Latest

ಕರ್ನಾಟಕ ಸಾಮರಸ್ಯದ ನಾಡೆಂಬುದು ಭಾರತ್ ಜೋಡೋ ಯಾತ್ರೆಯಿಂದ ಸಾಬೀತಾಗಿದೆ: ರಾಹುಲ್ ಗಾಂಧಿ

ಪ್ರಗತಿವಾಹಿನಿ ಸುದ್ದಿ, ರಾಯಚೂರು: ಕರ್ನಾಟಕ ಖಂಡಿತವಾಗಿಯೂ ಶಾಂತಿ ಹಾಗೂ ಸಾಮರಸ್ಯದ ನಾಡು. ಭಾರತ ಜೋಡೋ ಯಾತ್ರೆಯ ಮೂಲಕ ಈ ಮಾತು ಮತ್ತೊಮ್ಮೆ ಸಾಬೀತಾಗಿದೆ.’ ಎಂದು ಸಂಸದ ರಾಹುಲ್ ಗಾಂಧಿ ಹೇಳಿದ್ದಾರೆ.

ಜಿಲ್ಲೆಯ ಯರಮರಸ್ ನ ಕೃಷ್ಣಾ ನದಿಯ ತಟದಿಂದ ಕರ್ನಾಟಕದ ಜನತೆಗೆ ಸಂದೇಶ ನೀಡಿ ಭಾರತ್ ಜೋಡೊ ಯಾತ್ರೆ ಯಶಸ್ಸಿಗೆ ಸಹಕರಿಸಿರುವುದಕ್ಕೆ ಧನ್ಯವಾದ ಅರ್ಪಿಸಿರುವ ಅವರು, ಕರ್ನಾಟಕದ ಮಹಾಕವಿ ಕುವೆಂಪು ಅವರು ಈ ಭೂಮಿಯನ್ನು ಸರ್ವ ಜನಾಂಗದ ಶಾಂತಿಯ ತೋಟ’ ಎಂದು ಬಣ್ಣಿಸಿದ್ದರು.  ಶಾಂತಿಯ ತೋಟವಾದ ಕರ್ನಾಟಕವನ್ನು ಬಿಜೆಪಿಯ ದ್ವೇಷ ಮತ್ತು ದುರಾಡಳಿತದ ಪ್ರಯೋಗಾಲಯವನ್ನಾಗಿ ಮಾಡಲು ಕಾಂಗ್ರೆಸ್ ಪಕ್ಷ ಎಂದಿಗೂ ಬಿಡುವುದಿಲ್ಲ ಎಂದಿದ್ದಾರೆ. 

ನಮ್ಮ ರಾಜ್ಯದ ನಾಯಕರು, ಕರ್ನಾಟಕದ ಶ್ರೀಮಂತ ಸಂಸ್ಕೃತಿ ಮತ್ತು ಕೋಟ್ಯಂತರ ಕನ್ನಡಿಗರ ಬೆಂಬಲದಿಂದ, ಅವಿರತ ಪ್ರಯತ್ನಗಳ ಮೂಲಕ ಪ್ರೀತಿ, ಶಾಂತಿ ಹಾಗೂ ಸೌಹಾರ್ದತೆಯ ಹಾದಿಯಲ್ಲಿ ಈ ಅದ್ಭುತ ರಾಜ್ಯದ ನಿಜವಾದ ಸಾಮರ್ಥ್ಯವನ್ನು ನಾವು ಅನಾವರಣಗೊಳಿಸುವ ದಿನಗಳು ಶೀಘ್ರದಲ್ಲೇ ಬರಲಿವೆ ಎಂದು ಅವರು ಹೇಳಿದ್ದಾರೆ. 

ಯಾತ್ರೆಯು ಕರ್ನಾಟಕದ ಮೂಲಕ ಸಾಗುವ ವೇಳೆ, ಇಲ್ಲಿನ ಜನರ ಅಪರಿಮಿತ ಸಾಮರ್ಥ್ಯವನ್ನು ದುರ್ಬಲಗೊಳಿಸಲಾಗುತ್ತಿದೆ ಎನ್ನುವುದು ಸ್ಪಷ್ಟವಾಯಿತು. ವಿವಿಧ ಬೆಳೆ ಬೆಳೆಯುವ ಪ್ರತಿಯೊಂದು ಪ್ರದೇಶದ ರೈತರೂ ಹೆಚ್ಚುತ್ತಿರುವ ವೆಚ್ಚಗಳು, ಅನಿಶ್ಚಿತ ಇಳುವರಿ ಹಾಗೂ ಬೆಲೆ ಏರಿಳಿತದಿಂದ ತಮ್ಮ ಕುಟುಂಬಗಳನ್ನು ನಿರ್ವಹಿಸಲು ಕಷ್ಟಪಡುತ್ತಿದ್ದಾರೆ.

