Kannada NewsKarnataka NewsLatest
ಬೆಳಗಾವಿ ಆಸ್ಪತ್ರೆ ಎದುರು ಹಿಂಸಾಚಾರ: ಬೆಂಕಿ, ಕಲ್ಲು ತೂರಾಟ

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ – ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ನಿಧನರಾದ ಹಿನ್ನೆಲೆಯಲ್ಲಿ ಅವರ ಸಂಬಂಧಿಕರು ಅಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಲ್ಲದೆ, ಕಲ್ಲು ತೂರಾಟ ನಡೆಸಿದ್ದಾರೆ.
ಇಲ್ಲಿಯ ಜಿಲ್ಲಾ ಆಸ್ಪತ್ರೆ ಬಳಿ ಈ ಘಟನೆ ನಡೆದಿದೆ. 19ರಂದು ಆಸ್ಪತ್ರೆಗೆ ದಾಖಲಾಗಿದ್ದ ರೋಗಿಯೊಬ್ಬ ಇಂದು ಸಂಜೆ ಮೃತರಾದ ಸುದ್ದಿ ಹರಡುತ್ತಿದ್ದಂತೆ ಆಸ್ಪತ್ರೆ ಎದುರು ಜಮಾಯಿಸಿದ ಜನರು ಗದ್ದಲ ಆರಂಭಿಸಿದ್ದಾರೆ. ಅಂಬುಲೆನ್ಸ್ ಗೆ ಬೆಂಕಿ ಹಚ್ಚಿದ್ದಲ್ಲದೆ ಕಲ್ಲು ತೂರಾಟ ನಡೆಸಿದ್ದಾರೆ. ಅಂಬುಲೆನ್ಸ್ ದಗದಗ ಹೊತ್ತಿ ಉರಿದಿದೆ. ಈ ವೇಳೆ ಆಸ್ಪತ್ರೆ ಬಳಿ ನಿಲ್ಲಿಸಲಾಗಿದ್ದ ಹಲವು ವಾಹನಗಳು ಜಖಂಗೊಂಡಿವೆ.
ಉದ್ರಿಕ್ತರು ಪೊಲೀಸರ ಮೇಲೂ ಕಲ್ಲು ತೂರಾಟ ನಡೆಸಿದ್ದಾರೆ. ವೈದ್ಯರು ಹಾಗೂ ಆಸ್ಪತ್ರೆ ಸಿಬ್ಬಂದಿ ಮೇಲೂ ಹಲ್ಲೆಗೆ ಯತ್ನಿಸಿದ್ದಾರೆ. ತಕ್ಷಣ ನಗರದ ವಿವಿಧ ಭಾಗಗಳಿಂದ ಹೆಚ್ಚಿನ ಪೊಲೀಸರನ್ನು ಸ್ಥಳಕ್ಕೆ ಕರೆಸಲಾಗಿದೆ. ಪರಿಸ್ಥಿತಿ ಇನ್ನೂ ತಿಳಿಯಾಗಿಲ್ಲ. ಭಾರಿ ಪ್ರಮಾಣದಲ್ಲಿ ಬಂದೋಬಸ್ತ್ ಏರ್ಪಡಿಸಲಾಗಿದೆ.




