
ಪ್ರಗತಿವಾಹಿನಿ ಸುದ್ದಿ: ನಿಂತಿದ್ದ ಕಂಟೈನರ್ಗೆ ಕಾರು ಡಿಕ್ಕಿಯಾಗಿ ಇಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.
ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ನಾವುಂದ ಬಳಿ ಈ ದುರಂತ ಸಂಭವಿಸಿದೆ. ಘಟನೆಯಲ್ಲಿ ತಾಯಿ ಮತ್ತು ಮಗಳು ಮೃತಪಟ್ಟಿದ್ದಾರೆ, ಪತಿ, ಇಬ್ಬರು ಮಕ್ಕಳು ಹಾಗೂ ಕಾರು ಚಾಲಕನಿಗೆ ಗಂಭೀರ ಗಾಯಗಳಾಗಿವೆ.
ಮಮತಾ(36) ಹಾಗೂ ಮಗಳು ಧೃತಿಕಾ(14) ಮೃತ ದುರ್ದೈವಿಗಳು. ಪತಿ ರಾಘು(40), ಮಕ್ಕಳಾದ ಜಾಹ್ನವಿ(12), ಚಾರ್ವಿ(10) ಹಾಗೂ ಕಾರು ಚಾಲಕ ಕಿರಣ್ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅಪಘಾತದಲ್ಲಿ ಮೃತಪಟ್ಟವರು ಬೆಂಗಳೂರು ಮೂಲದ ನಿವಾಸಿಗಳು ಎಂದು ತಿಳಿದುಬಂದಿದೆ.
ಬೆಂಗಳೂರನಿಂದ ಪ್ರವಾಸಕ್ಕೆ ಬಂದಿದ್ದ ಕುಟುಂಬ ಉಡುಪಿ ಜಿಲ್ಲೆಯ ಹಲವು ಪ್ರವಾಸಿ ತಾಣಗಳಿಗೆ ಭೇಟಿ ನೀಡಿತ್ತು. ಬಳಿಕ ಮುರುಡೇಶ್ವರ ಮತ್ತು ಗೋಕರ್ಣ ಕ್ಷೇತ್ರಗಳ ದರ್ಶನದ ಉದ್ದೇಶದಿಂದ ಬೈಂದೂರು ಮಾರ್ಗವಾಗಿ ಪ್ರಯಾಣ ನಡೆಸುತ್ತಿದ್ದರು. ಈ ವೇಳೆ ದುರ್ಘಟನೆ ನಡೆದಿದೆ.



