Belagavi NewsBelgaum NewsLatest

*ಉಚಗಾಂವ ರಸ್ತೆ ಕಾಮಗಾರಿಗೆ ಭೂಮಿಪೂಜೆ, ಬೆನಕನಹಳ್ಳಿಯಲ್ಲಿ ದೇವಸ್ಥಾನ ಮೇಲ್ಚಾವಣಿ ಕಾಮಗಾರಿಗೆ ಚಾಲನೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ ಗ್ರಾಮೀಣ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆಯಾಗಿ ಉಚಗಾಂವ ಗ್ರಾಮದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಕಾಮಗಾರಿಗೆ ಚಾಲನೆ ನೀಡಲಾಯಿತು. 

ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಯುವ ಕಾಂಗ್ರೆಸ್ ಮುಖಂಡ ಮೃಣಾಲ್ ಹೆಬ್ಬಾಳಕರ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಹಾಗೂ ವಿವಿಧ ಸಂಘಟನೆಗಳ ಮುಖಂಡರು ಭಾಗವಹಿಸಿದ್ದರು.

ಉಚಗಾಂವ ಗ್ರಾಮದ ವಿವಿಧ ಬಡಾವಣೆಗಳು ಹಾಗೂ ಒಳರಸ್ತೆಗಳ ಅಭಿವೃದ್ಧಿಗಾಗಿ ಸುಮಾರು 70 ಲಕ್ಷ ರೂಪಾಯಿ ವೆಚ್ಚದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದೆ. ಹಲವು ವರ್ಷಗಳಿಂದ ಉತ್ತಮ ರಸ್ತೆ ಸೌಲಭ್ಯಕ್ಕಾಗಿ ಕಾಯುತ್ತಿದ್ದ ಸ್ಥಳೀಯ ನಿವಾಸಿಗಳಿಗೆ ಈ ಕಾಮಗಾರಿಯಿಂದ ಅನುಕೂಲವಾಗಲಿದ್ದು, ಸುಗಮ ಸಂಚಾರಕ್ಕೆ ನೆರವಾಗಲಿದೆ.

Home add -Advt

ಈ ಸಂದರ್ಭದಲ್ಲಿ ಮಾತನಾಡಿದ ಮೃಣಾಲ ಹೆಬ್ಬಾಳಕರ್, ಗ್ರಾಮೀಣ ಪ್ರದೇಶಗಳ ಮೂಲಸೌಕರ್ಯ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಗುಣಮಟ್ಟದ ಕಾಮಗಾರಿಗಳ ಮೂಲಕ ಜನರ ನಿರೀಕ್ಷೆಗಳಿಗೆ ತಕ್ಕ ರೀತಿಯಲ್ಲಿ ರಸ್ತೆಗಳನ್ನು ನಿರ್ಮಿಸಬೇಕು ಎಂದು ಗುತ್ತಿಗೆದಾರರಿಗೆ ಸೂಚನೆ ನೀಡಿದರು. ಕಾಮಗಾರಿಗಳನ್ನು ನಿಗದಿತ ಅವಧಿಯೊಳಗೆ ಪೂರ್ಣಗೊಳಿಸಿ ಸಾರ್ವಜನಿಕರ ಬಳಕೆಗೆ ಮುಕ್ತಗೊಳಿಸುವಂತೆ ತಿಳಿಸಿದರು.

ಭೂಮಿಪೂಜೆ ಕಾರ್ಯಕ್ರಮದಲ್ಲಿ ಕಾಡಾ ಅಧ್ಯಕ್ಷ ಯುವರಾಜ ಕದಂ, ಬಾಳಾಸಾಹೇಬ್ ದೇಸಾಯಿ, ಪ್ರಫುಲ್ ಚೌಗುಲೆ, ರಾಮಾ ಕದಂ, ಸಂಭಾಜಿ ಕದಂ, ಯದು ಕಾಂಬಳೆ, ಎನ್.ಓ. ಚೌಗುಲೆ, ಎಲ್.ಡಿ. ಚೌಗುಲೆ, ನಿಖಿತಾ ಪಾಟೀಲ, ಯಲ್ಲಪ್ಪ ಪಾವಸೆ, ಮಾರುತಿ ಖಂಡೇಕರ್, ಸ್ಮಿತಾ ಖಂಡೇಕರ್, ಶಾಂತಾಬಾಯಿ ಡೋನಕರಿ, ಶಿವಾಜಿ ಡೋನಕರಿ, ತುಕಾರಾಮ ಡೋನಕರಿ ಸೇರಿದಂತೆ ಅನೇಕರು ಉಪಸ್ಥಿತರಿದ್ದರು.

