ವಿಧಾನಪರಿಷತ್ ಚುನಾವಣೆ; ಹೆಚ್ ವಿಶ್ವನಾಥ್ ಗೆ ಕೈ ತಪ್ಪಿದ ಬಿಜೆಪಿ ಟಿಕೆಟ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಧಾನಪರಿಷತ್ ಚುನಾವಣೆಗೆ ಮಾಜಿ ಸಚಿವ ಹೆಚ್ ವಿಶ್ವನಾಥ್ ಗೆ ಬಿಜೆಪಿ ಟಿಕೆಟ್ ಕೈತಪ್ಪಿದೆ. ರಾಜ್ಯ ನಾಯಕರು ನಾಲ್ಕು ಜನರ ಹೆಸರನ್ನು ಅಂತಿಮಗೊಳಿಸಿ ದೆಹಲಿಗೆ ಕಳುಹಿಸಿದ್ದರು. ಆದರೆ ಇದೀಗ ನನ್ನ ಹೆಸರನ್ನು ಕೈ ಬಿಡಲಾಗಿದೆ. ಇದರ ಹಿಂದೆ ಯಾರ ಕೈವಾಡವಿದೆ ಎಂಬುದು ಗೊತ್ತಿಲ್ಲ. ಸಿಎಂ ಯಡಿಯೂರಪ್ಪ ಕಡೇ ಘಳಿಗೆ ವರೆಗೂ ಪ್ರಯತ್ನಿಸಿದ್ದರು ಎಂದು ವಿಶ್ವನಾಥ್ ಬೇಸರ ವ್ಯಕ್ತಪಡಿಸಿದ್ದಾರೆ.
ವಿಧಾನ ಪರಿಷತ್ ಚುನಾವಣೆಗೆ ಬಿಜೆಪಿ ಟಿಕೆಟ್ ಹಂಚಿಕೆಯಾಗಿದ್ದು, ಮಾಜಿ ಸಚಿವ ಹೆಚ್ ವಿಶ್ವನಾಥ್ ಗೆ ಟಿಕೆಟ್ ಕೈತಪ್ಪಿದ್ದು, ಎಂಟಿಬಿ ನಾಗರಾಜ್, ಆರ್.ಶಂಕರ್, ಸುನಿಲ್ ವಲ್ಯಾಪುರೆ ಮತ್ತು ಪ್ರತಾಪ್ ಸಿಂಹ ನಾಯಕ್ ನಾಲ್ವರಿಗೆ ಟಿಕೆಟ್ ಸಿಕ್ಕಿದೆ. ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ರಾಜ್ಯ ನಾಯಕರು ನಾಲ್ಕು ಜನರ ಹೆಸರನ್ನು ಅಂತಿಮಗೊಳಿಸಿ ದೆಹಲಿಗೆ ಕಳುಹಿಸಿದ್ದರು. ಆದರೆ ದೆಹಲಿಯಲ್ಲಿ ಏನು ನಡೆಯಿತು ನನಗೆ ಗೊತ್ತಿಲ್ಲ. ನನ್ನ ಹೆಸರು ಕೈ ಬಿಡಲಾಗಿದೆ ಎಂದರು.
ಇಂತಹ ಸಾಕಷ್ಟು ಸಂಕಷ್ಟಗಳನ್ನ ಎದುರಿಸಿಯೇ ನಾನು ಈ ಹಂತಕ್ಕೆ ಬಂದಿದ್ದೇನೆ. ನನಗೆ ಇದು ಹೊಸತೇನು ಅಲ್ಲ. ಮುಖ್ಯಮಂತ್ರಿ ಯಡಿಯೂರಪ್ಪನವರ ಮೇಲೆ ಈಗಲೂ ನಂಬಿಕೆ ಇದೆ. ಕಾದು ನೋಡೋಣ. ಟಿಕೆಟ್ ಸಿಕ್ಕಿದ ನಾಲ್ವರಿಗೂ ಅಭಿನಂದನೆಗಳು ಎಂದು ತಿಳಿಸಿದ್ದಾರೆ.
ವೈಯಕ್ತಿಕವಾಗಿ ನನಗೆ ಬೇಸರವಿಲ್ಲ. ಆದರೆ ನನ್ನಂಥ ಒಬ್ಬ ಹಿರಿಯ ಹಿಂದುಳಿದ ನಾಯಕನಿಗೆ ಯಾಕೆ ಟಿಕೆಟ್ ತಪ್ಪಿತು ಎಂಬ ನೋವಿದೆ. ಈಗಾಗಲೇ ಹಲವು ನೋವುಗಳನ್ನು ನುಂಗಿಕೊಂಡು ಬಂದವನು. ಈಗ ಎಂಎಲ್ಸಿ ಟಿಕೆಟ್ ಸಿಗಲಿಲ್ಲವೆಂದು ಹತಾಶನಾಗಿಲ್ಲ. ನನ್ನ ಧ್ವನಿ ಅಡಗಿಸಲು ಯಾರಿಂದಲೂ ಸಾಧ್ಯವಿಲ್ಲ. ಸಿಎಂ ಯಡಿಯೂರಪ್ಪ ನಮ್ಮ ನಾಯಕರು. ಅವರ ಮೇಲೆ ಈಗಲೂ ವಿಶ್ವಾಸವಿದೆ ಎಂದು ಹೇಳಿದರು.




