Kannada NewsKarnataka NewsLatest

*ವಿಡಿಯೋ ಮಾಡಿಟ್ಟು ಕಚೇರಿಯಲ್ಲಿಯೇ ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಆತ್ಮಹತ್ಯೆ*

ಪ್ರಗತಿವಾಹಿನಿ ಸುದ್ದಿ: ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರೊಬ್ಬರು ಕಚೇರಿಯಲ್ಲಿಯೇ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.

ತುಮಕೂರು ಜಿಲ್ಲೆಯ ಪಾವಗಡ ಪಟ್ಟಣದಲ್ಲಿ ಈ ಘಟನೆ ನಡೆದಿದೆ. ಮಲ್ಲಿಕಾರ್ಜುನ (59) ಆತ್ಮಹತ್ಯೆ ಮಾಡಿಕೊಂಡ ಅಧಿಕಾರಿ. ಪಾವಗಡದಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಕಚೇರಿಯಲ್ಲೇ ಅವರು ನೇಣಿಗೆ ಶರಣಾಗಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕಾರಣವೆಂದು ಹೇಳಿದ ವೀಡಿಯೋ ವೈರಲ್ ಆಗಿದೆ.

Home add -Advt

ಮೇಲಾಧಿಕಾರಿ ಕಿರುಕುಳದಿಂದ ಬೇಸತ್ತಿದ್ದ ಮಲ್ಲಿಕಾರ್ಜುನ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಆತ್ಮಹತ್ಯೆಗೆ ಮುನ್ನ ವಿಡಿಯೋ ಮಾಡಿದ್ದು, ತಮ್ಮ ಸಾವಿಗೆ ಜಂಟಿ ನಿರ್ದೇಶಕ ಕೃಷ್ಣಪ್ಪ ಕಾರಣ ಎಂದು ಆರೋಪಿಸಿದ್ದಾರೆ. ನನ್ನ ತಾಯಿ, ಪತ್ನಿ ಮತ್ತು ಮಕ್ಕಳು ನನ್ನನ್ನು ಚೆನ್ನಾಗಿ ನೋಡಿಕೊಂಡಿದ್ದಾರೆ. ಆದರೆ ಮೇಲಾಧಿಕಾರಿ ನೀಡಿದ ಕಿರುಕುಳದಿಂದ ಈ ನಿರ್ಧಾರಕ್ಕೆ ಬಂದಿದ್ದೇನೆ ಎಂದು ವಿಡಿಯೋದಲ್ಲಿ ತಿಳಿಸಿದ್ದಾರೆ. ಅಲ್ಲದೆ, ಕೃಷ್ಣಪ್ಪ ಅವರಿಗೆ ದೇವರು ಹಾಗೂ ಕಾನೂನು ಶಿಕ್ಷೆ ನೀಡಲಿದೆ ಎಂದೂ ಹೇಳಿದ್ದಾರೆ.

ಮಲ್ಲಿಕಾರ್ಜುನ ಮೂಲತಃ ಪಾವಗಡ ತಾಲೂಕಿನವರಾಗಿದ್ದು, ಕಳೆದ ಮೂರು ವರ್ಷಗಳಿಂದ ಅಲ್ಲಿನ ಸಮಾಜ ಕಲ್ಯಾಣ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಇನ್ನೂ ಕೆಲವೇ ದಿನಗಳಲ್ಲಿ ಅವರ ಸೇವಾ ಅವಧಿ ಮುಕ್ತಾಯಗೊಳ್ಳಬೇಕಿತ್ತು. ಆದರೆ ಜಂಟಿ ನಿರ್ದೇಶಕ ನೀಡಿದ ಕಿರುಕುಳದಿಂದ ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎನ್ನಲಾಗಿದೆ. ಘಟನೆ ನಡೆದ ದಿನ ಸಂಜೆ, ಕಚೇರಿಯ ಎಲ್ಲಾ ಸಿಬ್ಬಂದಿ ತೆರಳಿದ ನಂತರ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವುದು ತಿಳಿದುಬಂದಿದೆ.

ಸಾವಿಗೆ ಮುನ್ನ ಡೆತ್ ನೋಟ್ ಬರೆದಿರುವುದಾಗಿ ತಿಳಿದುಬಂದಿದ್ದು, ಅದರಲ್ಲಿ ಕೃಷ್ಣಪ್ಪ ಹಾಗೂ ಹಣಕಾಸು ಸಂಬಂಧಿತ ವಿಚಾರಗಳನ್ನೂ ಉಲ್ಲೇಖಿಸಿರುವ ಮಾಹಿತಿ ಲಭ್ಯವಾಗಿದೆ. ಪ್ರಕರಣ ಸಂಬಂಧ ಪಾವಗಡ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಡೆತ್ ನೋಟ್ ವಶಪಡಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.

Related Articles

Back to top button