*ನಟಿ ತ್ರಿಷಾ ಬಗ್ಗೆ ಡಬಲ್ ಮೀನಿಂಗ್ ಹೇಳಿಕೆ: ಮಾಜಿ ಡಿಸಿಎಂ ಉದಯನಿಧಿ ಸ್ಟಾಲಿನ್ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ: ತಮಿಳುನಾಡಿನ ಮಾಜಿ ಉಪಮುಖ್ಯಮಂತ್ರಿ ಹಾಗೂ ವಿರೋಧಪಕ್ಷದ ನಾಯಕ ಡಿಎಂಕೆ ಪಕ್ಷದ ಉದಯನಿಧಿ ಸ್ಟಾಲಿನ್ ಅವರನ್ನು ಪೋಲಿಸರು ಬಂಧಿಸಿದ್ದಾರೆ.
ತಂಜಾವೂರಿನಲ್ಲಿ ನಡೆದ ಕಾವೇರಿ ನೀರು ಹಂಚಿಕೆ ಪ್ರತಿಭಟನೆಯಲ್ಲಿ ನಟಿ ತ್ರಿಷಾ ಕೃಷ್ಣನ್ ಅವರ ಕುರಿತು ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಮುಖ್ಯಮಂತ್ರಿ ವಿಜಯ್ ನೇತೃತ್ವದ ‘ತಮಿಳಿಗ ವೆಟ್ರಿ ಕಳಗಂ’ (TVK) ಪಕ್ಷ ನೀಡಿದ ದೂರಿನನ್ವಯ ಈ ಕ್ರಮ ಕೈಗೊಳ್ಳಲಾಗಿದೆ.
ತಂಜಾವೂರಿನಲ್ಲಿ ಕಾವೇರಿ ನೀರು ಹಂಚಿಕೆ ವಿಚಾರವಾಗಿ ಡಿಎಂಕೆಯಿಂದ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾತನಾಡಿದ ಉದಯನಿಧಿ ಸ್ಟಾಲಿನ್ , ಮುಖ್ಯಮಂತ್ರಿ ಜೋಸೆಫ್ ವಿಜಯ್ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾಗ, ಸಭೆಯಲ್ಲಿದ್ದ ಕೆಲವರು ನಟಿ ತ್ರಿಷಾ ಅವರ ಹೆಸರನ್ನು ಕೂಗಲು ಪ್ರಾರಂಭಿಸಿದರು. ಇದಕ್ಕೆ ನಗುತ್ತಲೇ ಪ್ರತಿಕ್ರಿಯಿಸಿದ ಉದಯನಿಧಿ, ’ನೀರು ಎಲ್ಲಿಗೆ ತಲುಪುತ್ತದೋ ಇಲ್ಲವೋ, ಅಲ್ಲಿಗೆ ತಲುಪಲೇಬೇಕು. ನಾನು ಹೇಳಿದ್ದು ಕಾವೇರಿ ನೀರನ್ನು” ಎಂದು ದ್ವಂದ್ವಾರ್ಥ ಬರುವ ರೀತಿಯಲ್ಲಿ ಮಾತನಾಡಿದ್ದರು. ಈ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.
ಉದಯನಿಧಿ ಅವರ ಈ ಹೇಳಿಕೆಯನ್ನು ಕಟುವಾಗಿ ಖಂಡಿಸಿರುವ ಟಿವಿ ಕೆ (TVK) ಪಕ್ಷ ಹಾಗೂ ಮಹಿಳಾ ಘಟಕದ ನಾಯಕಿಯರು ತಂಜಾವೂರು ಪೊಲೀಸ್ ಠಾಣೆ ಮತ್ತು ರಾಷ್ಟ್ರೀಯ ಮಹಿಳಾ ಆಯೋಗಕ್ಕೆ (NCW) ದೂರು ನೀಡಿದ್ದಾರೆ. ಮಹಿಳೆಯರನ್ನು ಸಾರ್ವಜನಿಕವಾಗಿ ಅಪಮಾನಿಸುವ ಮತ್ತು ಕೀಳಾಗಿ ಕಾಣುವ ಇಂತಹ ಮಾತುಗಳು ಸಾರ್ವಜನಿಕ ನಾಯಕರಿಗೆ ಶೋಭೆಯಲ್ಲ ಎಂದು ಟಿವಿ ಕೆ ಶಾಸಕರು ಮತ್ತು ನಾಯಕರು ಕಿಡಿಕಾರಿದ್ದಾರೆ.
ದೂರು ದಾಖಲಾದ ಬೆನ್ನಲ್ಲೇ ಟಿವಿ ಕೆ ಕಾರ್ಯಕರ್ತರು ಪ್ರತಿಭಟನೆಗೆ ಕರೆ ನೀಡಿದ್ದರಿಂದ, ನೀಲಂಗರೈನಲ್ಲಿರುವ ಉದಯನಿಧಿ ನಿವಾಸಕ್ಕೆ ಭಾರಿ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಬಳಿಕ ತಂಜಾವೂರು ಪೊಲೀಸರು ಉದಯನಿಧಿ ಸ್ಟಾಲಿನ್ ಅವರನ್ನು ವಶಕ್ಕೆ ಪಡೆದಿದ್ದಾರೆ.