ಬೆನಕನಹಳ್ಳಿಯಲ್ಲಿ ಶ್ರೀ ಮಾಸೋಬಾ ದೇವಸ್ಥಾನ ಕಾಮಗಾರಿಗೆ ಚಾಲನೆ

ಇದೇ ಸಂದರ್ಭದಲ್ಲಿ ಬೆಳಗಾವಿ ಗ್ರಾಮೀಣ ಕ್ಷೇತ್ರದ ಬೆನಕನಹಳ್ಳಿ ಗ್ರಾಮದ ಜ್ಯೋತಿನಗರದಲ್ಲಿರುವ ಶ್ರೀ ಮಾಸೋಬಾ ದೇವಸ್ಥಾನದ ನಿರ್ಮಾಣ ಕಾರ್ಯಕ್ಕೂ ಹೊಸ ಚೈತನ್ಯ ದೊರೆಯಿತು. ಸುಮಾರು 25 ಲಕ್ಷ ರೂಪಾಯಿ ವೆಚ್ಚದಲ್ಲಿ ನಿರ್ಮಾಣ ಹಂತದಲ್ಲಿರುವ ದೇವಸ್ಥಾನ ಕಟ್ಟಡದ ಮೇಲ್ಚಾವಣಿ ಕಾಂಕ್ರೀಟ್ (ಸ್ಲ್ಯಾಬ್) ಕಾಮಗಾರಿಗೆ ಪೂಜೆ ಸಲ್ಲಿಸಿ ಚಾಲನೆ ನೀಡಲಾಯಿತು.

ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳ ಕೇಂದ್ರವಾಗಲಿರುವ ಈ ದೇವಸ್ಥಾನ ನಿರ್ಮಾಣದಿಂದ ಸ್ಥಳೀಯ ಭಕ್ತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಗ್ರಾಮಸ್ಥರ ಬಹುಕಾಲದ ಬೇಡಿಕೆಯಾಗಿದ್ದ ದೇವಸ್ಥಾನ ಕಟ್ಟಡದ ಕಾಮಗಾರಿ ಇದೀಗ ವೇಗ ಪಡೆದುಕೊಂಡಿದ್ದು, ಶೀಘ್ರದಲ್ಲೇ ಪೂರ್ಣಗೊಳ್ಳುವ ನಿರೀಕ್ಷೆ ವ್ಯಕ್ತವಾಗಿದೆ.

ಕಾರ್ಯಕ್ರಮದಲ್ಲಿ ಮಹೇಶ್ ಕೋಲಕಾರ, ಸಾಗರ ಲಾಖೆ, ಪ್ರಕಾಶ ಕೋರಗಡೆ, ರಾಮ ಕೋರಗಡೆ, ಬಾಗಣ್ಣ ನರೋಟಿ, ಪ್ರಣಯ ಶೆಟ್ಟಿ, ಮಹೇಶ್ ಪಾಟೀಲ ಸೇರಿದಂತೆ ಹಲವಾರು ಮುಖಂಡರು ಹಾಗೂ ಭಕ್ತರು ಉಪಸ್ಥಿತರಿದ್ದರು.

ಗ್ರಾಮೀಣ ಕ್ಷೇತ್ರದಲ್ಲಿ ರಸ್ತೆ, ಕುಡಿಯುವ ನೀರು, ದೇವಸ್ಥಾನ, ಸಮುದಾಯ ಭವನ ಸೇರಿದಂತೆ ವಿವಿಧ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳಿಗೆ ಆದ್ಯತೆ ನೀಡಲಾಗುತ್ತಿದ್ದು, ಸಾರ್ವಜನಿಕರ ಅಗತ್ಯಗಳಿಗೆ ಸ್ಪಂದಿಸುವ ಅಭಿವೃದ್ಧಿ ಕಾರ್ಯಗಳು ಮುಂದುವರಿಯಲಿವೆ ಎಂದು ಕ್ಷೇತ್ರದ ಶಾಸಕಿ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದ್ದಾರೆ.

Related Articles

Back to top button