Home add -Advt

ನಾಡಿನ ಯುವಕರು ಎಷ್ಟೇ ಪ್ರಯತ್ನಿಸಿದರೂ, ತಮ್ಮ ಆಕಾಂಕ್ಷೆಗಳನ್ನು ಪೂರೈಸುವ ಉದ್ಯೋಗಾವಕಾಶಗಳನ್ನು ಕಂಡುಕೊಳ್ಳಲು ಸಾಧ್ಯವಾಗುತ್ತಿಲ್ಲ. ಸಣ್ಣ ಉದ್ಯಮಿಗಳು ಅಸಮರ್ಪಕ ಸಹಕಾರ ಅಥವಾ ಬೆಂಬಲವೇ ಇಲ್ಲದೇ ಉದ್ಯಮವನ್ನು ಮುಚ್ಚುತ್ತಿದ್ದಾರೆ. ಹಾಗೆಯೇ ಮಾರುಕಟ್ಟೆಯನ್ನೂ ಸಹ ಈ ಸರಕಾರ ಕೇವಲ ಕೆಲವೇ ಕೆಲವು ಉದ್ಯಮಿಗಳ ಪರವಾಗಿ ಮಾಡಿದೆ. ಉದ್ಯೋಗ ಖಾತ್ರಿ ಯೋಜನೆಯ ಕಾರ್ಮಿಕರು, ಮಹಿಳಾ ಕಾರ್ಮಿಕರು, ನೇಕಾರರು ಸೇರಿದಂತೆ ವಿವಿಧ ಕ್ಷೇತ್ರದಲ್ಲಿ ಕೆಲಸ ಮಾಡುತ್ತಿರುವ ಜನರು ಆದಾಯ ಗಳಿಕೆಯಲ್ಲಿ ಸೋಲುತ್ತಿದ್ದಾರೆ. ಸಮಾಜದ ಶೋಷಿತ, ಹಿಂದುಳಿದ ವರ್ಗಗಳು ಹಾಗೂ ಅಲ್ಪಸಂಖ್ಯಾತರು ದ್ವೇಷ ಮತ್ತು ಹಿಂಸೆಯನ್ನು ಎದುರಿಸುತ್ತಿದ್ದಾರೆ. ರಾಜ್ಯದ ಭಾಷೆಗಳನ್ನು, ವೈವಿಧ್ಯಮಯ ಸಂಸ್ಕೃತಿಯನ್ನು ಹಾಗೂ ಇತಿಹಾಸವನ್ನು ತಿರುಚಿ ನಾಶಪಡಿಸಲಾಗುತ್ತಿದೆ ಎಂದು ರಾಹುಲ್ ಆರೋಪಿಸಿದ್ದಾರೆ.

‘ಕಳಬೇಡ ಕೊಲಬೇಡ, ಹುಸಿಯ ನುಡಿಯಲು ಬೇಡ, ಮುನಿಯಬೇಡ, ಅನ್ಯರಿಗೆ ಅಸಹ್ಯ ಪಡಬೇಡ’ ಎಂದು ಗುರು ಬಸವಣ್ಣನವರು ಹೇಳಿದ್ದರು. ಕರ್ನಾಟಕದಲ್ಲಿ ಅವರ ಬೋಧನೆಗಳಿಗೆ ತದ್ವಿರುದ್ಧವಾಗಿ ಬಿಜೆಪಿ ನಡೆದುಕೊಳ್ಳುತ್ತಿದೆ. ಇಡೀ ದೇಶಕ್ಕೆ ಬೆಳವಣಿಗೆಯ ದಾರಿದೀಪವಾಗಿದ್ದ ಕರ್ನಾಟಕ ರಾಜ್ಯ ಇಂದು ‘ಶೇ.40 ಕಮಿಷನ್’ ಸರಕಾರಕ್ಕೆ ಕುಖ್ಯಾತಿಗಳಿಸಿದ್ದು, ಬಿಜೆಪಿಯ ‘ಸೂಟು-ಬೂಟಿನ ಲೂಟಿ ಸರಕಾರ’ಕ್ಕೆ ತಕ್ಕ ಉದಾಹರಣೆಯಾಗಿದೆ. ಉದ್ಯೋಗಕ್ಕಾಗಿ ಲಂಚ, ಗುತ್ತಿಗೆಗೆ ಲಂಚ, ಜನ ಸಾಮಾನ್ಯರ ಕೆಲಸಕ್ಕೆ ಲಂಚ, ಕರ್ನಾಟಕದಲ್ಲಿ ಬಿಜೆಪಿಗೆ ಮಾರಾಟವಾಗದ ಉಳಿದ ಯಾವುದೇ ಸರ್ಕಾರೀ ಸೇವೆ ಇಲ್ಲ. ಸಾಮಾಜಿಕ ಸೌಹಾರ್ದತೆ ಮತ್ತು ಸಾರ್ವಜನಿಕ ವಲಯದ ಬೆಳೆವಣಿಗೆ ಕುಂಠಿತವಾಗಿದ್ದು, ಅದು ಬಡವರು ಹಾಗೂ ದುರ್ಬಲರನ್ನು ಹೆಚ್ಚು ಭಾದಿಸುತ್ತಿದೆ ಮತ್ತು ಆರ್ಥಿಕ ಪ್ರಗತಿಗೆ ಪಾರ್ಶ್ವವಾಯು ಹಿಡಿಯುವಂತೆ ಮಾಡಿದೆ ಎಂದು ರಾಹುಲ್ ಹೇಳಿದ್ದಾರೆ.

ಆನಂದ ಮಾಮನಿಯವರ ನಿಧನದಿಂದ ಉತ್ತಮ ಜನಪ್ರತಿನಿಧಿಯನ್ನು ಕಳೆದುಕೊಂಡಂತಾಗಿದೆ: ಸಿಎಂ ಬೊಮ್ಮಾಯಿ ಕಂಬನಿ

Related Articles

Back to top button