*ಅರಣ್ಯಾಧಿಕಾರಿಗಳ ಗುಂಡಿಗೆ ಬಲಿಯಾದವರು ತಮಿಳಿಗರು: ಸಿಎಂ ವಿಜಯ್ ಅಚ್ಚರಿ ಹೇಳಿಕೆ*

ಪ್ರಗತಿವಾಹಿನಿ ಸುದ್ದಿ: ಚಾಮರಾಜನಗರ ಜಿಲ್ಲೆಯ ಕಾವೇರಿ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಅರಣ್ಯಾಧಿಕಾರಿಗಳು ನಡೆಸಿದ ಗುಂಡಿನ ಚಕಮಕಿಯಲ್ಲಿ ಮೂವರು ಶಂಕಿತ ಬೇಟೆಗಾರರು ತಮಿಳು ಮೂಲದವರಾಗಿದ್ದಾರೆ ಎಂದು ತಮಿಳುನಾಡು ಸಿಎಂ ವಿಜಯ್ ಅಚ್ಚರಿ ಹೇಳಿಕೆ ನೀಡಿದ್ದಾರೆ.
ಮೃತಪಟ್ಟ ಆ್ಯಂಟೋನಿ ಸಾಮಿ, ಜಾನ್ ರೋಸ್ ಪೀಟರ್ ಮತ್ತು ಕುಮಾರ್ ಇವರು ತಮಿಳು ಮೂಲದವರಾಗಿದ್ದಾರೆ. ಇವರನ್ನು ಏಕಾಏಕಿ ಗುಂಡಿಕ್ಕಿ ಕೊಂದಿದ್ದು ಖಂಡನಾರ್ಹ ಈ ಘಟನೆಯ ಕುರಿತು ಉನ್ನತ ಮಟ್ಟದ ಹಾಗೂ ನಿಷ್ಪಕ್ಷಪಾತ ತನಿಖೆ ನಡೆಯಬೇಕು ಎಂದು ಒತ್ತಾಯಿಸಿದ್ದಾರೆ. ಅಲ್ಲದೆ, ಮೃತರ ಕುಟುಂಬಗಳಿಗೆ ಸೂಕ್ತ ಪರಿಹಾರ ಹಾಗೂ ನೆರವು ನೀಡುವಂತೆ ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದ್ದಾರೆ.
ಆಗಸ್ಟ್ 15ರ ಮುಂಜಾನೆ ಕಾವೇರಿ ವನ್ಯಜೀವಿ ಅಭಯಾರಣ್ಯದೊಳಗೆ ಅಕ್ರಮವಾಗಿ ಪ್ರವೇಶಿಸಿ ವನ್ಯಜೀವಿಗಳ ಬೇಟೆಯಲ್ಲಿ ತೊಡಗಿದ್ದ ಶಂಕಿತ ಬೇಟೆಗಾರರ ತಂಡವನ್ನು ತಡೆಯಲು ಅರಣ್ಯಾಧಿಕಾರಿಗಳು ಮುಂದಾಗಿದ್ದರು.
ಈ ವೇಳೆ ಬೇಟೆಗಾರರ ತಂಡವು ಮೊದಲು ಅರಣ್ಯ ಸಿಬ್ಬಂದಿಯ ಮೇಲೆ ಗುಂಡು ಹಾರಿಸಿದ್ದು, ಆತ್ಮರಕ್ಷಣೆಗಾಗಿ ಅರಣ್ಯ ಸಿಬ್ಬಂದಿ ಎದುರು ದಾಳಿ ನಡೆಸಿದಾಗ ಈ ಮೂವರು ಸಾವನ್ನಪ್ಪಿದ್ದಾರೆ ಎಂದು ಕರ್ನಾಟಕ ಅರಣ್ಯ ಇಲಾಖೆ ವಿವರಣೆ ನೀಡಿದೆ.
ಘಟನಾ ಸ್ಥಳದಿಂದ ಅರಣ್ಯಾಧಿಕಾರಿಗಳು ಬಂದೂಕುಗಳು ಮತ್ತು ಕಾಡುಪ್ರಾಣಿಗಳ ಮಾಂಸ ತುಂಬಿದ್ದ ಚೀಲಗಳನ್ನು ವಶಪಡಿಸಿಕೊಂಡಿದ್ದು ತನಿಖೆ ಮುಂದುವರಿಸಿದ್ದಾರೆ. ಆದರೆ, ಕರ್ನಾಟಕ ಅರಣ್ಯ ಇಲಾಖೆಯ ಈ ವಿವರಣೆಯನ್ನು ತಮಿಳುನಾಡು ಸಿಎಂ ವಿಜಯ್ ಸಂಪೂರ್ಣವಾಗಿ ತಿರಸ್ಕರಿಸಿದ್ದಾರೆ.




