Kannada NewsLatestNationalPolitics

*ತೆಲಂಗಾಣದ ಮುಖ್ಯಮಂತ್ರಿಗಳ ಆರೋಪ ಚುನಾವಣಾ ಪ್ರೇರಿತ*

ರಾಜ್ಯದ ಜನರಿಗೆ ಮೋಸ ಮಾಡುವ ಪ್ರಶ್ನೆಯೇ ಇಲ್ಲ : ಮುಖ್ಯಮಂತ್ರಿ ಸಿದ್ದರಾಮಯ್ಯ

ಪ್ರಗತಿವಾಹಿನಿ ಸುದ್ದಿ; ತೆಲಂಗಾಣ: ತೆಲಂಗಾಣದ ಮುಖ್ಯಮಂತ್ರಿಗಳು ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳನ್ನು ಸರಿಯಾಗಿ ಜಾರಿ ಮಾಡಲಾಗುತ್ತಿಲ್ಲ ಎಂಬ ಆರೋಪಗಳು ಚುನಾವಣಾ ಪ್ರೇರಿತ ಮತ್ತು ಸತ್ಯಕ್ಕೆ ದೂರವಾಗಿದೆ. ಕರ್ನಾಟಕ ರಾಜ್ಯದ ಜನತೆಯನ್ನು ಮೋಸ ಮಾಡಿರುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಕಾಂಗ್ರೆಸ್ ಪಕ್ಷ ನೀಡಿರುವ ಎಲ್ಲ ಪಂಚ ಗ್ಯಾರಂಟಿಗಳನ್ನು 5 ವರ್ಷಗಳವರೆಗೆ ಅನುಷ್ಠಾನಗೊಳಿಸಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ತೆಲಂಗಾಣದ ಮತ್ಕಲ್ ವಿಧಾನಸಭೆ ಕ್ಷೇತ್ರದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಇಂದು ರೋಡ್ ಶೋ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ವಕಿತಿ ಶ್ರೀಹರಿ ಅವರ ಪರ ಮತ ಯಾಚಿಸಿದರು.

ಈ ವೇಳೆ ಕಾಂಗ್ರೆಸ್ ಪಕ್ಷದ ಪ್ರಚಾರ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಮೇ ತಿಂಗಳಲ್ಲಿ ಅಧಿಕಾರಕ್ಕೆ ಬಂದಿತು. ನಾವು ಅಧಿಕಾರ ಸ್ವೀಕರಿಸಿದ ಮೇ 20 ರ ದಿನದಂದೇ ಕಾಂಗ್ರೆಸ್ ನೀಡಿದ್ದ ಐದೂ ಗ್ಯಾರಂಟಿಗಳ ಅನುಷ್ಠಾನಗೊಳಿಸಲು ಸಂಪುಟ ಸಭೆ ನಡೆಸಿ ತೀರ್ಮಾನಿಸಿ, ಸಂಬಂಧಪಟ್ಟ ಸರ್ಕಾರಿ ಆದೇಶಗಳನ್ನು ಅಂದೇ ನೀಡಲಾಯಿತು ಎಂದರು.

ಶಕ್ತಿ ಯೋಜನೆಗೆ ಮಹಿಳೆಯರ ಮೆಚ್ಚುಗೆ :

ನಮ್ಮ ಮೊದಲ ಗ್ಯಾರಂಟಿಯಾದ ಮಹಿಳೆರಿಗೆ ಉಚಿತ ಪ್ರಯಾಣ ಸೌಲಭ್ಯ ಒದಗಿಸುವ ಶಕ್ತಿ ಯೋಜನೆಯನ್ನು ಜೂನ್ 11 ರಿಂದ ಜಾರಿಗೊಳಿಸಲಾಯಿತು. ನಿನ್ನೆಯ ದಿನ ರಾಜ್ಯದಲ್ಲಿ 100.47 ಕೋಟಿ ಮಹಿಳೆಯರು ಉಚಿತವಾಗಿ ಪ್ರಯಾಣಿಸಿದ ಶಕ್ತಿ ಯೋಜನೆಯ ಯಶಸ್ವಿ ಅನುಷ್ಠಾನದ ಸಂಭ್ರಮವನ್ನು ಆಚರಿಸಲಾಯಿತು. ರಾಜ್ಯದಲ್ಲಿ ಯಾವ ಜಾತಿಧರ್ಮಗಳ ಬೇಧವಿಲ್ಲದೇ ಪ್ರತಿದಿನ 60 ಲಕ್ಷ ಮಹಿಳೆಯರು ಸರ್ಕಾರಿ ಬಸ್ ನಲ್ಲಿ ಉಚಿತವಾಗಿ ಪ್ರಯಾಣಿಸುತ್ತಾತೆ. ಶ್ರಮಿಕ , ಉದ್ಯೋಗಸ್ಥ ಸೇರಿದಂತೆ ಎಲ್ಲ ವರ್ಗದ ಮಹಿಳೆಯರು ಯೋಜನೆಯ ಲಾಭಪಡೆಯುತ್ತಿದ್ದು, ಇದರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ತೆಲಂಗಾಣದ ಮುಖ್ಯಮಂತ್ರಿಗಳು ಚುನಾವಣೆಯ ಹಿನ್ನಲೆಯಲ್ಲಿ ಕರ್ನಾಟಕ ಸರ್ಕಾರದ ಬಗ್ಗೆ ಸುಳ್ಳು ಹೇಳುತ್ತಿದ್ದಾರೆ. ಆದರೆ ಇಲ್ಲಿನ ಇತರೆ ಪಕ್ಷಗಳು ಏಕೆ ಸುಳ್ಳು ಹೇಳುತ್ತಿವೆ ಎಂದು ಪ್ರಶ್ನಿಸಿದರು.

