Kannada NewsKarnataka NewsLatest

*ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ರದ್ದುಗೊಳಿಸಿದ ಕರ್ನಾಟಕ ಸರ್ಕಾರ*

ಪ್ರಗತಿವಾಹಿನಿ ಸುದ್ದಿ: ನಗರ ಆರೋಗ್ಯ ಸೇವೆಗಳ ಪುನರ್‌ವ್ಯವಸ್ಥೆಯ ಭಾಗವಾಗಿ, ಕರ್ನಾಟಕ ಸರ್ಕಾರವು ಮಹತ್ವದ ತೀರ್ಮಾನ ಕೈಗೊಂಡಿದೆ. ದಶಕಗಳಿಂದ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುತ್ತಿದ್ದ ನಗರ ಕುಟುಂಬ ಕಲ್ಯಾಣ ಕೇಂದ್ರಗಳನ್ನು ಸಂಪೂರ್ಣವಾಗಿ ರದ್ದುಗೊಳಿಸುವ ಆದೇಶ ಹೊರಡಿಸಲಾಗಿದೆ.

ಜನನ ದರ ಇಳಿಮುಖ, ಫಲವತ್ತತೆ ದರ ಸ್ಥಿರೀಕರಣ ಮಟ್ಟಕ್ಕಿಂತ ಕಡಿಮೆ, ತಾಯಿ-ಮಕ್ಕಳ ಮರಣ ಪ್ರಮಾಣದಲ್ಲಿ ಕುಸಿತ—ಈ ಎಲ್ಲಾ ಅಂಶಗಳನ್ನು ಗಮನದಲ್ಲಿಟ್ಟುಕೊಂಡು, ಸರ್ಕಾರವು ಪ್ರತ್ಯೇಕ ಕುಟುಂಬ ಕಲ್ಯಾಣ ಕೇಂದ್ರಗಳ ಅವಶ್ಯಕತೆ ಇಲ್ಲವೆಂದು ಘೋಷಿಸಿದೆ.

ಈ ನಿರ್ಧಾರವು ಆರೋಗ್ಯ ವ್ಯವಸ್ಥೆಯ ದಿಕ್ಕು ಬದಲಾವಣೆಯ ಸಂಕೇತವಾಗಿದ್ದು, ಮುಂದಿನ ದಿನಗಳಲ್ಲಿ ಎಲ್ಲಾ ಸೇವೆಗಳು ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಮೂಲಕವೇ ಒದಗಿಸಲ್ಪಡುವುದಾಗಿ ಸರ್ಕಾರ ಸ್ಪಷ್ಟಪಡಿಸಿದೆ.ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರ ಪ್ರಸ್ತಾವನೆಯ ಪರಿಶೀಲನೆಯ ನಂತರ, ಸರ್ಕಾರವು ಜುಲೈ 31, 2026 ರಿಂದ ಈ ಕೇಂದ್ರಗಳನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲು ಆದೇಶ ಹೊರಡಿಸಿದೆ.

Home add -Advt

1952ರಲ್ಲಿ ಆರಂಭವಾದ ರಾಷ್ಟ್ರೀಯ ಕುಟುಂಬ ಕಲ್ಯಾಣ ಕಾರ್ಯಕ್ರಮದಡಿ, ಮಹಿಳೆಯರ ಸಂತಾನೋತ್ಪತ್ತಿ ಆರೋಗ್ಯ ಮತ್ತು ಮಕ್ಕಳ ಆರೋಗ್ಯ ಕಾಪಾಡಲು ನಗರ ಪ್ರದೇಶಗಳಲ್ಲಿ ಸ್ವಯಂ ಸೇವಾ ಸಂಸ್ಥೆಗಳ ಸಹಕಾರದೊಂದಿಗೆ ಕೇಂದ್ರಗಳನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ 22 ಕೇಂದ್ರಗಳಲ್ಲಿ 16 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಉಳಿದ 6 ಸ್ವಯಂಸೇವಾ ಸಂಸ್ಥೆಗಳ ಕಟ್ಟಡಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದವು.

ಆದರೆ, ಕಳೆದ ಆರು ವರ್ಷಗಳಲ್ಲಿ ನಡೆದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ವರದಿಯಂತೆ ರಾಜ್ಯದಲ್ಲಿ ಫಲವತ್ತತೆ ದರವು 1.7/1.8 ಮಟ್ಟಕ್ಕಿಂತ ಕಡಿಮೆಯಾಗಿದೆ. ಜನನ ದರ ಇಳಿಮುಖವಾಗಿದ್ದು, ತಾಯಿ-ಮಕ್ಕಳ ಮರಣ ಪ್ರಮಾಣವೂ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಪ್ರತ್ಯೇಕ ಕುಟುಂಬ ಕಲ್ಯಾಣ ಕೇಂದ್ರಗಳ ಅವಶ್ಯಕತೆ ಇಲ್ಲವೆಂದು ಸರ್ಕಾರ ನಿರ್ಧರಿಸಿದೆ.

ಕೇಂದ್ರ ಸರ್ಕಾರವು 2012ರ ಆದೇಶದ ಮೂಲಕ ಸ್ವಯಂ ಸೇವಾ ಸಂಸ್ಥೆಗಳ ಸಿಬ್ಬಂದಿಗಳಿಗೆ ನೀಡುತ್ತಿದ್ದ Grant-in-aid ಮರುಪಾವತಿಯನ್ನು ಸ್ಥಗಿತಗೊಳಿಸಿದ್ದರಿಂದ, ರಾಜ್ಯ ಸರ್ಕಾರವೂ ಸಹಾಯಧನ ಬಿಡುಗಡೆ ನಿಲ್ಲಿಸಿದೆ. ಆದೇಶದ ಪ್ರಕಾರ, ಮಾರ್ಚ್ 2026ರಿಂದ ಜುಲೈ 2026ರವರೆಗೆ ಬಾಕಿ ವೇತನವನ್ನು ರೂ. 1378.46 ಲಕ್ಷ ಅನುದಾನದಿಂದ ಪಾವತಿಸಲು ಅನುಮೋದನೆ ನೀಡಲಾಗಿದೆ.

ಜುಲೈ 31ರ ಅಪರಾಹ್ನದಿಂದ ನಗರ ಕುಟುಂಬ ಕಲ್ಯಾಣ ಕೇಂದ್ರಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ವೈದ್ಯರು ಮತ್ತು ಸಿಬ್ಬಂದಿಗಳನ್ನು ಕರ್ತವ್ಯದಿಂದ ವಿಮೋಚನೆಗೊಳಿಸಲು ಸರ್ಕಾರ ಆದೇಶ ಹೊರಡಿಸಿದೆ.

Related Articles

Back to top button