*ಬಿ.ಎಲ್.ಸಂತೋಷ್ ಭಾಷಣದ ವೇಳೆ ವೇದಿಕೆಗೆ ಎಂಟ್ರಿಕೊಟ್ಟ ಪೊಲೀಸರು; ಕಾರ್ಯಕ್ರಮ ನಿಲ್ಲಿಸುವಂತೆ ಸೂಚನೆ*

ಪ್ರಗತಿವಾಹಿನಿ ಸುದ್ದಿ; ಕೊಪ್ಪಳ: ವಿಧಾನಸಭಾ ಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಮತ್ತೊಮ್ಮೆ ಅಧಿಕಾರದ ಚುಕ್ಕಾಣಿ ಹಿಡಿಯುವ ನಿಟ್ಟಿನಲ್ಲಿ ಆಡಳಿತಾರೂಢ ಬಿಜೆಪಿ ಕಸರತ್ತು ನಡೆಸಿದೆ. ಬಿಜೆಪಿ ಕಾರ್ಯಕರ್ತರ ಡಿಜಿಟಲ್ ಸಮಾವೇಶದ ಬಗ್ಗೆ ಮಾಹಿತಿ ನೀಡುವ ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್.ಸಂತೋಷ್ ಭಾಷಣದ ವೇಳೆ ಪೊಲೀಸರು ಎಂಟ್ರಿ ಕೊಟ್ಟು ಭಾಷಣ ನಿಲ್ಲುಸುವಂತೆ ಹೇಳಿದ ಘಟನೆ ಕೊಪ್ಪಳದ ಗಂಗಾವತಿಯಲ್ಲಿ ನಡೆದಿದೆ.
ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ ಬಿ.ಎಲ್.ಸಂತೋಷ್ ಭಾಷಣ ಮಾಡುತ್ತಿದ್ದ ಸಂದರ್ಭದಲ್ಲಿ ಚುನಾವಣಾಧಿಕಾರಿಗಳು ಹಾಗೂ ಪೊಲೀಸರು ವೇದಿಕೆ ಮೇಲೆ ಆಗಮಿಸಿದ್ದು, ಭಾಷಣವನ್ನು ನಿಲ್ಲಿಸುವಂತೆ ಸೂಚಿಸಿದ್ದಾರೆ.
ಬಿ.ಎಲ್.ಸಂತೋಷ್, ಚುನಾವಣಾಧಿಕಾರಿಗಳಿಂದ ಪರವಾನಿಗಿ ಪಡೆದ ಸಮಯ ಮೀರಿ ಭಾಷಣ ಮುಂದುವರೆಸಿದ್ದರು. ಈ ಹಿನ್ನೆಲೆಯಲ್ಲಿ ಪೊಲೀಸರು ವೇದಿಕೆಗೆ ಆಗಮಿಸಿ ಭಾಷಣ ನಿಲ್ಲಿಸಿದ್ದಾರೆ ಎನ್ನಲಾಗಿದೆ.
ಭಾಷಣದ ವೇಳೆ ನೋಟೀಸ್ ನೀಡಿದರೆ ನೀವು ಹೆದರಬೇಡಿ ನಾನು ಎದುರಿಸುತ್ತೇನೆ ಎಂದು ಕಾರ್ಯಕರ್ತರಿಗೆ ಬಿ.ಎಲ್.ಸಂತೋಷ್ ಹೇಳಿದ್ದಾರೆ. ಅಧಿಕಾರಿಗಳು ಬಿ.ಎಲ್.ಸಂತೋಷ್ ಅವರಿಗೆ ಕಾರ್ಯಕ್ರಮ ನಿಲ್ಲಿಸುವಂತೆ ತಿಳಿಸಿದ್ದಾರೆ. ಅಧಿಕಾರಿಗಳ ಸೂಚನೆ ಮೇರೆಗೆ ಭಾಷಣ ನಿಲ್ಲಿಸಿ ಕಾರ್ಯಕ್ರಮ ಮುಗಿಸಿ ತೆರಳಿದ್ದಾರೆ.




