Kannada NewsKarnataka NewsLatest
*ಬೆಂಗಳೂರು ಕಂಬಳ ನೋಡಿ ತೆರಳುತ್ತಿದ್ದಾಗ ಭೀಕರ ಅಪಘಾತ; ಇಬ್ಬರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ; ತುಮಕೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಐತಿಹಾಸಿಕ ಕಂಬಳ ನಡೆಯುತ್ತಿದ್ದು, ಕಂಬಳ ವೀಕ್ಷಣೆಗೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಜನಸಾಗರವೇ ಹರಿದು ಬರುತ್ತಿದೆ. ಕಂಬಳ ವೀಕ್ಷಿಸಿ ವಾಪಾಸ್ ಆಗುತ್ತಿದ್ದಾಗ ದುರಂತವೊಂದು ಸಂಭವಿಸಿದ ಘಟನೆ ತುಮಕೂರಿನಲ್ಲಿ ನಡೆದಿದೆ.
ಬೋರ್ ವೆಲ್ ಲಾರಿಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಚಿಗಣಿಪಾಳ್ಯ ಬಳಿ ಈ ಅಪಘಾತ ಸಂಭವಿಸಿದೆ.
ಮೃತರನ್ನು ಮಂಗಳೂರಿನ ಪರೆರಾರ ಬಜಪ್ಪೆ ಗ್ರಾಮದ ನಿವಾಸಿ ಕಿಶಾಕ್ ಶೆಟ್ಟಿ (20) ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಭಟ್ಟರ ತೋಟದ ಫಿಲಿಪ್ಸ್ ನೇರಿ (32) ಎಂದು ಗುರುತಿಸಲಾಗಿದೆ.
ಕಾರಿನಲ್ಲಿದ್ದ ಮೂವರಿಗೆ ಗಂಭೀರ ಗಾಯಗಳಾಗಿದ್ದು, ಆದಿಚುಂಚನಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಣಿಗಲ್ ಪೊಲೀಸರು ಬೋರ್ ವೆಲ್ ಲಾರಿ ಚಾಲಕನನ್ನು ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ.