*ಜುಲೈ 1ರಿಂದ ಅಕ್ಕಿ ಕೊಡದಿದ್ದರೆ ಸರ್ಕಾರದ ವಿರುದ್ಧ ಬಿಜೆಪಿ ಹೋರಾಟ; ಮಾಜಿ ಸಿಎಂ ಬೊಮ್ಮಾಯಿ ಎಚ್ಚರಿಕೆ*

ನೀರು ಕೊಡದ ಸರ್ಕಾರದಿಂದ ಏನು ಪ್ರಯೋಜನ ಎಂದು ಪ್ರಶ್ನೆ
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಕಾಂಗ್ರೆಸ್ ಸರ್ಕಾರದ ಜನಪ್ರಿಯತೆ ಬಹಳ ದಿನ ಉಳಿಯುವುದಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಇಂದು ಹುಬ್ಬಳ್ಳಿಯ ಛಬ್ಬಿ ಗ್ರಾಮದಲ್ಲಿ ನೂತನ ಪ್ರೌಡ ಶಾಲೆ ಕಟ್ಟಡದ ಭೂಮಿ ಪೂಜೆ ನೇರವೇರಿಸಿದ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.
ಅಕ್ಕಿ ವಿಷಯವಾಗಿ ಕಾಂಗ್ರೆಸ್ ಸರ್ಕಾರ ಪರ್ಯಾಯ ವ್ಯವಸ್ಥೆ ಮಾಡಬೇಕಿತ್ತು. ಇದೀಗ ಅಕ್ಕಿ ಬರಲ್ಲ ಅಂತ ಕುಂಟು ನೆಪ ಹೇಳುತ್ತಿದ್ದಾರೆ. ಇದು ಕಾಂಗ್ರೆಸ್ ಗ್ಯಾರಂಟಿಯಿಂದ ಹಿಂದೆ ಹೋದಂತೆ ಅರ್ಥ. ಇದೀಗ ಛತ್ತೀಸಗಡದಿಂದ ಅಕ್ಕಿ ತರುತ್ತೇವೆ ಎನ್ನುತ್ತಿದ್ದಾರೆ. ನಮಗೆ ಬಡ ಜನರಿಗೆ ಒಳ್ಳೆಯದಾದರೆ ಸಾಕು ಎಂದರು.
ಅಕ್ಕಿಯನ್ನು ಎಲ್ಲಿಂದ ತೆಗೆದುಕೊಳ್ಳಬೇಕು, ಹೇಗೆ ತೆಗೆದುಕೊಳ್ಳಬೇಕು ಎನ್ನುವ ಪ್ರಶ್ನೆ ಇದೆ. ರಾಜ್ಯದ ರೈತರು ಅಕ್ಕಿ ಕೊಡುವುದಕ್ಕೆ ಮುಂದೆ ಬಂದರೆ ಅದನ್ನು ಖರೀದಿ ಮಾಡಬೇಕು. ಬಿಜೆಪಿಯವರೇ ಕೊಡಸಿ ಎನ್ನುವುದು ಸರಿಯಲ್ಲ. ಒಂದು ವೇಳೆ ಒಂದನೇ ತಾರೀಖಿಗೆ ಅಕ್ಕಿ ಕೊಡದೆ ಹೋದರೆ, ನಾವು ಪ್ರತಿಭಟನೆ ಮಾಡುತ್ತೇವೆ ಎಂದರು.
ಎಲ್ಲಕ್ಕಿಂತ ಮುಖ್ಯವಾಗಿ ಕಳೆದ ವಾರ ನಾನು ಮುಖ್ಯಮಂತ್ರಿ ಅವರ ಗಮನಕ್ಕೆ ತಂದಿದ್ದೇನೆ. ರಾಜ್ಯದಲ್ಲಿ ಬರಗಾಲ ಇದೆ. 500 ಹಳ್ಳಿಗೆ ಕುಡಿಯುವ ನೀರಿನ ಸಮಸ್ಯೆ ಇದೆ. ಸರ್ಕಾರ ಇದನ್ನು ಗಂಬೀರವಾಗಿ ಪರಿಗಣಿಸುತ್ತಿಲ್ಲ. ಕೇವಲ ವಿಡಿಯೋ ಕಾನ್ಫರೆನ್ಸ್ ಮಾಡಿ ಸುಮ್ಮನಾಗಿದೆ. ಬರಗಾಲ ಇದ್ದ ಕಡೆ ಟಾಸ್ಕಪೋರ್ಸ್ ರಚನೆ ಮಾಡಬೇಕು ಎಂದರು.
ಗ್ಯಾರಂಟಿ ಭ್ರಮೆ ಹುಟ್ಟಿಸಿದ್ದು ನೋಡಿದರೆ, ಸರಕಾರದ ಜನ ಪ್ರೀಯತೆ ಬಹಳ ದಿನ ಉಳಿಯಲ್ಲ. ನೀರು ಕೊಡದ ಸರಕಾರ ತಗೆದುಕೊಂಡು ಏನು ಮಾಡಬೇಕು ಎಂದರು.ಇನ್ನು ಇದೇ ವೇಳೆ ಅಧಿವೇಶನಕ್ಕೂ ಮುಂಚೆ ವಿಪಕ್ಷ ನಾಯಕನ ಆಯ್ಕೆ ಆಗುತ್ತದೆ ಎಂದರು.




