
ಪ್ರಗತಿವಾಹಿನಿ ಸುದ್ದಿ: ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರವಾಗಿ ಸುರಿಯುತ್ತಿರುವ ಮಳೆಗೆ ಬೆಳಗಾವಿ ಜಿಲ್ಲೆಯಲ್ಲಿನ ಎಲ್ಲ ನದಿಗಳು ತುಂಬಿ ಹರಿಯುತ್ತಿವೆ. ಇಲ್ಲಿಯವರೆಗೂ ಒಟ್ಟು 36 ಸೇತುವೆಗಳು ಮುಳುಗಡೆಯಾಗಿವೆ. ಮಹಾರಾಷ್ಟ್ರದ ಎಲ್ಲ ಸಂಪರ್ಕವನ್ನು ಬಂದ್ ಮಾಡಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಭೀಮಾಶಂಕರ ಗುಳೇದ ಹೇಳಿದರು.
ಶುಕ್ರವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಮುಳುಗಡೆಯಾದ ಸೇತುವೆಯ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಕಳೆದ ಮೂರು ದಿನಗಳಿಂದ ನಾವು, ಜಿಲ್ಲಾಧಿಕಾರಿ, ಜಿಪಂ ಸಿಇಒ ನಿರಂತರವಾಗಿ ಹಾನಿಯಾದ ಕಡೆಗಳಲ್ಲಿ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರವಾಹ ಭೀತಿ ಇರುವ ಗ್ರಾಮದ ಜನರನ್ನು ಸ್ಥಳಾಂತರ ಮಾಡುವ ಕಾರ್ಯ ನಡೆಯುತ್ತಿದೆ ಎಂದರು.
ಸಾರ್ವಜನಿಕರು ಮೀನುಗಾರಿಕೆ ಸೇರಿದಂತೆ ಇನ್ನಿತರ ಕಾರಣಗಳಿಗೆ ನದಿ ನೀರಿನಲ್ಲಿ ಹೋಗಬಾರದು. ಇದಕ್ಕೆ ಜಿಲ್ಲಾಡಳಿತದಿಂದ ಸಾಕಷ್ಟು ಕ್ರಮ ಕೈಗೊಂಡಿದೆ. ಎಲ್ಲಿ ಹೋಗಲು ಜನರಿಗೆ ತೊಂದರೆ ಇದೆಯೋ ಅಲ್ಲಿ ಬೋಟಿಂಗ್ ವ್ಯವಸ್ಥೆ ಮಾಡಲಾಗಿದೆ. ಅಪಾಯ ಇರುವ ಕಡೆಗಳಲ್ಲಿ ಜಿಲ್ಲಾ ಪೊಲೀಸ್ ಇಲಾಖೆಯಿಂದ ಬ್ಯಾರಿಕೇಡ್ ಅಳವಡಿಸಲಾಗಿದೆ. ಸಾರ್ವಜನಿಕರು ಸಹಕಾರ ಕೊಡಬೇಕು ಎಂದು ಮನವಿ ಮಾಡಿದರು.
ಮಹಾರಾಷ್ಟ್ರ ಸಂಪರ್ಕ ಸೇತುವೆಗಳು ಮುಳುಗಡೆಯಾಗಿವೆ. ಆದ್ದರಿಂದ ಬೆಳಗಾವಿಯ ಎಲ್ಲ ಮಾರ್ಗಗಳನ್ನು ಬಂದ್ ಮಾಡಲಾಗಿದೆ. ಸದ್ಯದ ಮಟ್ಟಿಗೆ ಪ್ರವಾಹದ ಭೀಕರತೆ ಇಲ್ಲ. ಆಲಮಟ್ಟಿ ಜಲಾಯಶದಿಂದ 2.75 ಲಕ್ಷ ಕ್ಯೂಸೆಕ್ ನಿಂದ 3 ಲಕ್ಷ ಕ್ಯೂಸೆಕ್ ವರೆಗೂ ನೀರು ಬಿಡುತ್ತಿರುವುದರಿಂದ ನೀರು ಉಳಿಯುತ್ತಿಲ್ಲ. ನಮ್ಮ ಜಿಲ್ಲೆಗೆ ಬರುವ 2.2ಕ್ಯೂಸೆಕ್ ಕಲ್ಲೋಳ ಬ್ಯಾರೇಜ್ ಜೊತೆಗೆ 60 ಸಾವಿರ ಕ್ಯೂಸೆಕ್ ಘಟಪ್ರಭಾ ನದಿಗೆ ಒಟ್ಟು 2.95 ಲಕ್ಷ ನೀರು ಬರುತ್ತಿರುವುದರಿಂದ ಸದಸ್ಯಕ್ಕೆ ಜಿಲ್ಲೆಯಲ್ಲಿ ಯಾವುದೇ ಸಮಸ್ಯೆ ಇಲ್ಲ. ಆದರೂ ನದಿ ದಡದಲ್ಲಿರುವ ಗ್ರಾಮಸ್ಥರು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರವಾಗಬೇಕು ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