
ಪ್ರಗತಿವಾಹಿನಿ ಸುದ್ದಿ: ಕಳೆದ ಕೆಲ ತಿಂಗಳ ಹಿಂದೆ ಮಲೆ ಮಹದೇಶ್ವರ ಮತ್ತು ಕಾವೇರಿ ವನ್ಯಜೀವಿಧಾಮದ ಅಂಚಿನ ಗ್ರಾಮಗಳಲ್ಲಿ ಮತ್ತು ಅರಣ್ಯದ ಬಳಿ ವನ್ಯಜೀವಿಗಳಿಗೆ ವಿಷ ಹಾಕುತ್ತಿರುವ ಘಟನೆಗಳು ಮತ್ತು ಕಳ್ಳಬೇಟೆ ಪ್ರಕರಣಗಳು ನಡೆದಿದ್ದವು. ಇದೀಗ ಮತ್ತೊಂದು ಹುಲಿ ಹತ್ಯೆಯಾಗಿರುವ ಘಟನೆ ಬೆಳಕಿಗೆ ಬಂದಿದೆ.
ಈ ಘಟನೆ ಬೆಳಕಿಗೆ ಬರುತ್ತಲೇ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಸ್ಥಳೀಯರೊಂದಿಗೆ ಸಭೆ ನಡೆಸಿ ವರದಿ ಸಲ್ಲಿಸಲ್ಲಿಸಲು ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ್ ಬಿ ಖಂಡ್ರೆ ತಿಳಿಸಿದ್ದಾರೆ. ರಾಜ್ಯದ ಎಲ್ಲ ಹುಲಿ ಸಂರಕ್ಷಿತ ಪ್ರದೇಶ ಹಾಗೂ ಮೈಸೂರು ವಿಭಾಗದ ಅರಣ್ಯಾಧಿಕಾರಿಗಳೊಂದಿಗೆ ಶನಿವಾರ ವಿಡಿಯೋ ಕಾನ್ಸರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು, ಈಗಾಗಲೇ ವನ್ಯಜೀವಿ ಮಂಡಳಿ ಹುಲಿ ಸಂರಕ್ಷಿತ ಪ್ರದೇಶ ಘೋಷಣೆಗೆ ಅನುಮೋದನೆ ನೀಡಿರುವ ಹಿನ್ನೆಲೆಯಲ್ಲಿ ಸ್ಥಳೀಯ ಜನಪ್ರತಿನಿಧಿಗಳೊಂದಿಗೆ ಸಭೆ ನಡೆಸಿ ಅಂತಿಮ ವರದಿ ಸಲ್ಲಿಸಲು ತಿಳಿಸಿದ್ದಾರೆ.
ಅರಣ್ಯ ಪ್ರದೇಶದೊಳಗೆ ಇರುವ ದನಕರುಗಳೆಷ್ಟು, ಈ ಹಾಡಿಗಳಲ್ಲಿ ಎಷ್ಟು ಜನರಿದ್ದಾರೆ ಎಂಬ ಬಗ್ಗೆ ಸಂಪೂರ್ಣ ದತ್ತಾಂಶ ಕಲೆ ಹಾಕಿ ದಾಖಲಿಸಲು ಮತ್ತು ಒಂದೊಮ್ಮೆ ಅಲ್ಲಿರುವ ದನಕರುಗಳು ವನ್ಯಜೀವಿಗಳಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ವಹಿಸುವಂತೆ ಸೂಚಿಸಿದರು.
ಹುಲಿ ಹತ್ಯೆ ಮಾಡಿರುವ ಪ್ರಕರಣದ ಶಂಕಿತ ಆರೋಪಿಯನ್ನು ಪತ್ತೆಹಚ್ಚಿ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ನಂತರ ಆತನ ವಿಚಾರಣೆ ನಡೆಸಲಾಗುತ್ತಿದ್ದು ಶೀಘ್ರವೇ ಹುಲಿ ಹತ್ಯೆಗೆ ನೈಜ ಕಾರಣ ತಿಳಿದುಬರಲಿದೆ ಎಂದು ಅಧಿಕಾರಿಗಳು ಸಭೆಗೆ ತಿಳಿಸಿದ್ದಾರೆ.
ಮಲೆ ಮಹದೇಶ್ವರ ಅರಣ್ಯ ಭಾಗದಲ್ಲಿ ಗಸ್ತು ಹೆಚ್ಚಿಸಲು ಸೂಚಿಸಿದ ಸಚಿವರು, ಅಧಿಕಾರಿಗಳು ಕರ್ತವ್ಯಲೋಪ ಎಸಗಿದ್ದರೆ ಕ್ರಮಕ್ಕೆ ಶಿಫಾರಸು ಮಾಡುವಂತೆ ಹಾಗೂ ಇತ್ತೀಚೆಗೆ ನಡೆದ 5 ಹುಲಿಗಳನ್ನು ವಿಷವಿಟ್ಟು ಹತ್ಯೆ ಮಾಡಿದ ಆರೋಪಿಗಳಿಗೆ ಶೀಘ್ರವೇ ಶಿಕ್ಷೆ ಕೊಡಿಸಲು ಕ್ರಮಕೈಗೊಂಡು ಸ್ಪಷ್ಟ ಸಂದೇಶ ರವಾನಿಸಲು ಸೂಚಿಸಿದ್ದಾರೆ.