ಕೇಂದ್ರ ಸಂಪುಟ ವಿಸ್ತರಣೆ ವಿಚಾರ; ಪ್ರಹ್ಲಾದ್ ಜೋಶಿ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕೋವಿಡ್ ನಿರ್ವಹಣೆ ವಿಚಾರವಾಗಿ ಕಾಂಗ್ರೆಸ್ ಟೀಕೆಗೆ ಕಿಡಿಕಾರಿರುವ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಕಾಂಗ್ರೆಸ್ ನಾಯಕರು ಹಣ, ಹೆಣದ ಮೇಲೆ ರಾಜಕೀಯ ಮಾಡುತ್ತಿದ್ದಾರೆ. ರಾಜಸ್ತಾನ, ಪಂಜಾಬ್ ನಲ್ಲಿ ವ್ಯಾಕ್ಸಿನ್ ವೇಸ್ಟ್ ಆಗುತ್ತಿದೆ ಈ ಬಗ್ಗೆ ಮಾತನಾಡುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಜೋಶಿ, ಕೇಂದ್ರ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪ್ರತಿಕ್ರಿಯಿಸಿ, ಸಂಪುಟ ವಿಸ್ತರಣೆ ಬಗ್ಗೆ ನನಗೆ ಮಾಹಿತಿಯೇ ಇಲ್ಲ. ಅಂತಹ ಯಾವುದೇ ಚರ್ಚೆಯಾಗಿಲ್ಲ ಎಂದು ಸ್ಪಷ್ಟಪಡಿಸಿದರು.
ಅಗತ್ಯವಿದ್ದಾಗ ಪ್ರಧಾನಿ ಮೋದಿಯವರೇ ಕೇಂದ್ರ ಸಚಿವ ಸಂಪುಟ ವಿಸ್ತರಣೆ ಮಾಡುತ್ತಾರೆ. ಈ ಬಗ್ಗೆ ಅವರೇ ನಿರ್ಧಾರವನ್ನೂ ಕೈಗೊಳ್ಳುತ್ತಾರೆ. ಆದರೆ ಸದ್ಯಕ್ಕೆ ಅಂತಹ ಚರ್ಚೆ ಬಗ್ಗೆ ನನಗೆ ಮಾಹಿತಿಯಿಲ್ಲ ಎಂದರು.
ಇನ್ನು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಬದಲಾವಣೆ ಬಗ್ಗೆಯೂ ಮಾತನಾಡಿದ ಪ್ರಹ್ಲಾದ್ ಜೋಶಿ, ಯೋಗಿ ಆದಿತ್ಯನಾಥ್ ಓರ್ವ ಒಳ್ಳೆಯ ನಾಯಕ. ಯುಪಿಯಲ್ಲಿ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಅವರ ಬದಲಾವಣೆ ಊಹಾಪೋಹ. ಆದಿತ್ಯನಾಥ್ ಅವರು ಪ್ರಧಾನಿ ಮೋದಿಯವರನ್ನು ಭೇಟಿಯಾಗಿದ್ದಾರೆ ಅಷ್ಟಕ್ಕೇ ಬದಲಾವಣೆ ಎಂಬ ಚರ್ಚೆ ನಡೆಯುತ್ತಿದೆ ಅಷ್ಟೇ ಎಂದು ತಿಳಿಸಿದರು.




