
ಪ್ರಗತಿವಾಹಿನಿ ಸುದ್ದಿ; ಮೈಸೂರು: ನಾಲ್ಕನೇ ಹಂತದ ಲಾಕ್ಡೌನ್ ಜಾರಿಯಾಗಿದ್ದು, ಈ ಹಂತದಲ್ಲಿ ಹಲವು ನಿಯಮಗಳನ್ನು ಸಡಿಲಿಕೆ ಮಾಡಲಾಗಿದೆ. ಕಾರ್ಖಾನೆಗಳನ್ನು ತೆರೆಯಲಾಗಿದೆ. ಈ ಹಿನ್ನಲೆಯಲ್ಲಿ ಕಾರ್ಖಾನೆಗೆ ತೆರಳಿದ ಮೊದಲ ದಿನವೇ ಬೈಕಿಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಉದ್ಯೋಗಿ ಮೃತಪಟ್ಟಿರುವ ಘಟನೆ ನಂಜನಗೂಡು ಮೈಸೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ನಂಜನಗೂಡು ಪಟ್ಟಣದ ಶಿಕ್ಷಕರ ಬಡಾವಣೆ ನಿವಾಸಿ ಪ್ರವೀಣ್ (29) ಮೃತ ದುರ್ದೈವಿ. ನಂಜನಗೂಡು ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮಲ್ಲನಮೂಲೆ ಮಠದ ಬಳಿ ತಡರಾತ್ರಿ ಈ ಅಪಘಾತ ಸಂಭವಿಸಿದೆ. ತಾಂಡ್ಯಾ ಕೈಗಾರಿಕಾ ಪ್ರದೇಶದಲ್ಲಿರುವ ಖಾಸಗಿ ಕಾರ್ಖಾನೆಯಲ್ಲಿ ಮೃತ ಪ್ರವೀಣ್ ಕೆಲಸ ಮಾಡುತ್ತಿದ್ದರು.
ಸೋಮವಾರ ಕಾರ್ಖಾನೆಗೆ ಹೋಗಿ ಕೆಲಸ ಮುಗಿಸಿ ವಾಪಸ್ ಬರುತ್ತಿದ್ದಾಗ ಕಾರು ಡಿಕ್ಕಿ ಹೊಡೆದಿದೆ. ಪರಿಣಾಮ ಪ್ರವೀಣ್ ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ನಂಜನಗೂಡು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.