ಅನ್ನಭಾಗ್ಯ:

ಕಾಂಗ್ರೆಸ್ ನ ಪಂಚ ಗ್ಯಾರಂಟಿಗಳಲ್ಲಿ ಅನ್ನಭಾಗ್ಯ ಯೋಜನೆಯಡಿ 10 ಕೆಜಿ ಅಕ್ಕಿಯನ್ನು ನೀಡುವ ಭರವಸೆಯನ್ನು ನೀಡಿತು. ಇದರ ಅನುಷ್ಠಾನಕ್ಕಾಗಿ ಹೆಚ್ಚುವರಿ 5 ಕೆಜಿ ಅಕ್ಕಿಯನ್ನು ನೀಡಲು ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು. ಆದರೆ ಕೇಂದ್ರ ಸರ್ಕಾರ ರಾಜ್ಯದ ಈ ಮನವಿಗೆ ಸ್ಪಂದಿಸಲಿಲ್ಲ. ಆದ್ದರಿಂದ 5 ಕೆಜಿ ಅಕ್ಕಿಯ ಬದಲು ಅದರ ಮೊತ್ತವನ್ನು ಜನರಿಗೆ ನೀಡಲು ಸರ್ಕಾರ ನಿರ್ಧರಿಸಿತು.ಈ ನಿಟ್ಟಿನಲ್ಲಿ 4.37 ಕೋಟಿ ಪ್ರತಿಯೊಬ್ಬರಿಗೆ ತಲಾ 700 ರೂ.ಗಳನ್ನು ಪ್ರತಿ ಫಲಾನುಭವಿಯ ಖಾತೆಗೆ ನೀಡಲಾಗುತ್ತಿದೆ ಎಂದರು.

ಗೃಹಜ್ಯೋತಿ:

ಗೃಹಜ್ಯೋತಿ ಯೋಜನೆಯನ್ನು ಜುಲೈ 2023 ರಿಂದಲೇ ಜಾರಿಗೊಳಿಸಲಾಗಿದ್ದು,ರಾಜ್ಯದ ಪ್ರತಿ ಮನೆಗೆ 200 ಯೂನಿಟ್ವರೆಗೆ ಉಚಿತ ವಿದ್ಯುತ್ ನ್ನು ಉಚಿತವಾಗಿ ನೀಡಲಾಗುತ್ತಿದೆ. 12 ತಿಂಗಳ ವಿದ್ಯುತ್ ಬಳಕೆಯ ಸರಾಸರಿಗೆ ಶೇ. 10 ರಷ್ಟು ಹೆಚ್ಚಿನ ಯೂನಿಟ್ ಸೇರಿಸಿ ನೀಡಲಾಗುತ್ತಿದೆ ಎಂದರು.

ಗೃಹಲಕ್ಷ್ಮಿ:

ಗೃಹಲಕ್ಷ್ಮಿ ಯೋಜನೆಯಡಿ 1.14 ಕೋಟಿ ಮಹಿಳಾ ಯಜಮಾನಿಗೆ ತಲಾ 2000 ರೂ. ಗಳನ್ನು ವಿತರಿಸಲಾಗುತ್ತಿದೆ. ಈ ಯೋಜನೆಯ ನೋಂದಣಿ ನಿರಂತರವಾಗಿ ನಡೆಯುತ್ತಿದ್ದು, ಯಾವುದೇ ಅಡಚಣೆಗಳಿಲ್ಲದೇ ಯೋಜನೆಯ ಲಾಭವನ್ನು ಮಹಿಳೆಯರು ಪಡೆಯಬಹುದಾಗಿದೆ ಎಂದರು.

ಜನವರಿ 2024ರಲ್ಲಿ ಯುವನಿಧಿ :

