
ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ವಿಧಾನಸೌಧಕ್ಕೆ ಆಗಮಿಸಿ ಮತದಾನ ಮಾಡುತ್ತಿದ್ದಾರೆ.
ಮತದಾನದ ಬಳಿಕ ಮಾತನಾಡಿದ ಎಸ್.ಟಿ. ಸೋಮಶೇಖರ್, ತಾವೂ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.
ನಾನು ನನ್ನ ಆತ್ಮಸಾಕ್ಷಿಯ ಮತವನ್ನು ಕಾಂಗ್ರೆಸ್ಗೆ ಚಲಾಯಿಸಿದ್ದೇನೆ. ನಿನ್ನೆವರೆಗೂ ಮೂರೂ ಪಕ್ಷಗಳ ಯಾವ ನಾಯಕರೂ ನನ್ನನ್ನು ಸಂಪರ್ಕಿಸಿರಲಿಲ್ಲ. ಆದರೆ ನಿನ್ನೆ ಸಂಜೆ ಸ್ವತಃ ಮುಖ್ಯಮಂತ್ರಿಗಳು ನನ್ನನ್ನು ಸಂಪರ್ಕಿಸಿ, ರೆಸಾರ್ಟ್ಗೆ ಕರೆಸಿಕೊಂಡು ಕಾಂಗ್ರೆಸ್ಗೆ ಮತ ಹಾಕುವಂತೆ ಮನವಿ ಮಾಡಿದ್ದರು.
ನನ್ನ ಕ್ಷೇತ್ರದ ಅಭಿವೃದ್ಧಿಗೋಸ್ಕರ ನಾನು ಕಾಂಗ್ರೆಸ್ಗೆ ಮತ ನೀಡಿದ್ದೇನೆ. ನೂರಕ್ಕೆ ನೂರರಷ್ಟು ಕಾಂಗ್ರೆಸ್ನ ಐದೂ ಅಭ್ಯರ್ಥಿಗಳು ಗೆಲ್ಲುವುದು ನಿಶ್ಚಿತ. ಈ ಹಿಂದೆ ನಾವು ಬಿಜೆಪಿಗೆ ಹೋಗಿದ್ದಕ್ಕೇ ಅಲ್ಲಿ ಸರ್ಕಾರ ಬಂದಿದ್ದು, ನಮ್ಮಿಂದಲೇ ಬಿಜೆಪಿಯವರಿಗೆ ಅಧಿಕಾರ ಸಿಕ್ಕಿದ್ದು ಎಂಬುದನ್ನು ಯಾರೂ ಮರೆಯಬಾರದು ಎಂದು ಕಿಡಿಕಾರಿದ್ದಾರೆ.
ಇದೇ ವೇಳೆ, ಮತ್ತೊಬ್ಬ ಬಿಜೆಪಿ ಉಚ್ಚಾಟಿತ ಶಾಸಕ ಶಿವರಾಂ ಹೆಬ್ಬಾರ್ ಕೂಡ ಕಾಂಗ್ರೆಸ್ ಪರವಾಗಿಯೇ ಮತ ಚಲಾಯಿಸಿದ್ದಾರೆ ಎಂದು ಹೇಳಲಾಗುತ್ತಿದೆ.




