
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೊರೊನಾ ಅಟ್ಟಹಾಸ ಹೆಚ್ಚುತ್ತಿದ್ದು, ರಾಜ್ಯದ ಶಕ್ತಿಕೇಂದ್ರ ವಿಧಾನಸೌಧಕ್ಕೂ ಕೊರೊನಾ ಮಹಾಮಾರಿ ವಕ್ಕರಿಸಿದೆ. ವಿಧಾನಸೌಧದ ಸಚಿವಾಲಯ ಹಾಗೂ ಇತರೆ ಇಲಾಖೆಯ ಐದಾರು ಸಿಬ್ಬಂದಿಯಲ್ಲಿ ಕೊರೋನಾ ಪಾಸಿಟಿವ್ ಕಾಣಿಸಿಕೊಂಡಿದೆ.
ಸಚಿವಾಲಯದ ಪೊಲೀಸ್ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದೆ. ವಿಧಾನಸೌಧದ ಎ ಎಸ್ ಐ ಮಹಾಮಾರಿಗೆ ಬಲಿಯಾಗಿದ್ದಾರೆ. ಹೆಚ್ಚುತ್ತಿರುವ ಪ್ರಕರಣಗಳಿಂದಾಗಿ ನೌಕರರಲ್ಲಿ ಆತಂಕವುಂಟಾಗಿದ್ದು, ವಿಧಾನಸೌಧ ಹಾಗೂ ವಿಕಾಸಸೌಧದ ಎಲ್ಲ ಸಿಬ್ಬಂದಿಗೆ ಕೊವಿಡ್ ಪರೀಕ್ಷೆ ಮಾಡಲಾಗುತ್ತಿದೆ. ಇಡೀ ವಿಧಾನಸೌಧಕ್ಕೆ ಸ್ಯಾನಿಟೈಸ್ ಮಾಡಲಾಗುತ್ತಿದೆ.
ಮೊದಲ ಹಂತವಾಗಿ ವಿಧಾನಸೌಧದ ಮೊದಲ ಮಹಡಿಯಲ್ಲಿ ಸ್ಯಾನಿಟೈಸ್ ಮಾಡುವ ಪ್ರಕ್ರಿಯೆ ಮುಂದುವರೆದಿದೆ. ಖಾಸಗಿ ಕಂಪನಿಯ ಸುಮಾರು 20 ಕ್ಕೂ ಹೆಚ್ಚು ಸಿಬ್ಬಂದಿ ಸ್ಯಾನಿಟೈಸ್ ಮಾಡುವ ಕಾರ್ಯ ಮಾಡುತ್ತಿದ್ದಾರೆ.