ಯುವನಿಧಿ ಯೋಜನೆಯಡಿ ರಾಜ್ಯದ ನಿರುದ್ಯೋಗಿ ಯುವಜನರನ್ನು ಸಶಕ್ತಗೊಳಿಸುವ ಉದ್ದೇಶದಿಂದ ಜಾರಿಗೊಳಿಸಲಾಗುವುದು. 2022-23ನೇ ಸಾಲಿನಲ್ಲಿ ಪದವಿ ಪಡೆದ ಯುವಜನರಿಗೆ 2 ವರ್ಷಗಳವರೆಗೆ ಮಾಸಿಕ 3000 ರೂ. ಹಾಗೂ 2 ವರ್ಷದವರಗೆ ಡಿಪ್ಲೊಮಾ ಮಾಡಿದ ಯುವಜನರಿಗೆ ಮಾಸಿಕ 1500 ರೂ.ಗಳನ್ನು ನೀಡಲಾಗುವುದು. ಇದಲ್ಲದೇ ಯುವಜನರಿಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನೂ ನೀಡಲಾಗುತ್ತದೆ. ಈ ಯೋಜನೆಯನ್ನು ಜನವರಿ 2024 ರಿಂದ ಜಾರಿಗೆ ತರಲಾಗುವುದು. ಕರ್ನಾಟಕ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಒಂದೇ ವರ್ಷದೊಳಗೇ ಜಾರಿಗೊಳಿಸಿದೆ. ಈ ವರ್ಷ ಎಲ್ಲ ಗ್ಯಾರಂಟಿ ಯೋಜನೆಗಳಿಗೆ ಸುಮಾರು 38 ಸಾವಿರ ಕೋಟಿಗಳು ವೆಚ್ಚವಾಗುತ್ತಿದೆ ಎಂದರು.

ಬಿಜೆಪಿ ತನ್ನ ಪ್ರಣಾಳಿಕೆಯ ಭರವಸೆಗಳನ್ನು ಈಡೇರಿಸಿಲ್ಲ

ಕರ್ನಾಟಕ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನುಡಿದಂತೆ ನಡೆದಿದ್ದೇವೆ. ಈ ಹಿಂದೆಯೂ ಕಾಂಗ್ರೆಸ್ ಸರ್ಕಾರ ನೀಡಿದ್ದ 165 ಭರವಸೆಗಳಲ್ಲಿ 158 ಭರವಸೆಗಳನ್ನು ಈಡೇರಿಸಿತ್ತು. ಆದರೆ ಬಿಜೆಪಿ ಸರ್ಕಾರ ತಮ್ಮ ಪ್ರಣಾಳಿಕೆಯಲ್ಲಿ ಸಾಕಷ್ಟು ಭರವಸೆಗಳನ್ನು ನೀಡಿದ್ದರೂ , 2019-2023ರ ತಮ್ಮ ಅವಧಿಯಲ್ಲಿ ಕೇವಲ ಶೇ. 10 ರಷ್ಟು ಭರವಸೆಗಳನ್ನು ಈಡೇರಿಸಿದ್ದಾರೆ. ಪ್ರಧಾನಿ ಮೋದಿಯವರು ಬಿಡುಗಡೆಗೊಳಿಸಿದ್ದ ಬಿಜೆಪಿ ಪ್ರಣಾಳಿಕೆಯಲ್ಲಿನ ಭರವಸೆಗಳನ್ನು ಈಡೇರಿಸದೇ ಇರುವುದು ಸತ್ಯ. ಆದ್ದರಿಂದ ರಾಜ್ಯದ ಕಾಂಗ್ರೆಸ್ ಸರ್ಕಾರದ ಮೇಲೆ ವಿರೋಧಪಕ್ಷಗಳು ಮಾಡುತ್ತಿರುವ ಆರೋಪಗಳು ಚುನಾವಣಾ ಪ್ರೇರಿತವಾಗಿದ್ದು, ಸತ್ಯಕ್ಕೆ ದೂರವಾಗಿದೆ ಎಂದರು.

ರಾಜ್ಯದ ಆರ್ಥಿಕತೆ ಸದೃಢವಾಗಿದೆ:

ಪ್ರಧಾನಿ ಮೋದಿಯವರು ರಾಜಸ್ಥಾನದ ತಮ್ಮ ಚುನಾವಣಾ ಭಾಷಣದಲ್ಲಿ ಕರ್ನಾಟಕ ಗ್ಯಾಟಂಟಿ ಯೋಜನೆಗಳನ್ನು ಜಾರಿ ಮಾಡಲಾಗುವುದಿಲ್ಲ. ಹಾಗೂ ರಾಜ್ಯದ ಆರ್ಥಿಕತೆ ಕುಂಠಿತವಾಗುತ್ತದೆ ಎಂದು ಟೀಕಿಸಿದ್ದರು. ಅವರ ಈ ಮಾತು ಸತ್ಯಕ್ಕೆ ದೂರವಾಗಿದ್ದು, ರಾಜ್ಯದ ಆರ್ಥಿಕತೆ ಸದೃಢವಾಗಿದ್ದು, ಅನುದಾನಕ್ಕೆ ಕೊರತೆ ಇಲ್ಲ. ಆದ್ದರಿಂದ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಖಂಡಿತ ಜಯ ಸಾಧಿಸಲಿದ್ದು, ಅಧಿಕಾರಕ್ಕೆ ಬರಲಿದೆ. ತೆಲಂಗಾಣದಲ್ಲಿ ಪಕ್ಷ ನೀಡಿರುವ ಆರು ಗ್ಯಾರಂಟಿಗಳನ್ನು ಕಾಂಗ್ರೆಸ್ ಈಡೇರಿಸಲಿದ್ದು, ಇದರ ಬಗ್ಗೆ ತೆಲಂಗಾಣ ಜನರಿಗೆ ಯಾವುದೇ ಸಂಶಯ ಬೇಡ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button