
ಪ್ರಗತಿವಾಹಿನಿ ಸುದ್ದಿ : ಜಮ್ಮುಕಾಶ್ಮೀರದ ಪಹಲ್ಗಾಮ್ ನಲ್ಲಿ ಪಾಕಿಸ್ತಾನದ ಉಗ್ರರ ದಾಳಿಗೆ 28 ಮಂದಿ ಬಲಿಯಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಭಯೋತ್ಪಾದಕ ದಾಳಿಗೆ ಸಂಬಂಧಿಸಿದ ಪರಿಸ್ಥಿತಿಯ ಕುರಿತು ಇಂದು ಸರ್ವಪಕ್ಷ ಸಭೆ ಕರೆಯಲಾಗಿದ್ದು, ಗೃಹ ಸಚಿವ ಅಮಿತ್ ಶಾ ಮತ್ತು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಎಲ್ಲಾ ಪಕ್ಷಗಳೊಂದಿಗೆ ಈ ಬಗ್ಗೆ ಮಾತನಾಡಲಿದ್ದಾರೆ.
ಲಷ್ಕರ್ ಎ ತೋಯ್ದಾ ಸಂಘಟನೆಯ ಅಂಗವಾದ ಒಂದು ತಂಡ ಈ ದಾಳಿಯ ಹೊಣೆ ಹೊತ್ತಿದ್ದು, ನಾಲ್ವರು ಉಗ್ರರು ಹಾಗೂ ಮೂವರು ದಾಳಿಯ ಪ್ರಾಯೋಜಕರನ್ನು ಈಗಾಗಲೇ ಗುರುತಿಸಲಾಗಿದೆ. ಈಗಾಗಲೇ ಪಾಕಿಸ್ತಾನದ ವಿರುದ್ಧ ಹಲವು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳುವ ಮುನ್ಸೂಚನೆಯನ್ನು ಕೇಂದ್ರ ಸರ್ಕಾರ ನೀಡಿದೆ.
ಈ ನಿರ್ಧಾರದ ಅಂಗವಾಗಿ ಸಿಂದೂ ನದಿಯ ಒಪ್ಪಂದವನ್ನೂ ಸಹ ಮರುಪರಿಶೀಲನೆಗೊಳಪಡಿಸಲಾಗುತ್ತಿದೆ. ನೆರೆರಾಷ್ಟ್ರ ಪಾಕಿಸ್ತಾನವನ್ನು ಎಲ್ಲಾ ರೀತಿಯಿಂದಲೂ ಮೂಲೆಗುಂಪು ಮಾಡಲು ಭಾರತ ಸರ್ಕಾರ ಶ್ರಮಿಸುತ್ತಿದೆ. ಈಗಾಗಲೇ ಅಮೆರಿಕ, ರಷ್ಯಾ ಬ್ರಿಟನ್ ಸೇರಿದಂತೆ ವಿಶ್ವದ ಪ್ರಮುಖ ರಾಷ್ಟ್ರಗಳು ಭಾರತದ ಬೆಂಬಲಕ್ಕೆ ನಿಂತಿರುವುದು ಪಾಕಿಸ್ತಾನವನ್ನು ಆತಂಕಕ್ಕೊಳಪಡಿಸಿದೆ.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಪ್ರತಿಪಕ್ಷ ನಾಯಕರು ಬುಧವಾರ ಈ ಕುರಿತು ಪ್ರತಿಕ್ರಿಯಿಸಿ ಕೇಂದ್ರಕ್ಕೆ ಎಲ್ಲಾ ರೀತಿಯ ಸಹಕಾರ ನೀಡುವುದಾಗಿ ಘೋಷಿಸಿದ್ದರು.