*ಬೆಳಗಾವಿ ವಿಭಾಗ ಮಟ್ಟದ ಕೃಷಿ ಸವಲತ್ತುಗಳ ವಿತರಣಾ ಸಮಾರಂಭಕ್ಕೆ ಚಾಲನೆ ನೀಡಿದ ಸಿಎಂ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಅರಣ್ಯ ಇಲಾಖೆಯ ಅನುಮತಿ ದೊರಕದಿರುವುದರಿಂದ ಮಹದಾಯಿ ಯೋಜನೆ ವಿಳಂಬವಾಗುತ್ತಿದೆ. ಮಹದಾಯಿ, ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಆಲಮಟ್ಟಿ ಜಲಾಶಯ ಎತ್ತರ ಹೆಚ್ಚಳ ಸೇರಿದಂತೆ ರಾಜ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಎಲ್ಲ ನೀರಾವರಿ ಯೋಜನೆಗಳನ್ನು ತಕ್ಷಣವೇ ಆರಂಭಿಸಲು ರಾಜ್ಯ ಸರಕಾರ ಸಿದ್ಧವಿದೆ. ಒಕ್ಕೂಟ ವ್ಯವಸ್ಥೆಯಲ್ಲಿ ಕೇಂದ್ರ ಸರಕಾರ ಮಧ್ಯಸ್ಥಿಕೆ ವಹಿಸುವ ಮೂಲಕ ನೀರಾವರಿ ಯೋಜನೆಗಳ ಅನುಷ್ಠಾನಕ್ಕೆ ಅನುಕೂಲ ಕಲ್ಪಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಒತ್ತಾಯಿಸಿದರು.
ಬೆಳಗಾವಿ ಸುವರ್ಣ ವಿಧಾನ ಸೌಧದ ಆವರಣದಲ್ಲಿ ಭಾನುವಾರ(ಏ.20) ಜರುಗಿದ ಬೆಳಗಾವಿ ವಿಭಾಗ ಮಟ್ಟದ ಸಮಾರಂಭದಲ್ಲಿ ಕೃಷಿ ಇಲಾಖೆಯ ಸಹಾಯಧನದಡಿಯಲ್ಲಿ ರೈತರಿಗೆ ವಿವಿಧ ಸವಲತ್ತುಗಳನ್ನು ವಿತರಿಸಿ ಅವರು ಮಾತನಾಡಿದರು.
ಮಹದಾಯಿ ಯೋಜನೆಗೆ ಇನ್ನೂ ಅರಣ್ಯ ಇಲಾಖೆಯ ಅನುಮತಿ ದೊರಕಿಲ್ಲ. ಕೇಂದ್ರ ಅನುಮತಿ ಕೊಟ್ಟರೆ ನಾಳೆಯೇ ಕೆಲಸ ಆರಂಭಿಸಲಾಗುವುದು. ಅದೇ ರೀತಿ ಮೇಕೆದಾಟು, ಕೃಷ್ಣಾ ಮೇಲ್ದಂಡೆ ಯೋಜನೆ ಸೇರಿದಂತೆ ಎಲ್ಲ ಯೋಜನೆಗಳ ಅನುಷ್ಠಾನಕ್ಕೆ ರಾಜ್ಯ ಸರಕಾರ ಸಿದ್ಧವಿದೆ ಎಂದರು.
ಒಣ ಬೇಸಾಯಗಾರರಿಗೆ ಅನುಕೂಲ ಕಲ್ಪಿಸಲು ಕೃಷಿ ಭಾಗ್ಯ ಜಾರಿಗೆ ತರಲಾಗಿದ್ದು, 200 ಕೋಟಿ ರೂಪಾಯಿ ಮೀಸಲಿಡಲಾಗಿದೆ. ರಾಜ್ಯದಲ್ಲಿ ಕಳೆದ ವರ್ಷ 25,000 ಕ್ಕೂ ಹೆಚ್ಚು ಕೃಷಿ ಹೊಂಡಗಳನ್ನು ನಿರ್ಮಿಸಲಾಗಿದೆ.

