
ಪ್ರಗತಿವಾಹಿನಿ ಸುದ್ದಿ: ಮನೆಯ ಮೇಲ್ಛಾವಣಿ ಕುಸಿದು ಬಿದ್ದು ಮಹಿಳೆ ಸಾವನ್ನಪ್ಪಿರುವ ದಾರುಣ ಘಟನೆ ನಡೆದಿದೆ.
ವಿಜಯಪುರ ಜಿಲ್ಲೆ ನಿಡಗುಂದಿ ಪಟ್ಟಣದ ಗೌರೀಶ್ವರ ದೇವಸ್ಥಾನ ಬಳಿ ಈ ಘಟನೆ ನಡೆದಿದೆ. ಮಹಾದೇವಿ ವಾರದ (55) ಮೃತ ಮಹಿಳೆ. ಮೊನ್ನೆ ಸುರಿದ ಭಾರಿ ಮಳೆಗೆ ಮನೆಯ ಮೇಲ್ಛಾವಣಿ ಸಂಪೂರ್ಣ ನೆಂದು ಹೋಗಿತ್ತು. ಇದರಿಂದಾಗಿ ಮನೆ ಮೇಲ್ಛಾವಣಿ ಏಕಾಏಕಿ ಕುಸಿದು ಅನಾಹುತ ಸಂಭವಿಸಿದೆ.
ಮನೆಯಲ್ಲಿ ಮಹಾದೇವಿ ಮಲಗಿದ್ದಾಗ, ಇಂದು ನಸುಕಿನ ಜಾವ ಮೇಲ್ಛಾವಣಿ ಕುಸಿದು ಬಿದ್ದಿದ್ದು, ಮಹಾದೇವಿ ಜೀವಂತ ಸಮಾಧಿಯಾಗಿದ್ದಾರೆ.
ಮನೆಯ ಹೊರಗೆ ಪತಿ ಶಿವಾನಂದ ಮಲಗಿದ್ದರು. ಇದರಿಂದ ಅವರು ಪ್ರಾಣಾಪಾಯದಿಂದ ಪರಾಗಿದ್ದಾನೆ. ಸ್ಥಳಕ್ಕೆ ನಿಡಗುಂದಿ ಪೊಲೀಸರು ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಿಡಗುಂದಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
