Kannada NewsKarnataka NewsLatest

ಸಂತ್ರಸ್ತರಿಗೆ ಪರಿಹಾರ ತಲುಪದಿದ್ದರೆ ಅಧಿಕಾರಿ ಅಮಾನತು

 ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಮನೆಗಳನ್ನು ಕಳೆದುಕೊಂಡಿರುವ ಯಾವುದೇ ಕುಟುಂಬವೂ ಸರ್ಕಾರ ನೀಡುವ ಪರಿಹಾರ ಮತ್ತು ಇತರೆ ಸೌಲಭ್ಯಗಳಿಂದ ವಂಚಿತಗೊಳ್ಳದಂತೆ ಎಚ್ಚರಿಕೆ ವಹಿಸಬೇಕು.
ನಿಜವಾದ ಸಂತ್ರಸ್ತರು ಪರಿಹಾರದಿಂದ ವಂಚಿತಗೊಂಡರೆ ಸಂಬಂಧಪಟ್ಟ ಸ್ಥಳೀಯ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ಎಚ್ಚರಿಕೆ ನೀಡಿದರು.
ಜಿಲ್ಲೆಯ ಪ್ರವಾಹಬಾಧಿತ ಗ್ರಾಮಗಳಿಗೆ ಭಾನುವಾರ(ಅ.೨೭) ಭೇಟಿ ನೀಡಿದ ಅವರು, ಹಿರೇಬಾಗೇವಾಡಿ ಗ್ರಾಮದಲ್ಲಿ ಮಳೆಯಿಂದ ಉಂಟಾದ ಹಾನಿಯನ್ನು ಪರಿಶೀಲನೆ ಸಂದರ್ಭದಲ್ಲಿ ಮಾತನಾಡಿದರು.
ಪ್ರತಿಯೊಂದು ಸಂತ್ರಸ್ತ ಕುಟುಂಬಕ್ಕೆ ಪರಿಹಾರ ತಲುಪಬೇಕು ಎಂಬ ಉದ್ದೇಶದಿಂದ ಸರ್ಕಾರ ಈಗಾಗಲೇ ಸಾಕಷ್ಟು ಹಣವನ್ನು ಬಿಡುಗಡೆಗೊಳಿಸಿದೆ.
ಮನೆಗಳು ಮತ್ತು ಬೆಳೆಹಾನಿಯನ್ನು ಸಮೀಕ್ಷೆ ಮಾಡುವ ಅಧಿಕಾರಿಗಳು ಸರ್ಕಾರದ ಆಶಯವನ್ನು ಅರಿತುಕೊಂಡು ಕೆಲಸ ಮಾಡಬೇಕು. ಒಂದು ವೇಳೆ ಅರ್ಹ ಕುಟುಂಬಗಳು ಪರಿಹಾರದಿಂದ ವಂಚಿತಗೊಂಡಿದ್ದರೆ ಅಂತಹ ಕುಟುಂಬಗಳಿಗೂ ಪರಿಹಾರ ನೀಡಲಾಗುವುದು ಎಂದು ಸಚಿವರು ಭರವಸೆಯನ್ನು ನೀಡಿದರು.
ಧಾರವಾಡದಿಂದ ಆಗಮಿಸಿದ ಸಚಿವ ಆರ್.ಅಶೋಕ್ ಅವರು, ಕಿತ್ತೂರು ತಾಲ್ಲೂಕಿನ ಅಂಬಡಗಟ್ಟಿ ಗ್ರಾಮದಲ್ಲಿರುವ ಹುತಾತ್ಮ ಯೋಧ ಶಶಿಧರ ಗುರುವೈನವರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಬೆಳಗಾವಿ ಜಿಲ್ಲಾ ಪ್ರವಾಸವನ್ನು ಆರಂಭಿಸಿದರು.
ಮೊದಲು ಅಂಬಡಗಟ್ಟಿ ಗ್ರಾಮದಲ್ಲಿ ಹಾನಿಗೊಳಗಾದ ಪಿ.ಎಂ.ಜಿ.ಎಸ್.ವೈ ರಸ್ತೆಯನ್ನು ವೀಕ್ಷಿಸಿದರು. ಅಂಬಡಗಟ್ಟಿ-ಬಚ್ಚನಕೆರೆ ನಡುವಿನ ಅಯ್ಯನಕೆರೆ ನೀರಿನಿಂದ ರಸ್ತೆ ಹಾಳಾಗಿರುವುದನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ತಮ್ಮ ಅಹವಾಲು ಸಲ್ಲಿಸಿದ ಗ್ರಾಮಸ್ಥರು, ಅಂಬಡಗಟ್ಟಿ-ಬಚ್ಚನಕೆರೆ ರಸ್ತೆ ನಿರ್ಮಿಸಿಕೊಡುವಂತೆ ಗ್ರಾಮಸ್ಥರು ಮನವಿ ಮಾಡಿಕೊಂಡರು.
ಆದಷ್ಟು ಬೇಗನೇ ರಸ್ತೆ ನಿರ್ಮಾಣ ಕಾಮಗಾರಿ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಎಂ.ಕೆ.ಹುಬ್ಬಳ್ಳಿ ಸಮೀಪದ ಗದ್ದಿ ಕೆರೆ; ಹಿರೇಬಾಗೇವಾಡಿ ಗ್ರಾಮದಲ್ಲಿ ಹಾನಿಗೊಳಗಾದ ಮನೆ ಮತ್ತು ಬೆಳೆಗಳನ್ನು ಪರಿಶೀಸಿದರು.