ಸರಕಾರದಿಂದ ನೀರಾವರಿಗೆ ಆದ್ಯತೆ ನೀಡಲಾಗಿದ್ದು, ಬೃಹತ್ ಮತ್ತು ಸಣ್ಣ ನೀರಾವರಿಗೆ 25 ಸಾವಿರ ಕೋಟಿಗೂ ಅಧಿಕ ಹಣವನ್ನು ಖರ್ಚು ಮಾಡಲಾಗುತ್ತಿದೆ. ರಾಜ್ಯದ ಎಲ್ಲ ನೀರಾವರಿ ಯೋಜನೆ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
ಬೆಳಗಾವಿ ವಿಭಾಗದ ವ್ಯಾಪ್ತಿಯ ರೈತರಿಗೆ ಕಳೆದ ವರ್ಷ ಕೂಡ ರೈತರಿಗೆ ಕೃಷಿ ಯಂತ್ರೋಪಕರಣಗಳನ್ನು ನೀಡಲಾಗಿದೆ. ಅದೇ ರೀತಿ ಈ ಬಾರಿ ಕೂಡ ಕೃಷಿ ಇಲಾಖೆಯ ಸಹಾಯಧನದಡಿಯಲ್ಲಿ ವಿವಿಧ ಬಗೆಯ ಸವಲತ್ತುಗಳನ್ನು ನೀಡಲಾಗಿದೆ.
ಕೃಷಿ ಪ್ರಧಾನವಾಗಿರುವ ದೇಶದಲ್ಲಿ ರೈತರಿಗೆ ಸಹಾಯ ಮಾಡಬೇಕಾಗಿರುವುದು ಸರಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಸರಕಾರ ರೈತರ ಹಿತರಕ್ಷಣೆಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ.
ನೀರಾವರಿಗೆ ಒತ್ತು ನೀಡಲಾಗುತ್ತಿದ್ದು, ಬೆಳಗಾವಿ ವಿಭಾಗದಲ್ಲಿ ಕಬ್ಬು ಬೆಳೆಗಾರರ ಸಂಖ್ಯೆ ಹೆಚ್ಚಾಗಿರುವುದರಿಂದ ಸಾಮಾನ್ಯ ವರ್ಗದ ರೈತರಿಗೆ 40 ಲಕ್ಷ ಮತ್ತು ಪರಿಶಿಷ್ಟ ವರ್ಗದ ರೈತರಿಗೆ 50 ಲಕ್ಷ ರೂಪಾಯಿ ಸಹಾಯಧನದಲ್ಲಿ ಅತ್ಯಾಧುನಿಕ ಕಬ್ಬು ಕಟಾವು ಯಂತ್ರ ನೀಡಲಾಗುತ್ತಿದೆ.
ಕೃಷಿ ಕಾರ್ಮಿಕರ ಸಂಖ್ಯೆ ಕಡಿಮೆಯಾಗಿರುವುದರಿಂದ ಬೇಸಾಯ ಕಷ್ಟಕರವಾಗಿದೆ. ಆದ್ದರಿಂದ ಕೃಷಿ ಯಂತ್ರೋಪಕರಣಗಳನ್ನು ಸರಕಾರದ ವತಿಯಿಂದ ವಿತರಿಸಲಾಗುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಈ ಬಾರಿ ಉತ್ತಮಮಳೆಯ ಮುನ್ಸೂಚನೆ ಇದೆ. ಮುಂಬರುವ ದಿನಗಳಲ್ಲಿ ಆಹಾರ ಉತ್ಪಾದನೆ ಇನ್ನೂ ಹೆಚ್ಚಾಗಲಿ. ಸರಕಾರ ಅಗತ್ಯ ನೆರವು ನೀಡಲಿದೆ ಎಂದು ಭರವಸೆ ನೀಡಿದರು. ಕೃಷಿ ಪ್ರಧಾನವಾಗಿರುವ ದೇಶದಲ್ಲಿ ರೈತರಿಗೆ ಸಹಾಯ ಮಾಡಬೇಕಾಗಿರುವುದು ಸರಕಾರದ ಜವಾಬ್ದಾರಿಯಾಗಿದೆ. ಆದ್ದರಿಂದ ಸರಕಾರ ರೈತರ ಹಿತರಕ್ಷಣೆಗೆ ಬದ್ಧವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು.
