
ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಶನಿವಾರ ಬೆಳಗಾವಿ ನಗರದಲ್ಲಿ ಸುರಿಯುತ್ತಿರುವ ಮಳೆಗೆ ಜನ ಹೈರಾಣಾಗಿದ್ದಾರೆ. ನಗರದ ಬಹುತೇಕ ಮುಖ್ಯ ರಸ್ತೆಗಳಲ್ಲಿ ನೀರು ಪ್ರವಾಹದಂತೆ ಹರಿಯುತ್ತಿದ್ದು, ವಾಹನ ಸವಾರರು ಹಾಗೂ ಜನಸಾಮಾನ್ಯರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಮಳೆಗಾಲ ಆರಂಭವಾಗುವ ಮುನ್ನ ಬೆಳಗಾವಿ ಮಹಾನಗರ ಪಾಲಿಕೆ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮವಾಗಿ ಚರಂಡಿಗಳನ್ನು ಸ್ವಚ್ಛ ಗೊಳಿಸದೆ ಇರುವುದು ಮತ್ತು ಹೂಳೆತ್ತದಿರುವುದು ಇಷ್ಟೆಲ್ಲ ಅವಾಂತರಕ್ಕೆ ಕಾರಣವಾಗಿದೆ. ಬೆಳಗಾವಿ ಹಳೆ ಪಿಬಿ ರಸ್ತೆ, ಬಸವೇಶ್ವರದ ಬಳಿ ಪಾಲಿಕೆ ಕಾಂಪ್ಲೆಕ್ಸ್, ಗ್ಲೋಬಲ್ ಟಾಕೀಸ್ ಸೇರಿ ವಿವಿಧ ಭಾಗಗಳಲ್ಲಿ ಮಳೆ ಅವಾಂತರ ಸೃಷ್ಟಿಸಿದೆ.
ಸತತವಾಗಿ ಮಳೆ ಬೀಳುತ್ತಿರುವುದರಿಂದ ಮಳೆ ನೀರು ಸರಿಯಾಗಿ ಚರಂಡಿಗಳಲ್ಲಿ ಹರಿದು ಹೋಗದೆ, ಮನೆ, ಅಂಗಡಿ ಮುಂಗಟ್ಟುಗಳ ಒಳಗೆ ನುಗ್ಗಿತ್ತಿದೆ. ಚರಂಡಿಗಳೆಲ್ಲ ಬ್ಲಾಕ್ ಆಗಿ ರಸ್ತೆಗಳ ಮೇಲೆ ನೀರು ನದಿಯ ಪ್ರವಾಹದಂತೆ ಹರಿಯುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