ಗದ್ದಿಕೆರೆ ತುಂಬಿ ಹರಿಯುತ್ತಿರುವುದರಿಂದ ತಾತ್ಕಾಲಿಕವಾಗಿ ಉಸುಕಿನ ಚೀಲಗಳನ್ನು ಇಡುವಂತೆ ಸೂಚಿಸಿದರು. ನೀರು ಕಡಿಮೆಯಾದ ಬಳಿಕ ರಸ್ತೆ ನಿರ್ಮಿಸಲು ಸೂಚನೆ ನೀಡಿದರು.
ಕಾಕತಿ ಗ್ರಾಮದ ರಾಷ್ಟ್ರೀಯ ಹೆದ್ದಾರಿ-೪ರ ಪಕ್ಕದಲ್ಲಿ ಹಾಳಾಗಿರುವ ರಸ್ತೆ ಮತ್ತು ಬಹುಗ್ರಾಮ ಕುಡಿಯುವ ನೀರು ಯೋಜನೆಯ ಪೈಪ್ ಲೈನ್ ವೀಕ್ಷಿಸಿದರು.
ಇದಾದ ಬಳಿಕ ನಿಪ್ಪಾಣಿ ತಾಲ್ಲೂಕಿನ ಜತ್ರಾಟ ಗ್ರಾಮದಲ್ಲಿ ಹಾನಿಗೊಳಗಾದ ಮನೆಗಳು ಮತ್ತು ಬೆಳೆಯನ್ನು ಪರಿಶೀಲಿಸಿದರು.
ಈ ಸಂದರ್ಭದಲ್ಲಿ ರಂಜನಾ ರಮೇಶ್ ಪಾಟೀಲ ಅವರ ಮನೆಗೆ ಭೇಟಿ ನೀಡಿ ಪರಿಶೀಲಿಸಿದರು.
 ಕುಸಿದ ಮನೆಯು ಮೂರು ಜನರು ಸಹೋದರರಿಗೆ ಸೇರಿರುವುದರಿಂದ ಮನೆ ನಿರ್ಮಾಣಕ್ಕೆ ನೀಡಲಾಗುವ ಐದು ಲಕ್ಷ ರೂಪಾಯಿ ಪರಿಹಾರವನ್ನು ಮೂರೂ ಜನರಿಗೆ ನೀಡಬೇಕು ಎಂದು ರಂಜನಾ ಪಾಟೀಲ ಸಚಿವರಿಗೆ ಮನವಿ ಮಾಡಿಕೊಂಡರು.
ಇದನ್ನು ಪರಿಶೀಲಿಸುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ ನೀಡಿದರು.
ಚನ್ನಮ್ಮನ ಕಿತ್ತೂರು ಶಾಸಕ ಮಹಾಂತೇಶ ದೊಡಗೌಡರ, ತಮ್ಮ ಕ್ಷೇತ್ರದಲ್ಲಿ ಉಂಟಾಗಿರುವ ಹಾನಿಯ ಬಗ್ಗೆ ವಿವರಿಸಿದರಲ್ಲದೆ ಮೂಲಸೌಕರ್ಯಗಳ ನಿರ್ಮಾಣ ಮತ್ತು ಪರಿಹಾರ ಕಾರ್ಯಗಳನ್ನು ಚುರುಕುಗೊಳಿಸುವಂತೆ ಮನವಿ ಮಾಡಿಕೊಂಡರು.
ಜತ್ರಾಟ ಗ್ರಾಮಕ್ಕೆ ಭೇಟಿ ನೀಡಿದ ವೇಳೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಸಚಿವರಾದ ಶಶಿಕಲಾ ಜೊಲ್ಲೆ, ಸಂಸದ ಅಣ್ಣಾಸಾಹೇಬ್ ಜೊಲ್ಲೆ, ವಿಧಾನಪರಿಷತ್ ಮುಖ್ಯ ಸಚೇತಕರಾದ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಸಂಜಯ ಪಾಟೀಲ, ಮತ್ತಿತರರು ಉಪಸ್ಥಿತರಿದ್ದರು.
ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಅವರು, ಪ್ರವಾಹ ಹಾಗೂ ಧಾರಾಕಾರ ಮಳೆಯಿಂದ ಉಂಟಾಗಿರುವ ಹಾನಿಯ ಕುರಿತು ಸಚಿವರಿಗೆ  ಮಾಹಿತಿಯನ್ನು ನೀಡಿದರು.
ಉತ್ತರ ವಲಯ ಐಜಿಪಿ ಎಚ್.ಜಿ. ರಾಘವೇಂದ್ರ ಸುಹಾಸ್, ಬೆಳಗಾವಿ ನಗರ ಪೊಲೀಸ್ ಆಯುಕ್ತರಾದ ಬಿ.ಎಸ್.ಲೋಕೇಶ್ ಕುಮಾರ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ರಾಜೇಂದ್ರ ಕೆ.ವಿ., ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಜಿಲಾನಿ ಮೊಖಾಶಿ, ಬೈಲಹೊಂಗಲ ಉಪ ವಿಭಾಗಾಧಿಕಾರಿ ಶಿವಾನಂದ ಭಜಂತ್ರಿ, ತಹಶೀಲ್ದಾರ ಪ್ರವೀಣ ಜೈನ್ ಮತ್ತಿತರರು ಉಪಸ್ಥಿತರಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button