ಪ್ರಾಸ್ತಾವಿಕವಾಗಿ ಮಾತನಾಡಿದ ಕೃಷಿ ಸಚಿವ ಎನ್.ಚಲುವರಾಯಸ್ವಾಮಿ ಅವರು, ಸರಕಾರವು ರೈತರ ಪರವಾಗಿ ಅನೇಕ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ. ಅನೇಕ ಸವಲತ್ತುಗಳನ್ನು ನೀಡಿದೆ. ಕಬ್ಬು ಕಟಾವು ಮಾಡುವ ಅತ್ಯಾಧುನಿಕ ಯಂತ್ರ ಖರೀದಿಸುವ ಸಾಮಾನ್ಯ ವರ್ಗದ ಜನರಿಗೆ 40 ಲಕ್ಷ ಹಾಗೂ ಪರಿಶಿಷ್ಟ ಜಾತಿ/ವರ್ಗದವರಿಗೆ 50 ಲಕ್ಷ ಸಬ್ಸಿಡಿ ನೀಡಿರುವುದು ಸ್ವತಂತ್ರ ಭಾರತದಲ್ಲಿ ಇದೇ ಮೊದಲು ಎಂದು ಹೇಳಿದರು.
ಮುಂಬರುವ ದಿನಗಳಲ್ಲಿ ಏಳು ವರ್ಷದ ಬಳಿಕ ಫಲಾನುಭವಿಗಳಿಗೆ ಮತ್ತೇ ಸೌಲಭ್ಯ ಒದಗಿಸಲು ಸರಕಾರ ನಿರ್ಧರಿಸಿದೆ.
ಕೃಷಿ ಯಂತ್ರೋಪಕರಣಗಳ ಸಬ್ಸಿಡಿ ನೀಡಲು ಅಂದಾಜು ಒಂದು ಸಾವಿರ ಕೋಟಿ ರೂಪಾಯಿ ಅನುದಾನ ನೀಡಲಾಗುತ್ತಿದೆ.
ಕಳೆದ ಮಾರ್ಚನಲ್ಲಿಯೂ ಸಹ ಸೌಲಭ್ಯ ವಿತರಿಸಿದೆ. ಈ ಬಾರಿಯ ಆಯವ್ಯಯದಲ್ಲಿ 50 ಕೋಟಿ ರೂ ಅನುದಾನವನ್ನು ಯಂತ್ರೋಪಕರಣಗಳಿಗಾಗಿ ಮೀಸಲಿಟ್ಟು ಹೆಚ್ಚುವರಿ 45 ಕೋಟಿ ರೂ.ಗಳ ಅನುದಾನವನ್ನು ಮುಖ್ಯಮಂತ್ರಿಗಳು ನೀಡಿದ್ದು, ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಯಂತ್ರೋಪಕರಣಗಳನ್ನು ವಿತರಿಸಲಾಗುತ್ತಿದೆ.
ಈ ಭಾಗದಲ್ಲಿ ಕಬ್ಬು ಮುಖ್ಯ ಬೆಳೆಯಾಗಿದ್ದು ರೈತರು ಕಬ್ಬು ಕಟಾವಿಗೆ ಹೆಚ್ಚಿನ ಹಣ ನೀಡಬೇಕಾಗಿತ್ತು. ಆದರೆ ಇಂದು ವಿತರಿಸುವ ಯಂತ್ರೋಪಕರಣಗಳಿಂದಾಗಿ ಕಬ್ಬು ಕಟಾವು ಖರ್ಚು ಕಡಿಮೆಯಾಗಲಿದೆ ಎಂದರು.
ಕೃಷಿ ಇಲಾಖೆಗೆ ಒದಗಿಸಿದಂತಹ ಅನುದಾನವನ್ನು ಸಮರ್ಪಕವಾಗಿ ಬಳಸಲಾಗುತ್ತಿದೆ. ಸರಕಾರವು ಕೃಷಿ ಯಂತ್ರೋಪಕರಣ ಹಾಗೂ ಸಿರಿಧಾನ್ಯಕ್ಕಾಗಿ ಹೆಚ್ಚಿನ ಪ್ರಾಮುಖ್ಯತೆ ನೀಡುತ್ತಿದ್ದು, ಇಂದು ವಿತರಿಸಿದ ಯಂತ್ರೋಪಕರಣಗಳ ಸೌಲಭ್ಯವನ್ನು ರೈತರು ಸದುಪಯೋಗ ಪಡೆದುಕೊಳ್ಳುವಂತೆ ಸಚಿವರಾದ ಎನ್. ಚೆಲುವನಾರಾಯಣಸ್ವಾಮಿ ಹೇಳಿದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ ಅವರು ಮಾತನಾಡಿ, ಜನಸಾಮಾನ್ಯರಿಗೆ ಸೌಲಭ್ಯಗಳನ್ನು ಒದಗಿಸಲು ರಾಜ್ಯ ಸರಕಾರವು ಸದಾ ಬದ್ಧವಾಗಿದೆ. ಪಂಚ ಗ್ಯಾರಂಟಿ ಯೋಜನೆಗಳ ಜಾರಿಯಿಂದಾಗಿ ರಾಜ್ಯದ ಪ್ರತಿಯೊಬ್ಬ ನಾಗರಿಕರ ಒಂದಿಲ್ಲೊಂದು ರೀತಿಯಲ್ಲಿ ಪ್ರಯೋಜನ ಪಡೆದುಕೊಳ್ಳುತ್ತಿದ್ದಾರೆ.
