಿಕಾರಿ ಬಿ. ಕಲ್ಲೇಶ್ ನಿವಾಸ ಹಾಗೂ ಅವರ ಆಪ್ತ ಸಂಬಂಧಿಕರ ಮನೆಗಳ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

Home add -Advt

ಕೊಪ್ಪಳ ಜಿಲ್ಲೆಯ ವಿವಿಧೆಡೆ ಒಟ್ಟು ಆರು ಸ್ಥಳಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ. ಕೊಪ್ಪಳ ತಾಲೂಕಿನ ಭಾಗ್ಯನಗರದಲ್ಲಿರುವ ಬಿ. ಕಲ್ಲೇಶ್ ನಿವಾಸ, ಅವರ ಅತ್ತೆಯ ಮನೆ, ನವಚೇತನ ಶಾಲೆ, ವಿಜ್ಞಾನ ಕಾಲೇಜು ಹಾಗೂ ಯಲಬುರ್ಗಾ ತಾಲೂಕಿನ ಚಿಕ್ಕಮನ್ನಾಪುರ ಗ್ರಾಮದಲ್ಲಿರುವ ಕಲ್ಲೇಶ್ ಸ್ವಗ್ರಾಮದ ಮನೆ ಮೇಲೂ ದಾಳಿ ನಡೆದಿದೆ.

ಸುಮಾರು 30ಕ್ಕೂ ಹೆಚ್ಚು ಅಧಿಕಾರಿಗಳನ್ನೊಳಗೊಂಡ ಲೋಕಾಯುಕ್ತ ತಂಡ ಈ ಕಾರ್ಯಾಚರಣೆಯಲ್ಲಿ ಭಾಗವಹಿಸಿದೆ.

ಕೊಪ್ಪಳ ಲೋಕಾಯುಕ್ತ ಡಿವೈಎಸ್‌ಪಿ ಲೋಕೇಶ್ ನೇತೃತ್ವದಲ್ಲಿ ಗದಗ, ಹಾವೇರಿ ಮತ್ತು ರಾಯಚೂರು ಜಿಲ್ಲೆಗಳ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳು, ಆಸ್ತಿ ವಿವರಗಳು ಮತ್ತು ಹಣಕಾಸು ವ್ಯವಹಾರಗಳ ಬಗ್ಗೆ ಪರಿಶೀಲನೆ ನಡೆಸುತ್ತಿದ್ದಾರೆ. ಬಿ. ಕಲ್ಲೇಶ್ ಈ ಹಿಂದೆ ವಾಲ್ಮೀಕಿ ನಿಗಮ ಹಗರಣದಲ್ಲಿ ಸುದ್ದಿಯಾಗಿದ್ದರು.


Related Articles

Back to top button