
ಪ್ರಗತಿವಾಹಿನಿ ಸುದ್ದಿ: ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಕಾವೇರಿ ನದಿ ನೀರು ನಿಯಂತ್ರಣ ಸಮಿತಿ (CWRC) ಆದೇಶವನ್ನೇ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CWMA) ಎತ್ತಿ ಹಿಡಿದಿದ್ದು, ಪ್ರತಿದಿನ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಹರಿಸುವಂತೆ ಆದೇಶ ಹೊರಡಿಸಿದೆ. CWMA ಆದೇಶ ಹೊರ ಬೀಳುತ್ತಿದ್ದಂತೆ ರೈತರು ಹಾಗೂ ಕನ್ನಡಪರ ಸಂಘಟನೆಗಳ ಆಕ್ರೋಶ ಮತ್ತೆ ಭುಗಿಲೆದ್ದಿದೆ.
ಪ್ರಾಧಿಕಾರದ ಆದೇಶದ ಬೆನ್ನಲ್ಲೇ ಮಾತನಡಿರುವ ಕನ್ನಡಪರ ಹೋರಾಟಗಾರ ವಾಟಾಳ್ ನಾಗರಾಜ್ ಅಖಂಡ ಕರ್ನಾಟಕ ಬಂದ್ ಮಾಡಿ ಹೋರಾಟ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.
ಕಾವೇರಿ ನದಿ ನೀರು ವಿಚಾರದಲ್ಲಿ CWRC, CWMA ಆದೇಶ ಸರಿಯಿಲ್ಲ. ರಾಜ್ಯದಲ್ಲಿ ತೀವ್ರ ಬರಗಾಲವಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ನೀರಿಲ್ಲ. ಇಲ್ಲಿನ ರೈತರು ಸಂಕಷ್ಟದಲ್ಲಿದ್ದಾರೆ. ಇಂತಹ ಸಂದರ್ಭದಲ್ಲಿ ಹನಿ ನೀರು ಬಿಡಲು ಸಾಧ್ಯವಿಲ್ಲ. ಹೀಗಿರುವಾಗ ಪ್ರತಿ ದಿನ ತಮಿಳುನಾಡಿಗೆ 3,500 ಕ್ಯೂಸೆಕ್ ನೀರು ಬಿಡಲು ಆದೇಶ ನೀಡಿದರೆ ಹೇಗೆ ಸಾಧ್ಯ? ಇದು ಖಂಡನೀಯ. ಉಗ್ರ ಹೋರಾಟ ಮಾಡಬೇಕಾಗುತ್ತದೆ ಎಂದರು ಗುಡುಗಿದರು.
ನಾಳೆ ರೈತರು ಹಾಗೂ ಕನ್ನಡಪರ ಸಂಘಟನೆಗಳ ಸಭೆ ಕರೆಯಲಾಗಿದೆ. ಸಭೆಯಲ್ಲಿ ಅಖಂಡ ಕರ್ನಾಟಕ ಬಂದ್ ದಿನಾಂಕ ನಿಗದಿ ಮಾಡುತ್ತೇವೆ. ಇಡೀ ದಿನ ಸಂಪೂರ್ಣ ಕರ್ನಾಟಕ ಬಂದ್ ಮಾಡಿ ಹೋರಾಟ ನಡೆಸುತ್ತೇವೆ ಎಂದು ಹೇಳಿದರು.
ಪ್ರತಿ ಬಾರಿ ಕಾವೇರಿ ನದಿ ನೀರು ವಿಚಾರದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗುತ್ತಿದೆ. ನಮ್ಮವರು ಸಭೆಯಲ್ಲಿ ಬಾಯಿ ಬಿಡುತ್ತಿಲ್ಲ. ಸಮರ್ಪಕವಾಗಿ ವಾದ ಮಂಡಿಸಿ ಮನವರಿಕೆ ಮಾಡುತ್ತಿಲ್ಲ. ಪ್ರಾಧಿಕಾರದ ಮುಂದೆ ಅವಕಾಶ ಸಿಕ್ಕರೂ ಇವರು ಬಾಯಿಬಿಡುತ್ತಿಲ್ಲವೆಂದರೆ ಹೇಗೆ? ರಾಜ್ಯದ ರೈತರಿಗೆ, ಜನರಿಗೆ ಅನ್ಯಾಯವಾಗುತ್ತಿದೆ. ಈ ಬಗ್ಗೆ ಉಗ್ರ ಹೋರಾಟ ನಡೆಸಲೇಬೇಕು ಎಂದು ಕಿಡಿಕಾರಿದರು.