ರೈತರಿಗಾಗಿ ದೊಡ್ಡ ಮೊತ್ತದಲ್ಲಿ ಸಬ್ಸಿಡಿ ನೀಡುತ್ತಿರುವದು ಇತಿಹಾಸವಾಗಿದೆ. ಸರಕಾರದ ವತಿಯಿಂದ ಸಹಾಯಧನ ಯೋಜನೆಯಡಿ ವಿತರಿಸಲಾದ ಯಂತ್ರೋಪಕರಣಗಳನ್ನು ಸರಿಯಾಗಿ ಬಳಸುವುದರ ಮೂಲಕ ಪ್ರಗತಿ ಸಾಧಿಸಬೇಕು ಎಂದು ಕರೆ ನೀಡಿದರು.
40 ಕೋಟಿ ಮೊತ್ತದ ಕೃಷಿ ಸವಲತ್ತುಗಳ ವಿತರಣೆ
ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಒಟ್ಟು 40 ಕೋಟಿ ರೂಪಾಯಿ ವೆಚ್ಚದಲ್ಲಿ ಕಬ್ಬು ಕಟಾವು ಯಂತ್ರ 78, ಪವರ್ ಟಿಲ್ಲರ್ 100, ರೋಟೊವೇಟರ್ 165, ನೇಗಿಲು 120, ಮೇವು ಕತ್ತರಿಸುವ ಯಂತ್ರ 100, ಬಿತ್ತನೆ ಕೂರಿಗೆ 64, ರಾಶಿ ಯಂತ್ರ 26, ಕೋಲಿ ಕತ್ತರಿಸುವ ಯಂತ್ರ 05, ಭೂಮ್ ಸ್ಪ್ರೇಯರ್ ಯಂತ್ರ 12, ಸ್ಪ್ರೀಂಕ್ಲರ್ 1480 ಹೀಗೆ ಒಟ್ಟು 2150 ಕೃಷಿ ಯಂತ್ರೋಪಕರಣಗಳನ್ನು ವಿತರಿಸಿದರು.
ಕಾರ್ಯಕ್ರಮದಲ್ಲಿ ಲೋಕೊಪಯೋಗಿ ಇಲಾಖೆ ಸಚಿವರಾದ ಸತೀಶ ಜಾರಕಿಹೊಳಿ, ನಗರಾಭಿವೃದ್ಧಿ ಸಚಿವರಾದ ಭೈರತಿ ಸುರೇಶ್, ಸರಕಾರದ ಮುಖ್ಯ ಸಚೇತಕರಾದ ಅಶೋಕ ಪಟ್ಟಣ, ಶಾಸಕರುಗಳಾದ ರಾಜು(ಆಸೀಫ್)ಸೇಠ, ಬಾಬಾಸಾಹೇಬ ಪಾಟೀಲ, ಎನ್.ಎಸ್.ಕೋನರೆಡ್ಡಿ,ವಿಧಾನಪರಿಷತ್ ಸದಸ್ಯರಾದ ಚನ್ನರಾಜ ಹಟ್ಟಿಹೊಳಿ, ಬುಡಾ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಕೃಷಿ ಇಲಾಖೆಯ ಆಯುಕ್ತ ವಾಯ್.ಎಸ್.ಪಾಟೀಲ, ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ರಾಹುಲ್ ಶಿಂಧೆ, ಬೆಳಗಾವಿ ಜಿಲ್ಲಾ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ ಸೇರಿದಂತೆ ಗಣ್ಯರು, ಜನಪ್ರತಿನಿಧಿಗಳು, ರೈತ ಬಾಂಧವರು, ಸಾರ್ವಜನಿಕರು ಉಪಸ್ಥಿತರಿದ್ದರು.